ಶಿರಸಿ: ತಾಲೂಕಿನಾದ್ಯಂತ ಅ. ೨೦ ಹಾಗೂ ೨೧ರಂದು ಗುಡುಗು, ಸಿಡಿಲುಸಹಿತ ಧಾರಾಕಾರವಾಗಿ ಸುರಿದ ಮಳೆಗೆ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.ಅ. ೨೦ರಂದು ರಾತ್ರಿ ೧೦ ಗಂಟೆ ಸುಮಾರಿಗೆ ಗುಡುಗು- ಸಿಡಿಲಿನ ಆರ್ಭಟಕ್ಕೆ ಗ್ರಾಮೀಣ ಭಾಗದ ಕೆಲ ಮನೆಗಳ ಯಂತ್ರೋಪಕರಣಗಳಿಗೆ ಹಾನಿಯಾದರೆ, ನಗರ ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಮನೆಯೊಳಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ.
ನಾಳೆ ರಾಜ್ಯಮಟ್ಟದ ಜೇನು ಕೃಷಿಕರ ಕಾರ್ಯಾಗಾರ
ಶಿರಸಿ: ಕೃಷಿ, ತೋಟಗಾರಿಕೆ ಹಾಗೂ ಅರಣ್ಯ ಉತ್ಪನ್ನಗಳ ಅಭಿವೃದ್ಧಿ ಹಾಗೂ ಮೌಲ್ಯವರ್ಧನೆಗಾಗಿ ಜೇನು ಕೃಷಿಗೆ ಉತ್ತೇಜನ ನೀಡುವ ಉದ್ದೇಶಕ್ಕಾಗಿ ಅ. ೨೩ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಟಿಎಂಎಸ್ ಸಭಾಭವನದಲ್ಲಿ ರಾಜ್ಯಮಟ್ಟದ ಒಂದು ದಿನದ ಜೇನು ಕೃಷಿಕರ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸ್ಕೋಡ್ವೆಸ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವೆಂಕಟೇಶ ನಾಯ್ಕ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೇನು ಕೃಷಿಕರು, ಉದ್ಯಮವಾಗಿ ಜೇನು ಕೃಷಿಯನ್ನು ಅಭಿವೃದ್ಧಿಪಡಿಸಲು ಆಸಕ್ತಿ ಇರುವವರು, ಜೇನು ಮೌಲ್ಯವರ್ಧನೆ ಮಾಡಲು ಆಸಕ್ತಿ ಇರುವವರು, ಪರಿಸರ ಸಂರಕ್ಷಣೆ, ಅರಣ್ಯ ಅಭಿವೃದ್ಧಿ, ಜೀವ ವೈವಿಧ್ಯತೆಯ ಸಂರಕ್ಷಣೆಯಲ್ಲಿ ಆಸಕ್ತಿ ಇರುವವರು ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು, ಜೇನು ಕೃಷಿ, ಮೌಲ್ಯವರ್ಧನೆ ಹಾಗೂ ಉದ್ಯಮವಾಗಿ ಜೇನುಕೃಷಿಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮಾಹಿತಿ ನೀಡುವರು. ಅಲ್ಲದೇ ಜೇನು ಕೃಷಿಗೆ ಪೂರಕವಾಗಿರುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಹಣಕಾಸು ಅಧಿಕಾರಿ ಸರಸ್ವತಿ ಎನ್. ರವಿ, ಕಾರ್ಯಕ್ರಮ ಅಧಿಕಾರಿ ನಾರಾಯಣ ಹೆಗಡೆ ಮತ್ತಿತರರು ಇದ್ದರು.