ಕನ್ನಡಪ್ರಭ ವಾರ್ತೆ ವಿಜಯಪುರ ಕಾಂಗ್ರೆಸ್ಸಿನಲ್ಲಿ ಯಾವುದೇ ತೆರನಾದ ಬಂಡಾಯ ಇಲ್ಲ ಎಂದು ಮಾಜಿ ಸಚಿವ, ಶಾಸಕ ಶಾಮನೂರ ಶಿವಶಂಕರಪ್ಪ ಸ್ಪಷ್ಟಪಡಿಸಿದರು. ನಗರದ ಬಿಎಲ್ಡಿಇ ಡೀಮ್ಡ್ ವಿವಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆಗೆ ಅವರು ಮಾತನಾಡಿ, ಸಚಿವ ಸತೀಶ ಜಾರಕಿಹೊಳಿ ಅವರ ಬಂಡಾಯ ವಿಚಾರ ನನಗೆ ಗೊತ್ತಿಲ್ಲ. ಯಾರೂ ಬಂಡಾಯ ಏಳಲ್ಲ. ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದರು. ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಲ್ಲ ಎಂಬುವುದು ಆಗಿನ ಮಾತು. ಈಗ ಅದನ್ನೇ ಹೇಳುತ್ತ ಹೋಗುವುದು ಸರಿಯಲ್ಲ. ಸರಿಪಡಿಸಿಕೊಂಡು ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎರಡು ವರ್ಷಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂಬ ರಾಮದುರ್ಗ ಕೈ ಶಾಸಕ ಅಶೋಕ ಪಟ್ಟಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅವೆಲ್ಲ ಇಮೇಜ್, ಕನಸು ಎಂದು ಉತ್ತರಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಾರೆಂಬ ಕೆಲ ಶಾಸಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದೆಲ್ಲಾ ಈಗೇಕೆ ಮುಂದೆ ಬಂದಾಗ ನೋಡೋಣ ಎಂದಷ್ಟೇ ಹೇಳಿದರು.