ಉದ್ಯೋಗ ತರಬೇತಿ ಕೇಂದ್ರ ತೆರೆಯುವ ಚಿಂತನೆ; ಸಚಿವ ಪ್ರಿಯಾಂಕ್ ಖರ್ಗೆ

KannadaprabhaNewsNetwork |  
Published : Jul 11, 2024, 01:32 AM IST
ಪ್ರಿಯಾಂಕ ಖರ್ಗೆ | Kannada Prabha

ಸಾರಾಂಶ

ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ತುಮಕೂರು

ಜಿಲ್ಲೆಯಲ್ಲಿ ವಿವಿಧ ಪದವಿ ಹೊಂದಿದವರ ಕೌಶಲ್ಯವನ್ನು ಹೆಚ್ಚಿಸಲು ನಗರ ಕೇಂದ್ರ ಗ್ರಂಥಾಲಯದ ಮೂರನೇ ಮಹಡಿಯಲ್ಲಿ ಕೌಶಲ್ಯ ತರಬೇತಿ ಕೇಂದ್ರ ತೆರೆಯುವ ಚಿಂತನೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಶಿಕ್ಷಣದ ಜೊತೆಗೆ ಕೌಶಲ್ಯಗಳನ್ನು ಕಲಿಯುವುದು ಅನಿವಾರ್ಯವಾಗಿದೆ. ಜಿಲ್ಲೆಯಲ್ಲಿರುವ ಮೆಡಿಕಲ್ ಕಾಲೇಜು ಹಾಗೂ ಇಂಜಿನಿಯರ್ ಕಾಲೇಜುಗಳಿಂದ ಉತ್ತೀರ್ಣರಾಗಿ ಹೊರಬರುವ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಿ ಅವರ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ಉದ್ಯೋಗ ಪಡೆಯಲು ಅನುವು ಮಾಡಿಕೊಡಬೇಕೆಂಬ ಸದುದ್ದೇಶದಿಂದ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಗ್ರಂಥಾಲಯದ 3ನೇ ಮಹಡಿಯಲ್ಲಿ ಸುಮಾರು 11,00 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಕಟ್ಟಡದಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗಾಗಿ ಕೌಶಲ್ಯ ತರಬೇತಿ ಕೇಂದ್ರವನ್ನು ತೆರೆಯುವ ಬಗ್ಗೆ ಸ್ಥಳೀಯ ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳೊಂದಿಗೆ ಚರ್ಚಿಸಿದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕೌಶಲ್ಯ ತರಬೇತಿ ಕೇಂದ್ರದಲ್ಲಿ ಪ್ರಮುಖವಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಕೌಶಲ್ಯ ಹೆಚ್ಚಿಸುವ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆಯಲ್ಲದೇ, 10ನೇ ತರಗತಿ/ ಪಿಯುಸಿ/ಐಟಿಐ ಅನುತ್ತೀರ್ಣರಾದವರಿಗೂ ತರಬೇತಿ ನೀಡಲು ಯೋಜಿಸಲಾಗಿದೆ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಹೆಚ್ಚಿಸಲು ಈ ಕೇಂದ್ರ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಸಚಿವರು ಗ್ರಂಥಾಲಯದ ಮೊದಲ ಮಹಡಿಯಲ್ಲಿರುವ ಗ್ರಂಥಾಲಯದ ವಿಭಾಗ, ಡಿಜಿಟಲ್ ಗ್ರಂಥಾಲಯ ವಿಭಾಗ, ಮಕ್ಕಳ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಕ್ಕಳ ಗ್ರಂಥಾಲಯ ವಿಭಾಗದಲ್ಲಿ ವಯೋಮಾನದ ಅಧಾರದಲ್ಲಿ ಮಕ್ಕಳಲ್ಲಿ ಕುತೂಹಲ ಹೆಚ್ಚಿಸುವ ಪುಸ್ತಕಗಳನ್ನು ಇಡಬೇಕೆಂದು ಸಲಹೆ ನೀಡಿದರಲ್ಲದೇ ಮಕ್ಕಳ ವಿಭಾಗದ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಂಥಾಲಯದ ವಾತಾವರಣದಲ್ಲಿ ತರಬೇತಿಯಂತಹ ಇನ್ನಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ವಿದ್ಯಾರ್ಥಿಗಳ ಓದಿಗೆ ತೊಂದರೆಯಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಿರುದ್ಯೋಗಿ ವಿದ್ಯಾರ್ಥಿಗಳ ಉದ್ಯೋಗಾವಕಾಶಕ್ಕಾಗಿಯೇ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆಯೇ ಹೊರತು, ವಾಣಿಜ್ಯ ಉದ್ದೇಶಕ್ಕಾಗಿ ಅಲ್ಲ. ಜಿಲ್ಲಾ ಸಚಿವರು, ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು. ಶಾಸಕ ಜ್ಯೋತಿ ಗಣೇಶ್, ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ದರ್ಶನ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರವೀಶ್, ಗ್ರಂಥಾಲಯ ಇಲಾಖೆ ಉಪನಿರ್ದೇಶಕ ಸರೋಜಮ್ಮ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮೀಣರ ಶುದ್ಧ ಕುಡಿಯುವ ನೀರಿಗೆ ಅಗತ್ಯ ಕ್ರಮ: ಸಚಿವ

ತರಬೇತಿ ಕೇಂದ್ರ ತೆರೆಯುವುದು ಹೇಳಿಕೆಯಾಗಿಯೇ ಉಳಿಯಬಾರದು. ಕಾರ್ಯರೂಪಕ್ಕೆ ತರಬೇಕೆಂಬ ಹಿನ್ನೆಲೆಯಲ್ಲಿ ಗೃಹ ಸಚಿವರ ಸಲಹೆ ಮೇರೆಗೆ ಈ ಭೇಟಿ ನೀಡಿದ್ದೇನೆ, ಅಲ್ಲದೇ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ನೀರಿನ ಘಟಕ ಕೆಟ್ಟು ನಿಂತಿವೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶುದ್ಧ ನೀರಿನ ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದ್ದು, ಇನ್ನು ಮುಂದೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಎಲ್ಲ ಶುದ್ಧ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಈಗಾಗಲೇ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಮುಂದಿನ ಐದಾರು ತಿಂಗಳೊಳಗಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ತುಮಕೂರು ನಗರದ ಭೇಟಿಗೂ ಮುನ್ನ ಸಚಿವರು ಜಿಲ್ಲೆಯ ಪಾವಗಡ ತಾಲೂಕಿಗೆ ಭೇಟಿ ನೀಡಿ ತಾಲೂಕಿನ ಶುದ್ಧ ಕುಡಿಯುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗೆ ಪ್ರಾಯೋಗಿಕ ಚಾಲನೆಯನ್ನು ಪರಿವೀಕ್ಷಿಸಿದರು. ಪಾವಗಡ ಹಾಗೂ ಚಳ್ಳಕೆರೆ ಭಾಗದ ಸುಮಾರು 1138 ಗ್ರಾಮಗಳಿಗೆ ನೀರೊದಗಿಸುವ 2300 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಿರುವ ಬೃಹತ್ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು