ಕನ್ನಡಪ್ರಭ ವಾರ್ತೆ ಹನೂರು
ಈ ಕುರಿತು ಜಿಪಂ ಸಿಇಒ ಮೋನಾ ರೋತ್ ಮಾತನಾಡಿ, ಕೆಂಪಯ್ಯನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಂಬಂಧ ಪರಿಶೀಲಿಸಲಾಗಿದ್ದು ಸದರಿ ಗ್ರಾಮಸ್ಥರು ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ಪ್ರತಿನಿತ್ಯ ಗ್ರಾಮ ಪಂಚಾಯಿತಿಯಿಂದ ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕೆಂಪಯ್ಯನಹಟ್ಟಿ ಗ್ರಾಮಕ್ಕೆ ಹೊಂದಿಕೊಂಡಿರುವ ಆಂಜನೇಯನದೊಡ್ಡಿ ಗ್ರಾಮದಲ್ಲಿರುವ ಸುಮಾರು 25 ರಿಂದ 30 ಮನೆಗಳಿಗೆ ವಾರದಲ್ಲಿ ಎರಡು ದಿನ ನೀರು ಸರಬರಾಜು ಮಾಡುತ್ತಿರುವುದಾಗಿ ಗ್ರಾಮಸ್ಥರು ಭೇಟಿ ಸಮಯದಲ್ಲಿ ತಿಳಿಸಿದರು. ಈ ಸಂಬಂಧ ಪ್ರತಿದಿನ ಅಥವಾ ಎರಡು ದಿನಕ್ಕೊಮ್ಮೆ ಕಡ್ಡಾಯವಾಗಿ ನೀರು ಸರಬರಾಜು ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರಸ್ತುತ ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಳೆಯ ಅಭಾವವಿರುವುದರಿಂದ ಅಂತರ್ಜಲ ಮಟ್ಟವು ಕುಸಿದಿರುವುದರಿಂದ ಮಳೆನೀರಿನ ಕೊಯ್ಲು, ಇಂಗುಗುಂಡಿ, ಚೆಕ್ ಡ್ಯಾಂ, ಕೆರೆಗಳ ಪುನಶ್ಚೇತನ ಕಾಮಗಾರಿ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ತೆಗೆದುಕೊಂಡು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಇಲಾಖಾ ಅಧಿಕಾರಿಗಳಿಗೆ ನಿದೇರ್ಶನ ನೀಡಿದರು.ಮುಖ್ಯಮಂತ್ರಿಯವರಿಗೆ ಪತ್ರ ಬರೆದ ಮಕ್ಕಳ ಪೋಷಕರು ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದ ನೀರಿನ ಅಂತರ್ಜಲದ ಮಟ್ಟ ಕುಸಿದಿದ್ದು, ಕೃಷಿ ಚಟುವಟಿಕೆಗೆ ತೊಂದರೆಯನ್ನು ಅನುಭವಿಸುತ್ತಿದ್ದೇವೆ. ಹೀಗಾಗಿ ರಾಮಾಪುರ ವ್ಯಾಪ್ತಿಯಲ್ಲಿ ಬರುವ ಕೆರೆ ಮತ್ತು ಹಳ್ಳಗಳಿಗೆ ನೀರು ತುಂಬಿಸುವ ಕೆಲಸವಾಗಬೇಕು ಎಂದು ಪೋಷಕರು ಮನವಿ ಮಾಡಿದರು.
ತದನಂತರ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಅನುಷ್ಟಾನಗೊಂಡಿರುವ ಕುಡಿಯುವ ನೀರಿನ ಪರಿಶೀಲನೆ ನಡೆಸಿದರು. ಲೋಪದೋಷಗಳು ಕಂಡುಬಂದರೆ ತ್ವರಿತವಾಗಿ ಸರಿಪಡಿಸುವಂತೆ ಹನೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದವರೊಂದಿಗೆ ಮಾತನಾಡಿ, ನರೇಗಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ಉಮೇಶ್, ದೊಡ್ಡಾಲತ್ತೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೆಲ್ವ ರಾಜ್ ಇದ್ದರು.