ಕನ್ನಡಪ್ರಭ ವಾರ್ತೆ ಶಿರಸಿ
ಸೋಮವಾರ ನಗರದ ಸುಪ್ರಿಯಾ ಇಂಟರ್ ನ್ಯಾಶನಲ್ನಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಉಪಹಾರ ಸೇವನೆ ಜತೆ ಹೊಟ್ಟೆ ತುಂಬಾ ಮಾತುಕತೆ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರೆಂಟಿ ಯೋಜನೆ ಕಾಂಗ್ರೆಸ್ ಸರ್ಕಾರ ನೀಡುವ ಪ್ರಯತ್ನ ಮಾಡಿದೆ ಎಂದರು.ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಅಭಿವೃದ್ಧಿ ಯೋಜನೆ ಕುರಿತು ಚರ್ಚೆಗೆ ಪ್ರಾಧಾನ್ಯತೆ ನೀಡಬೇಕಾಗುತ್ತದೆ ಎಂದ ಅವರು, ಕೇಂದ್ರ ಸರ್ಕಾರವು ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ನ್ಯಾಶನಲ್ ಹೆರಾಲ್ಡ್ ಕೇಸ್ ನಲ್ಲಿ ಈಗ ಪುನಃ ಸೇಡಿನ ರಾಜಕಾರಣಕ್ಕೆ ಎಫ್ಐಆರ್ ದಾಖಲು ಮಾಡಿಸಿದೆ. ಇದರಲ್ಲಿ ಯಾವುದೇ ಹುರುಳು ಇಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಸುಖಾಸುಮ್ಮನೆ 2 ಸಾವಿರ ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಕೆಳಮಟ್ಟದ ಆಪಾದನೆ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಪುನಃ ಪುನಃ ಯಾಕೆ ಈ ಪ್ರಕರಣದ ಕುರಿತು ಪ್ರಸ್ತಾಪ ಮಾಡುತ್ತಾರೆ. ಈಗ ರಾಹುಲ್ ಗಾಂಧಿ ಕಾಂಗ್ರೆಸ್ ಶಕ್ತಿ ಬೆಳೆಸಲು ಪ್ರಯತ್ನಿಸುತ್ತಿರುವುದರಿಂದ ದ್ವೇಷ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ದೀಪಕ ಹೆಗಡೆ ದೊಡ್ಡೂರು, ಗಣೇಶ ದಾವಣಗೆರೆ, ಜಾಫಿ ಪೀಟರ್, ನಾಗರಾಜ ಮಡಿವಾಳ, ರಾಜು ಉಗ್ರಾಣಕರ, ರಮೇಶ ದುಭಾಶಿ ಮತ್ತಿತರರು ಇದ್ದರು.