ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : May 30, 2025, 12:57 AM IST
ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಸಚಿವ ತಿಮ್ಮಾಪೂರ ಭೇಟಿ ನೀಡಿದರು  ಜಿಲ್ಲಾಧಿಕಾರಿ ಜಾನಕಿ.ಕೆ.ಎಂ, ಸಿಇಒ ಶಶಿಧರ ಕುರೇರ, ಮಾಜಿಶಾಸಕ ಆನಂದ ನ್ಯಾಮಗೌಡ, ಎಸಿ ಶ್ವೇತಾ ಬೀಡಿಕರ, ತಹಸೀಲ್ದಾರ ಸದಾಶಿವ ಮಕ್ಕೊಜಿ ಮುಂತಾದವರಿದ್ದಾರೆ | Kannada Prabha

ಸಾರಾಂಶ

ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಕನ್ನಡಪ್ರಭ ವಾರ್ತೆ ಜಮಖಂಡಿ

ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಜಮಖಂಡಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಸಚಿವ ಆರ್‌.ಬಿ. ತಿಮ್ಮಾಪೂರ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಗಳ ನಿರ್ದೇಶನದಂತೆ ಜಿಲ್ಲೆಯ ಘಟಪ್ರಭಾ ಹಾಗೂ ಕೃಷ್ಣಾ ನದಿಗಳ ನೀರಿನ ಮಟ್ಟ ಹಾಗೂ ಪ್ರವಾಹ ಪರಿಸ್ಥಿತಿಯ ಸಿದ್ಧತೆಯ ಕುರಿತು ಜಿಲ್ಲಾಡಳಿತದಿಂದ ಕೈಗೊಂಡಿರುವ ಕ್ರಮಗಳ ಪರಿಶೀಲನೆ, ಅಧಿಕಾರಿಗಳಿಂದ ಮಾಹಿತಿ ಪಡೆಯಲು ಪ್ರವಾಸ ಕೈಗೊಂಡಿದ್ದೇನೆ ಎಂದು ತಿಳಿಸಿದರು.

ಮುಧೋಳ ತಾಲೂಕಿನ ಮಿರ್ಜಿ, ಮಳಲಿ ಗ್ರಾಮಗಳಿಗೆ ಭೇಟಿ ನೀಡಿದ್ದೇನೆ, ಸದ್ಯ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ನಡೆದಿವೆ, ಬೀಜ, ಗೊಬ್ಬರದ ಕೊರತೆ ಇಲ್ಲ. ಡಿಎಪಿ ಬದಲು ಕಾಂಪ್ಲೆಕ್ಸ್‌ ಗೊಬ್ಬರ ಬಳಕೆಯ ಕುರಿತು ರೈತರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಓಗಳ ಸಭೆ ಕರೆದಿದ್ದಾರೆ. ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ, ಬೀಜ, ಗೊಬ್ಬರಗಳ ಪೂರೈಕೆ ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ. ಸಾರ್ವಜನಿಕರಿಗೆ, ರೈತಾಪಿ ವರ್ಗಕ್ಕೆ ಯಾವುದೇ ತೊಂದರೆಯಾಗದಂತೆ ಪರಿಸ್ಥಿತಿ ನಿಭಾಯಿಸಲು ಆಡಳಿತ ಯಂತ್ರ ಸನ್ನದ್ಧವಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಪ್ರವಾಹ ಸ್ಥಿತಿ ಎದುರಾದರೆ 84 ಗ್ರಾಮ ಪಂಚಾಯಿತಿ ವ್ಯಾಪ್ತಿಯ 203 ಗ್ರಾಮಗಳಿಗೆ ತೊಂದರೆಯಾಗಲಿದೆ. ಈಗಾಗಲೇ ವರದಿ ಸಿದ್ಧ ಪಡಿಸಲಾಗಿದ್ದು ಎಂತಹುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ವಿವರಣೆ ನೀಡಿದರು.

ಜಿಲ್ಲೆಯಲ್ಲಿ 21 ಪುನರ್ವಸತಿ ಕೇಂದ್ರಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಆದರೆ ಜನರು ಮೂಲ ಮನೆ ಬಿಟ್ಟು ಬಾರದ್ದರಿಂದ ಅಭಿವೃದ್ಧಿಯ ಸದುಪಯೋಗವಾಗುತ್ತಿಲ್ಲ, ಕಟ್ಟಡಗಳು,ರಸ್ತೆ, ಚರಂಡಿಗಳು ಹಾಳಾಗುತ್ತಿವೆ ಎಂದ ಅವರು, ಶೇ.60ರಷ್ಟು ಜನರು ಪುನರ್ವಸತಿ ಕೇಂದ್ರಗಳಿಗೆ ಸ್ಥಳಾಂತರವಾದರೆ ಅವರಿಗೆ ಎಲ್ಲಾಸೌಲಭ್ಯ ಒದಗಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ₹10 ಕೋಟಿ ಅನುದಾನ ಮಂಜೂರಾಗಿದ್ದು, ಕ್ಷೇತ್ರಗಳ ಅವಶ್ಯಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು, ಪೌರಕಾರ್ಮಿಕರು ನಡೆಸುತ್ತಿರುವ ಮುಷ್ಕರಕ್ಕೆ ಸರ್ಕಾರ ಶೀಘ್ರದಲ್ಲಿಯೇ ಸೂಕ್ತ ಪರಿಹಾರ ನೀಡಲಿದೆ ಎಂದ ಅವರು, ವಿವಿಧ ಇಲಾಖೆಗಳಲ್ಲಿಯ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಮಾಜಿ ಶಾಸಕ ಆನಂದ ನ್ಯಾಮಗೌಡ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿಪಂ ಸಿಇಒ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಡಿವೈಎಸ್‌ಪಿ ಎಸ್‌. ರೋಷನ್‌ ಜಮೀರ, ತಹಸೀಲ್ದಾರ ಸದಾಶಿವ ಮಕ್ಕೊಜಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ