ಗದಗ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಆಧಾರ್ ಸೀಡಿಂಗ್ ಸಮಸ್ಯೆ ಹಾಗೂ ತಾಂತ್ರಿಕ ತೊಂದರೆಗಳೇನಾದರೂ ಇದ್ದಲ್ಲಿ ಪರಿಶೀಲನೆ ನಡೆಸಬೇಕು. ಯೋಜನೆಯ ಸೌಲಭ್ಯದ ಫಲಾನುಭವಿಗಳ ಮನೆ ಮನೆ ಸರ್ವೆ ಕಾರ್ಯ ಮಾಡುವಲ್ಲಿ ವಿಳಂಬ ಮಾಡಬಾರದು. ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿ ಮಾಡುವ ಸಂದರ್ಭದಲ್ಲಿ ಅನುದಾನದ ಕೊರತೆಯಿದ್ದರೆ ಸರ್ಕಾರಕ್ಕೆ ತ್ವರಿತವಾಗಿ ಅನುದಾನ ಬಿಡುಗಡೆಗಾಗಿ ಪತ್ರ ಬರೆಯಬೇಕು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಗದಗ ಜಿಲ್ಲೆಯಲ್ಲಿ ಫೆಬ್ರುವರಿ 2026 ಮಾಹೆಯಲ್ಲಿ 2,61,860 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 2,52,843 ಅರ್ಜಿಗಳು ಮಂಜೂರಾಗಿವೆ. ಶೇ. 96.56ರಷ್ಟು ಪ್ರಗತಿ ಸಾಧಿಸಲಾಗಿದೆ. ಗದಗ- ಶೇ. 96.50, ಗಜೇಂದ್ರಗಡ- ಶೇ. 96.14, ಲಕ್ಷ್ಮೇಶ್ವರ- ಶೇ. 96.83, ಮುಂಡರಗಿ- ಶೇ. 96.52, ನರಗುಂದ –ಶೇ. 96.62, ರೋಣ- ಶೇ. 96.53 ಹಾಗೂ ಶಿರಹಟ್ಟಿ- ಶೇ. 96.97ರಷ್ಟು ಸಾಧನೆಯಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ವಿತರಣೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಇ-ಕೆವೈಸಿ, ಎನ್ಪಿಸಿಐ, ಜಿಎಸ್ಟಿ ಮುಂತಾದ ತಾಂತ್ರಿಕ ಸಮಸ್ಯೆಗಳ ಕುರಿತು ವಿವರವಾದ ಚರ್ಚೆ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು.