ಕೆಲಸ ಮಾಡಲು ಮನಸ್ಸು ಇಲ್ಲದವರು ವರ್ಗಾವಣೆ ಮಾಡಿಸಿಕೊಂಡು ಹೋಗಿ

KannadaprabhaNewsNetwork |  
Published : Feb 08, 2026, 01:15 AM IST
ಮಧುಗಿರಿಯ ತಾಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಕೆ.ಎನ್‌.ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಸರ್ಕಾರಿ ಸಂಬಳ ತೆಗೆದುಕೊಂಡು ಶ್ರೀಸಾಮಾನ್ಯರ ಕೆಲಸ ಮಾಡಲು ಮನಸ್ಸು ಇಲ್ಲದವರು ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ಎಂದು ಶಾಸಕ ಕೆ.ಎನ್‌.ರಾಜಣ್ಣ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮಧುಗಿರಿ

ಸರ್ಕಾರಿ ಸಂಬಳ ತೆಗೆದುಕೊಂಡು ಶ್ರೀಸಾಮಾನ್ಯರ ಕೆಲಸ ಮಾಡಲು ಮನಸ್ಸು ಇಲ್ಲದವರು ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ಎಂದು ಶಾಸಕ ಕೆ.ಎನ್‌.ರಾಜಣ್ಣ ಅಧಿಕಾರಿಗಳ ಕಾರ್ಯ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ 3ನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀಸಾಮಾನ್ಯರ ಕೆಲಸ ಮಾಡದ ಅಧಿಕಾರಿಗಳು ಉಪಯೋಗಕ್ಕೆ ಬಾರದವರು. ಜನರ ಅಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಲು ಆಗದಿದ್ದರೆ ಇಲ್ಲಿ ಉಳಿಯುವ ಅಗತ್ಯವಿಲ್ಲ ಎಂದು ಕಿಡಿ ಕಾರಿದರು. ಸರ್ಕಾರದ ಯೋಜನೆಗಳ ಅನುದಾನ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಕಾರ್ಯ ಮಾಡಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿಗಳು ಗಡುವಿನ ಒಳಗೆ ಪೂರ್ಣಗೊಳ್ಳದೆ ವಿಳಂಬವಾಗುತ್ತಿವೆ ಕಾಮಗಾರಿಗಳನ್ನು ಈ ತಿಂಗಳ ಒಳಗಾಗಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.

ವೀರಾಪುರಕ್ಕೆ ಬರುತ್ತಿದ್ದ ಸಾರಿಗೆ ಬಸ್ ನಿಲ್ಲಿಸಿದ್ದು ಏಕೆ ಎಂದು ಡಿಪೋ ಮ್ಯಾನೇಜರನ್ನು ತರಾಟೆಗೆ ತೆಗೆದು ಕೊಂಡ ಶಾಸಕರು, ನಮ್ಮ ತಾಲೂಕಿಂದ ಕೈಗಾರಿಕಾ ಪ್ರದೇಶ ವಸಂತನರಸಾಪುರಕ್ಕೆ ಸಾಕಷ್ಟು ಕೂಲಿ ಕಾರ್ಮಿಕರು ಹೋಗುತ್ತಿದ್ದು, ಬೆಳಿಗ್ಗೆ ಸಂಜೆ ಅವರಿಗೆ ಹೋಗಿ ಬರಲು ಬಸ್‌ ಸಂಚರಿಸಬೇಕು ಮತ್ತು ವೀರಾಪುರದ ಬಸನ್ನು ಪುನಃ ಓಡಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಸಂಜೆ ಅವರವರ ಗ್ರಾಮಗಳಿಗೆ ಹೋಗಿ ಬರಲು ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದರು.

ಬಾಕಿ ಇರುವ 163 ಜೆಜೆಎಂ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಲು ಸೂಚಿಸಿ ಸಿಎಂ ವಿಶೇಷ ರಸ್ತೆ ಯೋಜನೆಯಡಿ ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ, ಸೇತುವೆ ಸರಿಪಡಿಸಲು 10 ಕೋಟಿ ಅನುದಾನ ನೀಡಿದ್ದರು. ಕಾಮಗಾರಿ ಮಾಡಿ ಬಿಲ್ ಸಲ್ಲಿಸಿಲ್ಲ ಏಕೆ ಎಂದು ಡಿಸಿ ಪ್ರಶ್ನಿಸಿದಾಗ ಜಿಪಂ ಅಧಿಕಾರಿ ಈ ಪೈಕಿ 6 ಕಾಮಗಾರಿಗಳು ಪೂರ್ಣಗೊಂಡಿದ್ದು,7 ಕಾಮಗಾರಿಗಳು ಪ್ರಗತಿಯಲ್ಲಿವೆ ಬಿಲ್‌ ನೀಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾತನಾಡಿ, ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿಗೆ ತೊಂದರೆ ಆಗದಂತೆ ಮುನನ್ನಚ್ಚರಿಕೆ ವಹಿಸಬೇಕು ಎಂದರು. ಸಮಾಜ ಕಲ್ಯಾಣ, ಬಿಸಿಎಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿ ಎಲ್ಲ ಹಾಸ್ಟೆಲ್‌ಗಳಲ್ಲಿ ಮೆನು ಪ್ರಕಾರ ವಿದ್ಯಾರ್ಥಿಗಳಿಗೆ ಪೌಷ್ಠಿಕ ಗುಣಮಟ್ಟದ ಆಹಾರ ನೀಡಬೇಕು. ಮಕ್ಕಳಿಗೆ ಶುದ್ಧ ಕುಡಿಯವ ನೀರು ಕಡ್ಡಾಯವಾಗಿ ಒದಿಗಿಸಿ ನೀರಿನ ಟ್ಯಾಂಕನ್ನು ಸಂಪುಗಳನ್ನು ಆಗಾಗ್ಗೆ ಸ್ವಚ್ಛಗೊಳಿಸಬೇಕು.ವಿದ್ಯಾರ್ಥಿಗಳ ಆರೋಗ್ಯ ಕಾಪಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಕೂಲಿ ಮಾಡಿ ಬದುಕುತ್ತಿರುವ ಫಲಾನುಭವಿಗಳಿಗೆ ಸರ್ಕಾರದ ಹಲವು ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕೆಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಶುಭಕಲ್ಯಾಣ್‌ ಸೂಚಿಸಿದರು. ಅರ್ಹ ಕಾರ್ಮಿಕರು ನೊಂದಣಿ ವಿಮೆ ಹಾಗೂ ಇತರೆ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯುವಂತೆ ಜನ ಜಾಗೃತಿ ಮೂಡಿಸಬೇಕು ಎಂದರು. ಕಾಮಾಗಿರಗಳ ಬಗ್ಗೆ ಚರ್ಚಿಸಿ ಬೇಸಿಗೆಯಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಜನತೆಗೆ ಕುಡಿವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ಮುನ್ನಚ್ಚರಿಕೆ ಕ್ರಮ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಇಗೆ ಸೂಚಿಸಿದರು.

ರೇಷ್ಮೆ, ತೋಟಗಾರಿಕೆ, ಕಾರ್ಮಿಕ ಇಲಾಖೆ,ಎತ್ತಿನ ಹೊಳೆ, ಗ್ರಾಮೀಣ ರಸ್ತೆ ಅಬಿವೃದ್ಧಿ ,ಕುಡಿಯವ ನೀರಿನ ಯೋಜನೆಗಳು ಪಡಿತರ ವಿತರಣೆ,ಆರೋಗ್ಯ ಸೇವೆಗಳು ಶಿಕ್ಷಣ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿ , ಪುರಸಭೆ ಸೇರಿದಂತೆ ವಿವಿಧ ವಿಭಾಗಗಳ ಪ್ರಗತಿ ಪರಿಶೀಲನೆ ನಡೆಯಿತು.

ಭೆಯಲ್ಲಿ ಎಸಿ ಗೋಟೂರು ಶಿವಪ್ಪ.ತಹಸೀಲ್ದಾರ್ ಶ್ರೀನಿವಾಸ್‌, ಇಒ ಲಕ್ಷ್ಮಣ್, ಡಿವೈಎಸ್‌ಪಿ ಮಂಜುನಾಥ್‌, ತಾಪಂ ಯೋಜನಾಧಿಕಾರಿ ಸೋನಿಯಾ ವರ್ಣಿಕರ್, ಎಡಿ ಧನಂಜಯ್‌, ಟಿಎಪಿಸಿಎಂಎಸ್‌ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚೌಡಪ್ಪ, ಕೆಡಿಪಿ ಸದಸ್ಯರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು
ಸಮಸ್ಯೆ ಬಗೆ ಹರಿಸದಿದ್ದರೇ ತೀವ್ರ ಹೋರಾಟ