ಕೊಪ್ಪಳ/ಗಂಗಾವತಿ:
ಗಂಗಾವತಿ ತಾಲೂಕಿನ ಹಿರೇಬೆಣಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಕೊಪ್ಪಳ ತಾಲೂಕಿನ ಬಹದ್ದೂರಬಂಡಿಯ ಶಾಂತವೀರ ಸ್ವಾಮಿ ಗಂಗಾಧರ ಗಂಧದಮಠ(57), ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ಅಬ್ದುಲ್ ಖಾಜವಲಿ ( 27), ಕೊಪ್ಪಳ ತಾಲೂಕಿನ ಅಗಳಕೇರಿಯ ದೇವಮ್ಮ ನರೇಗಲ್ (68) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಾಂತವೀರ ಸ್ವಾಮಿ ಅವರು, ಆರ್ಟ್ ಆಫ್ ಲಿವಿಂಗ್ ಯೋಗ ಶಿಕ್ಷಕರಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ನಿಧನರಾದರು.ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವಿದೆ.
ಐದು ದಿನಗಳ ಹಿಂದೇ ಹೃದಯಾಘಾತದಿಂದ ನಿಧನರಾಗಿದ್ದ ಕೊಪ್ಪಳ ತಾಲೂಕಿನ ಅಗಳಿಕೇರಿಯ ರಾಮಣ್ಣ ನರೇಗಲ್ (76) ಅವರ ಪತ್ನಿ ದೇವಮ್ಮ(68) ಪತಿ ನಿಧನದಿಂದ ಆಘಾತಕ್ಕೆ ಒಳಗಾಗಿ ಗುರುವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಕೊಪ್ಪಳ ಭಾಗ್ಯನಗರದ ಮಂಜುಳಾ ಹಾಗೂ ಕುಷ್ಟಗಿಯ ಶಾಸಕ ದೊಡ್ಡನಗೌಡ ಪಾಟೀಲ ಆಪ್ತ ಸಹಾಯಕ ಸಹ ಚಂದ್ರು ವಡಿಗೇರಿ (46) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ ವಾರದಲ್ಲಿಯೇ 6 ಕ್ಕೇರಿದೆ.