)
ಕನ್ನಡಪ್ರಭ ವಾರ್ತೆ, ಬೆಂಗಳೂರು:
ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್ಐಆರ್ ಸೃಷ್ಟಿಸಿರುವ ಅವಾಂತರಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ರಾಜ್ಯ ಚುನಾವಣಾ ಆಯೋಗವು ಇತ್ತೀಚೆಗಷ್ಟೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಅಂಶ ಮುಂದಿಟ್ಟುಕೊಂಡು ಎಸ್ಐಆರ್ ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ.
ಒಂದು ವೇಳೆ ಎಸ್ಐಆರ್ಗೆ ಸುಪ್ರೀಂ ಕೋರ್ಟ್ ತಡೆ ನೀಡದಿದ್ದರೂ, ಎಸ್ಐಆರ್ ಬಳಿಕದ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗವು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹಾಗೂ ಅಂತಿಮ ಪಟ್ಟಿ ಬಗ್ಗೆ ಆಕ್ಷೇಪಣೆಗಳನ್ನು ಆಲಿಸಿಯೇ ಅಂತಿಮಗೊಳಿಸಲು ನಿರ್ದೇಶಿಸುವಂತೆ ಮನವಿ ಮಾಡುವ ಬಗ್ಗೆ ಚರ್ಚಿಸಲಾಗಿದೆ. ರಾಜಕೀಯ ಪಕ್ಷಗಳಿಗೆ ಮತದಾರರ ಪಟ್ಟಿ ನೀಡದೆ ಎಸ್ಐಆರ್ ಅಂತಿಮಗೊಳಿಸಬಾರದು ಎಂದು ನಿರ್ದೇಶನ ನೀಡುವಂತೆ ಕೋರ್ಟ್ಗೆ ಕೋರಲು ಚರ್ಚಿಸಲಾಗಿದೆ.ಶೇ.66 ರವರೆಗೆ ಮತ ಡಿಲೀಟ್ ಭೀತಿ:
ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಟ್ಟೆಚ್ಚರ ವಹಿಸಬೇಕು. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಹೊರಗುಳಿಯದಂತೆ ಮಾಡಲು ಪಕ್ಷ ಸನ್ನದ್ಧರಾಗಬೇಕು ಎಂದು ಸಂಪುಟದಲ್ಲಿ ಚರ್ಚಿಸಲಾಗಿದೆ.
ಇದರ ಭಾಗವಾಗಿ ಎಸ್ಐಆರ್ ಬಗ್ಗೆ ಎಲ್ಲಾ ನಾಯಕರಿಗೂ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳಿಗೆ ಜಾಗೃತಿ ಹಾಗೂ ಸ್ಪಷ್ಟ ಸಂದೇಶ ನೀಡಲು ಮೇ 24ರಂದು ದೇವನಹಳ್ಳಿ ಬಳಿಯ ಸಿಗ್ನೇಚರ್ ಕ್ಲಬ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಪಕ್ಷದ ವೇದಿಕೆಯಡಿ ಮಹತ್ವದ ಸಭೆ ಕರೆಯಲಾಗಿದೆ.
ವಿಶೇಷ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಾರ್ವತ್ರಿಕ ಚುನಾವಣೆಗಳ ಹಿನ್ನೆಲೆಯಲ್ಲಿ ಎಸ್ಐಆರ್ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.
ಕೇವಲ ನ್ಯಾಯಾಲಯ ಮಾತ್ರವಲ್ಲದೆ ಇಂತಹ 10-12 ಅಂಶಗಳ ಬಗ್ಗೆ ವಿವರವಾದ ಚರ್ಚೆ ಮಾಡಿದ್ದೇವೆ. ಚರ್ಚೆ ಅಪೂರ್ಣ ಆಗಿದ್ದು, ಸಿಎಂ-ಡಿಸಿಎಂ ಹಾಗೂ ನಮ್ಮ ನಾಯಕರ ಜತೆಗೆ ಚರ್ಚಿಸಿ, ಮೇ 24 ಅಥವಾ 25ರ ಒಳಗೆ ಮುಂದಿನ ಕ್ರಮದ ಬಗ್ಗೆ ಅಂತಿಮ ತೀರ್ಮಾನ ಮಾಡಲಿದ್ದೇವೆ ಎಂದು ಪಾಟೀಲ್ ಅವರು ತಿಳಿಸಿದರು.
ರಾಜ್ಯದಲ್ಲಿ ಆರಂಭ ಆಗಲಿರುವ ಎಸ್ಐಆರ್ ರಾಜ್ಯದಲ್ಲಿ ಯಾವುದೇ ಪ್ರಜೆಯ ಮತದಾನದ ಹಕ್ಕನ್ನು ಉದ್ದೇಶಪೂರ್ಣವಾಗಿ ಕಸಿಯುವ, ದಮನ ಮಾಡುವ ಕ್ರಿಯೆಗಳು ನಡೆಯದಂತೆ ನೋಡಿಕೊಳ್ಳಬೇಕು. ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯದಿದ್ದರೆ, ನಾವು ನ್ಯಾಯಾಲಯಕ್ಕೆ ಹೋಗುವುದಕ್ಕೂ ಅವಕಾಶಗಳಿವೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ರಾಜ್ಯದಲ್ಲಿ ನಡೆದಿರುವ ಜನಗಣತಿ, ಹಿಂದೆ ನಡೆದಿರುವ ಜಾತಿಗಣತಿ ಹಾಗೂ ಮುಂದೆ ಕೇಂದ್ರದಿಂದ ನಡೆಯಲಿರುವ ಜಾತಿ ಗಣತಿಗಳ ಬಗ್ಗೆಯೂ ಪ್ರಸ್ತಾಪವಾಯಿತು.
ರಾಜ್ಯದಲ್ಲಿ ಈಗ ಜನಗಣತಿ ಪ್ರಕ್ರಿಯೆ ನಡೆದಿದ್ದು, ಈ ವೇಳೆ ಶೇಕಡ 6ರಷ್ಟು ಮನೆಗಳಿಗೆ (ಲಾಕ್ಡ್ ಹೌಸಸ್) ಬೀಗ ಹಾಕಿರುವುದು ಕಂಡುಬಂದಿದೆ. ಇದು ಎಸ್ಐಆರ್ ಪ್ರಕ್ರಿಯೆಯಲ್ಲೂ ಪ್ರತಿಬಿಂಬಿಸುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಆತಂಕ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.