ಕಾರವಾರ: ಪ್ರಸ್ತುತ ಬೇಸಿಗೆ ಕಾಲ ಆಗಿರುವುದರಿಂದ ಜಿಲ್ಲೆಯ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದ್ದು, ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚನೆ ನೀಡಿದರು.
ಅವರು ಗುರುವಾರ ಜಿಪಂ ಸಭಾಭನದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ, ವಸತಿ ನಿಲಯಗಳಿಗೆ ಶುದ್ಧ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುವುದನ್ನು ಖಾತರಿಪಡಿಸಿಕೊಂಡು ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಅವರು, ನೀರಿನ ಅಭಾವ ಇರುವ ಗ್ರಾಪಂಗಳಲ್ಲಿ ಈಗಾಗಲೇ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಗ್ರಾಪಂಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸುವ ಮುನ್ನ ಪಿಡಿಪ, ಕಾರ್ಯ ನಿರ್ವಾಹಕ ಅಧಿಕಾರಿಗಳು ಸಮನ್ವಯ ಸಾಧಿಸಿ ಮಾಹಿತಿ ಪಡೆದು ವರದಿ ಸಲ್ಲಿಸಬೇಕು. ಈ ವರದಿ ಆಧಾರದ ಮೇಲೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಕೆಲವು ಅಂಗನವಾಡಿ, ಶಾಲೆ, ವಸತಿ ಶಾಲೆಗಳಿಗೆ ಸರ್ಮಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗದಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಕುರಿತಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಬೇಕು. ತಾಪಂ ಇಒ, ಪಿಡಿಒಗಳು ತಮ್ಮ ವ್ಯಾಪ್ತಿಯ ನೀರಿನ ಅಭಾವವಿರುವ ಸ್ಥಳಗಳ ಕ್ರೂಡೀಕೃತ ವರದಿ ಸಲ್ಲಿಸಬೇಕು. ಅವಶ್ಯಕವಿರುವ ಹೊಸ ಬೋರ್ವೆಲ್, ಪೈಪ್ ಹಾಗೂ ರಿಚಾರ್ಚ್ ಪಿಟ್ ಗಳ ಬಗ್ಗೆ ಮಾಹಿತಿ ಒದಗಿಸುವಂತೆ ತಿಳಿಸಿದರು.ಗ್ರಾಮ ನೀರು, ನೈರ್ಮಲ್ಯ ಸಮಿತಿಗಳು ನಿಯಮಿತ ಸಭೆಗಳನ್ನು ಮಾಡಿ, ನಡವಳಿ ಸಹಿತ ಅನುಪಾಲನಾ ವರದಿ ನೀಡಬೇಕು. ಕುಡಿಯುವ ನೀರು ಪೂರೈಕೆಯ ಮೂಲದ ನೀರಿನ ಗುಣಮಟ್ಟ ಬಗ್ಗೆ ಎಫ್ಟಿಕೆ ಕಿಟ್ ಮೂಲಕ ಪರೀಕ್ಷಿಸುವುದರ ಜತೆ ನೀರಿನ ಮಾದರಿಯನ್ನು ಜೈವಿಕ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಬೇಕು. ನೀರಿನ ಮಾದರಿ ಸಂಗ್ರಹಿಸುವ ಸಿಬ್ಬಂದಿ ಆಯ್ಕೆ ಮಾಡಿದ ಪ್ರದೇಶದ ನೀರಿನ ಮಾದರಿಯ ಜೊತೆ ಇತರೆ ಪ್ರದೇಶದ ನೀರಿನ ಮಾದರಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಬೇಕು ಎಂದರು.
ಈಗಾಗಲೇ ಕೊರೆಯಲಾದ ಬೋರ್ವೆಲ್ಗಳ ನೀರಿನ ಮಟ್ಟದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದು ಸಂಬoಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ ಮುಂಜಾಗ್ರತಾ ಕ್ರಮ ವಹಿಸಿ ಸಮರ್ಪಕ ನೀರನ್ನು ಪೂರೈಕೆ ಮಾಡುವುದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯ ನಿರ್ವಾಹಕ ಎಂಜಿನಿಯರ್ ಎನ್.ಡಿ ರಘುನಾಥ, ಬೇಸಿಗೆ ಕಾಲದಲ್ಲಿ ಜನರಿಗೆ ನೀರಿನ ಮಿತ ಬಳಕೆಯ ಕುರಿತಂತೆ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು.
ಜಿಪಂ ಉಪ ಕಾರ್ಯದರ್ಶಿ (ಆಡಳಿತ) ನಾಗೇಶ್ ರಾಯ್ಕರ್, ಉಪ ಕಾರ್ಯದರ್ಶಿ (ಅಭಿವೃದ್ಧಿ) ಪ್ರಕಾಶ ಹಾಲಮ್ಮನವರ್, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಶಂಕರ್ ರಾವ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ ಮತ್ತಿತರರು ಇದ್ದರು.