ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಉಪಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು. ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ಕನ್ನಡಪ್ರಭವಾರ್ತೆ ಚನ್ನಪಟ್ಟಣ
ದೆಹಲಿಯಲ್ಲಿ ಬಿಜೆಪಿ ಹಿರಿಯ ಮುಖಂಡರ ಜತೆ ಪಕ್ಷದ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ನಾಯಕರು ಹಾಗೂ ಎಚ್.ಡಿ.ಕುಮಾರಸ್ವಾಮಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ. ಚುನಾವಣೆ ಘೋಷಣೆಯಾದ ಮೇಲೆ ಟಿಕೆಟ್ ಬಗ್ಗೆ ತೀರ್ಮಾನ ಆಗುತ್ತೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿಯ ವೇಳೆ ನಮ್ಮ ಹೈಕಮಾಂಡ್ ನಾಯಕರು ಹಲವು ಸಲಹೆ, ಸೂಚನೆ ನೀಡಿದ್ದಾರೆ. ಎರಡೂ ಪಕ್ಷದ ಮುಖಂಡರು ಒಟ್ಟಾಗಿ ಚುನಾವಣೆಗೆ ಹೋಗಬೇಕು. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧವಾಗಿರಬೇಕು ಎಂದರು. ದೆಹಲಿ ಪ್ರವಾಸದಲ್ಲಿ ಎಲ್ಲಾ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಂಡಿದ್ದೇನೆ. ಕ್ಷೇತ್ರದ ವಿದ್ಯಮಾನದ ಬಗ್ಗೆ ಹೈಕಮಾಂಡ್ಗೆ ಮಾಹಿತಿ ನೀಡಿದ್ದೀನಿ. ಕಾಂಗ್ರೆಸ್ ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತವಾಗಿದೆ. ನಾನು ಇಲ್ಲಿ ಆತುರ ಪಡುವ ಅವಶ್ಯಕತೆ ಇಲ್ಲ ಎಂದರು. ಎನ್ಡಿಎ ಯಾರೇ ಅಭ್ಯರ್ಥಿ ಆಗಲಿ, ಬೇಗ ತೀರ್ಮಾನ ಆದರೆ ಒಳ್ಳೆಯದು. ಇದು ಉಪಚುನಾವಣೆ ಆಗಿರೋದ್ರಿಂದ ಇಡೀ ರಾಜ್ಯ ಸರ್ಕಾರ ಚುನಾವಣೆ ಮಾಡುತ್ತೆ. ಚುನಾವಣೆಯಲ್ಲಿ ಪರೋಕ್ಷವಾಗಿ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸರ್ಕಾರದ ವಿರುದ್ಧ ನಾವು ಹೋರಾಡಬೇಕಿದೆ. ಎರಡೂ ಪಕ್ಷದ ಹಿರಿಯರು ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದರು. ಪಕ್ಷದ ಜತೆ ಇರುತ್ತೇನೆ: ವರಿಷ್ಠರ ಭೇಟಿ ಬಳಿಕ ಪಕ್ಷ ನನ್ನ ಜೊತೆ ಇದೆ, ಪಕ್ಷದ ವರಿಷ್ಠರು ಜತೆಗಿದ್ದಾರೆ ಅಂತ ಅನ್ನಿಸಿದೆ. ಟಿಕೆಟ್ ಸಿಗಲಿ, ಸಿಗದೇ ಇರಲಿ ನಾನು ಪಕ್ಷದ ಜತೆ ಇರ್ತೇನೆ. ನೀನು ಆತುರ ಪಡಬೇಡ ಇರು ಅಂತ ಪಕ್ಷ ಹೇಳಿದೆ. ಹಾಗಾಗಿ ಪಕ್ಷದ ಆದೇಶ ಮೀರಿ ಹೋಗಬಾರದು ಅಂತ ಅನ್ನಿಸ್ತಿದೆ ಎಂದರು. ಅತಂತ್ರವಾದ ಕಾಂಗ್ರೆಸ್ ಸರ್ಕಾರ ಏನು ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಸರ್ಕಾರ ಇರುತ್ತಾ, ಇರಲ್ವಾ ಅಂತ ಗೊತ್ತಿಲ್ಲ. ಸರ್ಕಾರ ಹಗರಣಗಳಲ್ಲಿ ನಲುಗುತ್ತಿದೆ. ಈ ಸಂದರ್ಭದಲ್ಲಿ ಈ ಚುನಾವಣೆ ಗೆಲ್ಲಬೇಕು ಎನ್ನುವ ಹಠ ಮೈತ್ರಿ ಪಕ್ಷದಲ್ಲಿದೆ. ಹಾಗಾಗಿ ಎರಡು ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡಬೇಕು ಎಂದರು. ಚನ್ನಪಟ್ಟಣ ಕ್ಷೇತ್ರವನ್ನ ಜೆಡಿಎಸ್ ಉಳಿಸಿಕೊಂಡ್ರೆ ಮುಂದಿನ ನಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಪಕ್ಷದ ಜೊತೆ ನಿಲ್ಲಬೇಕು ಅಂತ ತೀರ್ಮಾನ ಮಾಡಿದ್ದೀನಿ. ಕುಮಾರಸ್ವಾಮಿ ಅವರೇ ಜೆಡಿಎಸ್ಗೆ ಟಿಕೆಟ್ ತಕೊಂಡ್ರೆ ನಾನು ಕೆಲಸ ಮಾಡ್ತೇನೆ. ನಾನು ಹಾಗೂ ನಮ್ಮ ಕಾರ್ಯಕರ್ತರು ಅವರ ಪರವಾಗಿ ಕೆಲಸ ಮಾಡ್ತೇವೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡ್ರು ನಾನು ಬದ್ಧ. ಮುಂದೆ ಅವಕಾಶ ಬರುತ್ತಿರುತ್ತೆ ಕಾದು ನೋಡೋಣ ಎಂದರು.
ನಾನು ಸ್ಪರ್ಧೆ ಮಾಡಬೇಕು ಅನ್ನೋದು ಕಾರ್ಯಕರ್ತರ ಒತ್ತಾಯ. ಇಷ್ಟು ವರ್ಷ ಪಕ್ಷದ ಜೊತೆ ಕೆಲಸ ಮಾಡಿದ್ದೀನಿ.ಸಾಕಷ್ಟು ಏಳು-ಬೀಳು ಕಂಡಿದ್ದೇನೆ. ಹಾಗಾಗಿ ಪಕ್ಷದ ಜೊತೆ ಹೋಗೋದು ಒಳ್ಳೆಯದು ಎಂಬುದು ಹಿತೈಷಿಗಳ ಭಾವನೆಯಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.