ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರ್ಲಕ್ಷ್ಯ ಬೇಡ: ಜಿಲ್ಲಾಧಿಕಾರಿ ಲತಾಕುಮಾರಿ

KannadaprabhaNewsNetwork |  
Published : Jun 19, 2026, 01:30 AM IST
18ಎಚ್ಎಸ್ಎನ್4 :  | Kannada Prabha

ಸಾರಾಂಶ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಂಡಿರಬೇಕು. ಮನೆ- ಮನೆ ಸಮೀಕ್ಷೆ ವೇಳೆ ಬಿಎಲ್‌ಒಗಳು ಪ್ರತಿಯೊಂದು ಕುಟುಂಬಕ್ಕೂ ಭೇಟಿ ನೀಡಿ ಎನ್ಯುಮರೇಷನ್ ಫಾರಂಗಳನ್ನು ವಿತರಿಸಬೇಕು. ಭರ್ತಿ ಮಾಡಿದ ಫಾರಂಗಳ ಮೇಲೆ ಮತದಾರರ ಸಹಿ ಅಥವಾ ಹೆಬ್ಬೆರಳ ಗುರುತು ಕಡ್ಡಾಯವಾಗಿದ್ದು, ಇತ್ತೀಚಿನ ಸ್ಪಷ್ಟ ಭಾವಚಿತ್ರವನ್ನು ಕೂಡ ಪಡೆದುಕೊಳ್ಳಬೇಕು. ಆಧಾರ್ ಕಾರ್ಡ್ ಸೇರಿ 12 ಅಧಿಕೃತ ದಾಖಲೆಗಳನ್ನು ಗುರುತಿನ ದೃಢೀಕರಣಕ್ಕಾಗಿ ಬಳಸಬಹುದಾದರೂ, ಆಧಾರ್ ಕಾರ್ಡ್ ಪೌರತ್ವದ ಪುರಾವೆಯಲ್ಲ ಎಂಬುದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಬೇಲೂರು

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್ ಐಆರ್ ) ಕಾರ್ಯವನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲತಾಕುಮಾರಿ ಸೂಚನೆ ನೀಡಿದರು.

ಪಟ್ಟಣದ ವೀರಶೈವ ಸಮುದಾಯ ಭವನದಲ್ಲಿ ನಡೆದ, ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಬೇಜವಾಬ್ದಾರಿತನವನ್ನು ಸಹಿಸಲಾಗುವುದಿಲ್ಲ. ಪ್ರತಿಯೊಬ್ಬ ಅಧಿಕಾರಿಯೂ ತನ್ನ ಜವಾಬ್ದಾರಿ ಅರಿತು ನಿಖರವಾಗಿ ಕಾರ್ಯ ನಿರ್ವಹಿಸಬೇಕು. ಕರ್ತವ್ಯ ಲೋಪ ಅಥವಾ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟ ಇಆರ್‌ಒ, ಎಇಆರ್‌ಒ ಹಾಗೂ ಬಿಎಲ್‌ಒ ಸೂಪರ್‌ವೈಸರ್‌ಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿ ಸೂಪರ್‌ವೈಸರ್ ಅಡಿಯಲ್ಲಿ 8 ರಿಂದ 10 ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಿದ್ದು, ತಮ್ಮ ವ್ಯಾಪ್ತಿಯ ಎಲ್ಲ ಬಿಎಲ್‌ಒಗಳ ಸಂಪೂರ್ಣ ವಿವರಗಳನ್ನು ಹೊಂದಿರಬೇಕು. ಜೊತೆಗೆ ಅವರ ಕಾರ್ಯಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ ಮಾರ್ಗದರ್ಶನ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹ ಮತದಾರರ ಹೆಸರು ಸೇರ್ಪಡೆ, ಮೃತರಾದವರು ಅಥವಾ ಸ್ಥಳಾಂತರಗೊಂಡವರ ಹೆಸರುಗಳ ತೆಗೆದುಹಾಕುವಿಕೆ ಹಾಗೂ ತಿದ್ದುಪಡಿಗಳನ್ನು ನಿಖರವಾಗಿ ಕೈಗೊಳ್ಳಬೇಕು. ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಕ್ರಮವಹಿಸುವುದು ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಂಡಿರಬೇಕು. ಮನೆ- ಮನೆ ಸಮೀಕ್ಷೆ ವೇಳೆ ಬಿಎಲ್‌ಒಗಳು ಪ್ರತಿಯೊಂದು ಕುಟುಂಬಕ್ಕೂ ಭೇಟಿ ನೀಡಿ ಎನ್ಯುಮರೇಷನ್ ಫಾರಂಗಳನ್ನು ವಿತರಿಸಬೇಕು. ಭರ್ತಿ ಮಾಡಿದ ಫಾರಂಗಳ ಮೇಲೆ ಮತದಾರರ ಸಹಿ ಅಥವಾ ಹೆಬ್ಬೆರಳ ಗುರುತು ಕಡ್ಡಾಯವಾಗಿದ್ದು, ಇತ್ತೀಚಿನ ಸ್ಪಷ್ಟ ಭಾವಚಿತ್ರವನ್ನು ಕೂಡ ಪಡೆದುಕೊಳ್ಳಬೇಕು. ಆಧಾರ್ ಕಾರ್ಡ್ ಸೇರಿ 12 ಅಧಿಕೃತ ದಾಖಲೆಗಳನ್ನು ಗುರುತಿನ ದೃಢೀಕರಣಕ್ಕಾಗಿ ಬಳಸಬಹುದಾದರೂ, ಆಧಾರ್ ಕಾರ್ಡ್ ಪೌರತ್ವದ ಪುರಾವೆಯಲ್ಲ ಎಂಬುದನ್ನು ಅಧಿಕಾರಿಗಳು ಗಮನದಲ್ಲಿಟ್ಟುಕೊಳ್ಳಬೇಕು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಮೊಬೈಲ್ ಆ್ಯಪ್ ಮೂಲಕ ಮಾಹಿತಿ ಅಪ್‌ಲೋಡ್ ಮಾಡುವ ಕೌಶಲ್ಯವನ್ನು ಅಧಿಕಾರಿಗಳು ಬೆಳೆಸಿಕೊಳ್ಳಬೇಕು. ಇದಲ್ಲದೆ, ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರು, ಕ್ರೀಡಾಪಟುಗಳು, ಸಿನಿಮಾ ಕ್ಷೇತ್ರದ ಗಣ್ಯರು ಹಾಗೂ ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಮತಗಟ್ಟೆ ವ್ಯಾಪ್ತಿಯ ಎಲ್ಲ ಪ್ರಮುಖ ವ್ಯಕ್ತಿಗಳ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಬಿಎಲ್‌ಒಗಳು ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ, ಪುರಸಭೆ ಮುಖ್ಯಾಧಿಕಾರಿ ಬಸವರಾಜು ಶಿಗ್ಗಾಂವಿ, ಆಶ್ರಯ ಸಮಿತಿ ಸದಸ್ಯ ಇಕ್ಬಾಲ್, ಪುರಸಭೆ ಸದಸ್ಯ ಜಮಾಲ್ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಯ್ಸಳರ ಪರಂಪರೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಲತಾಕುಮಾರಿ
ತಂಪೆರೆದ ಮುಂಜಾನೆ ಮಳೆ: ರೈತರ ಮುಖದಲ್ಲಿ ಜೀವ ಕಳೆ