ದಾಬಸ್ಪೇಟೆ: ಕೀಟ ಚಿಕ್ಕದಾದರೂ ಅದರಿಂದಾಗುವ ಕಾಟ ದೊಡ್ಡದು. ಸೊಳ್ಳೆಗಳ ಕಡಿತದಿಂದ ಮಲೇರಿಯಾ, ಡೆಂಘೀ, ಚಿಕೂನ್ಗುನ್ಯಾ, ಆನೆಕಾಲು ರೋಗಗಳಂತಹ ಕಾಯಿಲೆಗಳು ಹರಡುತ್ತವೆ. ಮಲಗುವಾಗ ಕಡ್ಡಾಯವಾಗಿ ಸೊಳ್ಳೆ ಪರದೆ ಬಳಸಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಅಶ್ವಿನಿ ತಿಳಿಸಿದರು.
ಮನೆ ಸುತ್ತಮುತ್ತ ತೆಂಗಿನಕಾಯಿ ಚಿಪ್ಪು, ಹಳೆಯ ಟೈರ್, ಒಡೆದ ಬಾಟಲಿಗಳು ಹಾಗೂ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. 1897ರಲ್ಲಿ ಸರ್ ರೊನಾಲ್ಡ್ ರಾಸ್ ಅವರು ಸೊಳ್ಳೆಗಳು ಮಲೇರಿಯಾ ರೋಗವನ್ನು ಹರಡುತ್ತವೆ ಎಂದು ಕಂಡುಹಿಡಿದರು, ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ರೋಗಗಳನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳಲು ಈ ದಿನವನ್ನು ಮೀಸಲಿಡಲಾಗಿದೆ ಎಂದರು.
ಶಾಲಾ ಮುಖ್ಯಶಿಕ್ಷಕ ರುದ್ರಯ್ಯ ಮಾತನಾಡಿ, ಪ್ರತಿಯೊಬ್ಬರೂ ಸ್ವಚ್ಛತೆಗೆ ಗಮನಹರಿಸಬೇಕು. ಮಳೆಗಾಲ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಮನೆಯ ಸುತ್ತಮುತ್ತ ಬೀಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು, ಡೆಂಘೀ ಹರಡುವುದನ್ನು ನಿಯಂತ್ರಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು ಎಂದರು.ಆರೋಗ್ಯ ಸಿಬ್ಬಂದಿ ವರ್ಗದವರಾದ ಪೂರ್ಣಿಮಾ, ಪವಿತ್ರಾ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.