ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್ ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು.
ಕನ್ನಡಪ್ರಭ ವಾರ್ತೆ ಬೈಂದೂರು
ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಗುರುವಾರ ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್ ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು. 2024-25ನೇ ಸಾಲಿಗೆ ಹಾಸ್ಟೆಲ್ಗಳಿಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಮುಗಿದಿದ್ದು ವಿದ್ಯಾರ್ಥಿಗಳ ಊಟೋಪಚಾರಕ್ಕೆ ಮಾಸಿಕ ರೇಷನ್, ತರಕಾರಿ ಹಾಗೂ ಇನ್ನಿತರ ಆಹಾರ ಸಾಮಾಗ್ರಿಗಳು ಕೊರತೆಯಾಗದಂತೆ ನೋಡಿ ಕೊಳ್ಳುವುದು, ವಾರ್ಡನ್ಗಳು ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸೇರಿದಂತೆ ವಿದ್ಯಾರ್ಥಿಗಳ ವಾಸ್ತವ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು. ಉಡುಪಿ ಜಿಲ್ಲೆಯ ಹಾಸ್ಟೆಲ್ಗಳಲ್ಲಿ ವಾರ್ಡನ್ಗಳ ತೀವ್ರ ಕೊರತೆ ಇದ್ದು 5 - 6 ಹಾಸ್ಟೆಲ್ ಗಳಿಗೆ ಒಬ್ಬರು ವಾರ್ಡನ್ ಎಂಬ ಪರಿಸ್ಥಿತಿ ಇದೆ. ಬೈಂದೂರು ಹಾಗೂ ಕುಂದಾಪುರದಲ್ಲಿ ಪೋಸ್ಟ್ ಮೆಟ್ರಿಕ್ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಕೊರತೆ ಇದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ, ಸದನದಲ್ಲೂ ಈ ಬಗ್ಗೆ ಧ್ವನಿ ಎತ್ತಲಾಗಿದೆ. ಅಧಿಕಾರಿಗಳು ಖಾಲಿ ಇರುವ ವಾರ್ಡನ್ ಹುದ್ದೆ ಭರ್ತಿ ಮಾಡಲು ಹಾಗೂ ಬೈಂದೂರು ಮತ್ತು ಕುಂದಾಪುರಕ್ಕೆ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಕಳುಹಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಹಾಗೂ ಕ್ಷೇತ್ರ ವ್ಯಾಪ್ತಿಯ ವಿವಿಧ ವಿದ್ಯಾರ್ಥಿ ನಿಲಯಗಳ ವಾರ್ಡನ್ಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.