ಬೀದರ್: ಶತಾಯಿಷಿ ಡಾ.ಚನ್ನಬಸವ ಪಟ್ಟದ್ದೇವರ ಮಾರ್ಗದಲ್ಲಿ ಹೆಜ್ಜೆಯಿಟ್ಟಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಜಗದಗಲ ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ದೇಶ ವಿದೇಶಗಳಲ್ಲಿ ಬಸವತತ್ವ ಪ್ರಚಾರದ ಮೂಲಕ ಸಮೃದ್ಧ ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ನುಡಿದರು.
ಅಂತಹ ಪೂಜ್ಯರು ಅಮೃತ ಮಹೋತ್ಸವದ ಸಂಭ್ರಮದಲ್ಲಿರುವುದು ಹೆಮ್ಮೆ ತರಿಸಿದೆ. ವರ್ಷ ಪೂರ್ತಿ ಯೋಜನೆ ರೂಪಿಸಿ ಪೂಜ್ಯರ ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಸಾನ್ನಿಧ್ಯ ವಹಿಸಿದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ವಿಶ್ವಗುರು ಬಸವಣ್ಣನವರ ಚಿಂತನೆಗಳು ವಿಶ್ವಕ್ಕೆ ತಲುಪಬೇಕಿದೆ ಈ ಹಿನ್ನೆಲೆಯಲ್ಲಿ ಬುದ್ಧ, ಮಹಾವೀರ, ಗುರುನಾನಕ ಜಯಂತಿಗಳಿಗೆ ರಜೆ ನೀಡುವಂತೆ ಬಸವಣ್ಣನವರ ಜಯಂತಿಗೂ ಕೇಂದ್ರ ಸರ್ಕಾರ ರಜೆ ಘೋಷಣೆ ಮಾಡುವ ಕೆಲಸ ಮಾಡಿದ್ದರೇ ಬಸವಣ್ಣನವರ ವಿಚಾರಧಾರೆಗಳು ಮತ್ತಷ್ಟು ವೇಗವಾಗಿ ಜಾಗತಿಕ ಮಟ್ಟಕ್ಕೆ ತಲುಪಲಿವೆ ಎಂದು ತಿಳಿಸಿದರು.ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಪ್ರಾಸ್ತಾವಿಕ ಮಾತನಾಡಿದರು. ಸಂಸದ ಸಾಗರ ಖಂಡ್ರೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿದರು. ಸಿದ್ದಯ್ಯ ಸ್ವಾಮೀಜಿ, ಹುಮನಬಾದ್ ಶಾಸಕ ಡಾ.ಸಿದ್ದು ಪಾಟೀಲ್ ಮತ್ತಿತರರು ಇದ್ದರು.