ಬ್ಯಾಡಗಿ: ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ. ಆದರೆ ಇಂದಿನ ಒತ್ತಡದ ಜೀವನಶೈಲಿಯಲ್ಲಿ ಮನುಷ್ಯ ಆರೋಗ್ಯವನ್ನು ಕಡೆಗಣಿಸಿ ಹಣದ ಸಂಪತ್ತಿನ ಹಿಂದೆ ಓಡುತ್ತಿದ್ದಾನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯಪಟ್ಟರು.
ಇತ್ತೀಚಿನ ದಿನಗಳಲ್ಲಿ ರಾಸಾಯನಿಕಯುಕ್ತ ಆಹಾರ, ಜಂಕ್ ಫುಡ್, ವ್ಯಾಯಾಮದ ಕೊರತೆ ಹಾಗೂ ಬದಲಾಗುತ್ತಿರುವ ಜೀವನಶೈಲಿಯಿಂದ ಅನೇಕ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಹಿಂದೆ ರೋಗವಿಲ್ಲದ ಮನೆಗಳು ಕಂಡುಬರುತ್ತಿದ್ದರೆ, ಇಂದು ಒಂದಲ್ಲೊಂದು ಕಾಯಿಲೆಯಿಂದ ಬಳಲುವ ಕುಟುಂಬಗಳು ಹೆಚ್ಚಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಮಕ್ಕಳಿಗೆ ಸಮಯಕ್ಕೆ ಸರಿಯಾಗಿ ಎಲ್ಲ ಲಸಿಕೆಗಳನ್ನು ಹಾಕಿಸಬೇಕು ಎಂದು ಕರೆ ನೀಡಿದರು.
ಪಲ್ಸ್ ಪೋಲಿಯೋ ಅಭಿಯಾನವು ದೇಶದ ಭವಿಷ್ಯವನ್ನು ಆರೋಗ್ಯವಂತವಾಗಿಡುವ ಮಹತ್ವದ ಕಾರ್ಯಕ್ರಮವಾಗಿದೆ. ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಪೋಲಿಯೋ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದು. ಈ ನಿಟ್ಟಿನಲ್ಲಿ ಪೋಷಕರು ಯಾವುದೇ ನಿರ್ಲಕ್ಷ್ಯ ತೋರದೆ ತಮ್ಮ ಮಕ್ಕಳಿಗೆ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.ಆಡಳಿತ ವೈದ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ. ರಾಘವೇಂದ್ರ ಮಾತನಾಡಿ, ಭಾರತವು ಹಲವು ವರ್ಷಗಳ ನಿರಂತರ ಪ್ರಯತ್ನದಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ಹೆಗ್ಗಳಿಕೆ ಪಡೆದಿದೆ. ಆದರೆ ಜಗತ್ತಿನ ಕೆಲ ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ಸೋಂಕು ಕಂಡುಬರುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪಲ್ಸ್ ಪೋಲಿಯೋ ಅಭಿಯಾನವನ್ನು ಸರ್ಕಾರ ನಿರಂತರವಾಗಿ ನಡೆಸುತ್ತಿದೆ. ಒಂದೇ ಒಂದು ಮಗುವೂ ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ವಿಶೇಷ ಕಾಳಜಿ ವಹಿಸುತ್ತಿದೆ ಎಂದು ಹೇಳಿದರು.