ಮಹಿಳೆ ಸಾಧನೆಗೆ ನಿಂತರೆ ಕೊನೆಯೇ ಇಲ್ಲ: ನ್ಯಾ. ಪಂಚಾಕ್ಷರಿ

KannadaprabhaNewsNetwork |  
Published : Mar 19, 2026, 01:45 AM IST
17ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೇಟಿ ಬಜಾವೋ - ಬೇಟಿ ಪಡಾವೋ ಅಭಿಯಾನದಡಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎಂ.ಪಂಚಾಕ್ಷರಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಲ್ಲ. ವರ್ಷದ 365 ದಿನಗಳು ಮಹಿಳೆಯರ ದಿನವೇ ಆಗಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ.

ಕನ್ನಡಪ್ರಭ ವಾರ್ತೆ ರಾಮನಗರ

ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಮುಂಚೂಣಿಯಲ್ಲಿದ್ದು, ಸಾಧನೆ ಮಾಡಲು ನಿಂತರೆ ಅದಕ್ಕೆ ಕೊನೆ ಎಂಬುದೇ ಇರುವುದಿಲ್ಲ, ಮಹಿಳೆಯರ ಸಾಧನೆಯನ್ನು ಜಗತ್ತಿಗೆ ತೋರಿಸಲು ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಪಂಚಾಕ್ಷರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ಜಿಲ್ಲಾ ವಕೀಲರ ಸಂಘದ ವತಿಯಿಂದ ಬೇಟಿ ಬಜಾವೋ - ಬೇಟಿ ಪಡಾವೋ ಅಭಿಯಾನದಡಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಲ್ಲ. ವರ್ಷದ 365 ದಿನಗಳು ಮಹಿಳೆಯರ ದಿನವೇ ಆಗಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರೆ ಸಮಾಜಕ್ಕೆ ಅವರ ಕೊಡುಗೆ ಅಪಾರ. ಆದ್ದರಿಂದ ಯಾವುದೇ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಪುರುಷನಿಗೆ ಸರಿಸಮಾನವಾದ ಹಕ್ಕುಗಳನ್ನು ಭಾರತದ ಸಂವಿಧಾನ ಎಲ್ಲಾ ಹೆಣ್ಣು ಮಕ್ಕಳಿಗೂ ನೀಡಿದೆ, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಹೆಣ್ಣು ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಬೇಕು. ತೊಂದರೆಗೊಳಗಾದ ಹೆಣ್ಣು ಮಕ್ಕಳನ್ನು ಸಮಸ್ಯೆಯಿಂದ ಪಾರುಮಾಡಬೇಕು, ಅವರಿಗೆ ನಂಬಿಕೆ, ಭರವಸೆ, ಉತ್ತಮ ಜೀವನ ನಡೆಸುವ ಮಾರ್ಗವನ್ನು ತೋರಬೇಕು, ವಿವಿಧ ರಂಗಗಳಲ್ಲಿ ಹೆಣ್ಣು ಮಕ್ಕಳು ಮಾಡುವ ಸಾಧನೆಗಳನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವಂತಹ ಕಾರ್ಯಕ್ರಮವನ್ನು ಆಯೋಜಿಸಿದರೆ, ಅದು ಇನ್ನುಳಿದ ಹೆಣ್ಣು ಮಕ್ಕಳಿಗೆ ಸ್ಪೂರ್ತಿ, ಧೈರ್ಯ ನೀಡಿದಂತಾಗುತ್ತದೆ. ಮಹಿಳೆಯರಿಗೆ ಆತ್ಮಸ್ಥೈರ್ಯವಿದ್ದರೆ ಉತ್ತಮ ಸಾಧನೆಗಳನ್ನು ಮಾಡಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಿ. ಧನರಾಜು ಮಾತನಾಡಿದರು. ಈ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಾಗೂ ಕಲಾವಿದರಾದ ಚಿತ್ರರಾವ್ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿಯರಿಗೆ ಪ್ರಶಸ್ತಿ ನೀಡಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜೆ.ಆರ್.ದಿನೇಶ , ಜಿಲ್ಲಾ ನಿರೂಪಣಾಧಿಕಾರಿ ಡಾ. ಲಕ್ಷ್ಮೀದೇವಿ ಉಪಸ್ಥಿತರಿದ್ದರು.------------------

17ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಪಂ ಸಭಾಂಗಣದಲ್ಲಿ ಬೇಟಿ ಬಜಾವೋ - ಬೇಟಿ ಪಡಾವೋ ಅಭಿಯಾನದಡಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ಎಂ.ಪಂಚಾಕ್ಷರಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಡಕಲಪುರ ಗ್ರಾಮದ ಶ್ರೀಬಸವೇಶ್ವರ ಸ್ವಾಮಿಯ ಕೊಂಡೋತ್ಸವ
ಕೆಪಿಎಸ್‌ಸಿ ರಿಪೇರಿಗೆ ಸರ್ಕಾರದ ಪರಿಹಾರ ಸೂತ್ರ