ಕನ್ನಡಪ್ರಭ ವಾರ್ತೆ ಬೆಳಗಾವಿಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ. ನೀರಿನ ಸಮಸ್ಯೆ ಇದ್ದಲ್ಲಿ ತಹಸೀಲ್ದಾರ್ ಗಮನಕ್ಕೆ ತಂದರೇ ಸಮಸ್ಯೆ ಪರಿಹರಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಳೆ ಕೂಡ ಪ್ರಾರಂಭವಾಗಿದ್ದು, ಅಲ್ಲಲ್ಲಿ 2 ಗಂಟೆಗಳ ಕಾಲ ಹೆಚ್ಚು ಮಳೆಯಾಗಿದೆ. ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ಗ್ರಾಪಂಗೆ ಹೊಸ ಟ್ಯಾಂಕರ್ ಖರೀದಿಸಲು ಸೂಚಿಸಿದ್ದೇವೆ. ಕೆಲವು ಗ್ರಾಮ ಪಂಚಾಯತಿಗಳಲ್ಲಿ ಹೊಸ ಟ್ಯಾಂಕರ್ ಕೂಡ ಖರೀದಿಸಿದ್ದಾರೆ. ಇನ್ನುಳಿದವರು ಬಾಡಿಗೆ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ತಿಳಿಸಿದರು.ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಸಂಬಂಧ ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮಹಾರಾಷ್ಟ್ರದಿಂದ ನೀರು ಬಿಡತ್ತಾರೆನ್ನುವ ವಿಶ್ವಾಸವಿದೆ. ಹಿಡಕಲ್ ಡ್ಯಾಮ್ನಿಂದ ಕೃಷ್ಣಾ ನದಿಗೆ ಈಗಾಗಲೇ ಒಂದು ಟಿಎಂಸಿ ನೀರು ಬಿಟ್ಟಿದ್ದೇವೆ. ಇನ್ನೊಂದು ಟಿಎಂಸಿ ನೀರು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಬೆಳಗಾವಿಯಲ್ಲಿ ಚರಂಡಿ ನೀರು ಸರಿಯಾಗಿ ಸರಬರಾಜು ಆಗುತ್ತಿಲ್ಲ ಎಂಬುವುದಕ್ಕೆ ಪ್ರತಿಕ್ರಿಯಿಸಿ, ಚರಂಡಿ ನೀರಿನ ಸಮಸ್ಯೆ ಬಗ್ಗೆ ಮಹಾನಗರ ಪಾಲಿಕೆಯವರು ಪರಿಹರಿಸುತ್ತಾರೆ. ನೀತಿ ಸಂಹಿತೆ ಮುಗಿದ ಬಳಿಕ ಬಳ್ಳಾರಿ ನಾಲಾ ಹೂಳೆತ್ತುವ ಬಗ್ಗೆ ಚರ್ಚಿಸಿ, ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.----
ಬಾಕ್ಸ್...ಸಚಿವ ಸಂಪುಟ ವಿಸ್ತರಣೆ ಆಗಲ್ಲ: ಸಚಿವ ಸತೀಶ
ನನಗಿರುವ ಮಾಹಿತಿ ಪ್ರಕಾರ ಲೋಕಸಭೆ ಚುನಾವಣಾ ಫಲಿತಾಂಶದ ನಂತರ ಸಚಿವ ಸಂಪುಟ ವಿಸ್ತರಣೆ ಆಗಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.ಕಾಂಗ್ರೆಸ್ ಪಕ್ಷದಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಕುರಿತು ಬಿಜೆಪಿಯವರಿಗೆ ಟೀಕಿಸಲು ನೈತಿಕ ಹಕ್ಕಿಲ್ಲ. ಬಿಜೆಪಿಯಲ್ಲಿಯೂ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ ಉದಾಹರಣೆಗಳು ಸಾಕಷ್ಟಿವೆ. ಈ ವ್ಯವಸ್ಥೆ ಎಲ್ಲ ಪಕ್ಷಗಳಲ್ಲಿಯೂ ಇದೆ. ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವೇ ಆಗಿದ್ದು, 2019ರ ಲೋಕಸಭೆ ಚುನಾವಣೆಗೆ ಹೋಲಿಸಿದರೇ ಈ ಬಾರಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಲು ಅವಕಾಶ ಇದೆ ವಿಶ್ವಾಸ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ರಾಜ್ಯದ 28 ಕ್ಷೇತ್ರಗಳಲ್ಲಿ 14 ರಿಂದ 17 ಸೀಟುಗಳನ್ನು ನಾವು ಗೆಲ್ಲುತ್ತೇವೆ. ಮುಂಬೈ, ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಕಾಂಗ್ರೆಸ್ ಸೀಟು ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ನೇಹಾ, ಅಂಜಲಿ ಕೊಲೆ ಕೇಸ್ ನಂತಹ ಪ್ರಕರಣಗಳು ಎಲ್ಲ ಸರ್ಕಾರದಲ್ಲಿಯೂ ಈ ರೀತಿಯ ಘಟನೆಗಳು ಸಂಭವಿಸಿವೆ. ಇಂತಹ ಘಟನೆಗಳ ಮೇಲೆ ಪೊಲೀಸ್ ಇಲಾಖೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಆಸೀಫ್(ರಾಜು) ಸೇಠ್, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ಪಾಟೀಲ್, ಸುನೀಲ್ ಹಣಮನ್ನವರ, ರಾಜಾ ಸಲೀಂ ಇತರರು ಇದ್ದರು.ಕೋಟ್....
ಲೋಕೋಪಯೋಗಿ ಇಲಾಖೆಯಿಂದ ಜಿಲ್ಲೆಯಲ್ಲಿ 100 ನೂತನ ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು, ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ತಲಾ 5 ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ.-ಸತೀಶ ಜಾರಕಿಹೊಳಿ, ಸಚಿವ.