ದುಗ್ಗಳ ಸದಾನಂದ
ನೆಲಜಿ ಮತ್ತು ಕುಂಜಿಲ ಗ್ರಾಮದ ಗಡಿಭಾಗದಲ್ಲಿ ಕಾಡು ಕುರಿಯೊಂದನ್ನು ಹುಲಿಯೊಂದು ಅಟ್ಟಿಸಿಕೊಂಡು ಹೋಗಿರುವುದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.
ನೆಲಜಿ ಗ್ರಾಮದ ಅಚ್ಚಾಂಡಿರ ಹಾಗೂ ಕಲಿಯಾಟಂಡ ತೋಟದ ಮಧ್ಯೆ ಬರುವ ಕೊಲ್ಲಿಯ ಬಳಿ ಚೀಯಕಪೂವಂಡ ಉಮೇಶ್ ಎಂಬವರ ಕಾಫಿ ತೋಟದಲ್ಲಿ ಮಂಗಳವಾರ ಬೆಳಗ್ಗೆ ಕಾರ್ಮಿಕ ತಮಿಳರ ವೇಲು ಎಂಬಾತ ಕೆಲಸ ನಿರ್ವಹಿಸುತ್ತಿರುವಾಗ ಅಲ್ಲೇ ಸಮೀಪದ ಕಾಡಿನಲ್ಲಿ ಕಾಡು ಕುರಿಯನ್ನು ಹುಲಿ ಅಟ್ಟಿಸಿಕೊಂಡು ಹೋಗಿರುವುದನ್ನು ಕಂಡಿರುವುದಾಗಿ ಉಮೇಶ್ ತಿಳಿಸಿದ್ದಾರೆ.ಈ ಬಗ್ಗೆ ಮಾಹಿತಿ ಲಭ್ಯವಾದ ಕೂಡಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯ ಗಸ್ತು ಅರಣ್ಯಪಾಲಕರಾದ ಕಾಳೇಗೌಡ, ಸೋಮಣ್ಣ ಗೌಡ, ಸಿಬ್ಬಂದಿ ರಾಹುಲ್ ಕೆ.ಎಲ್. ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಹುಲಿ ಕಂಡು ಬಂದಿದೆ ಎನ್ನಲಾದ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ದಾರೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರ ಮಾಳೆಯಂಡ ಅಪ್ಪಣ್ಣ ಪ್ರತಿಕ್ರಿಯಿಸಿ, ನೆಲಜಿ ಗ್ರಾಮದ ಮಡಿವಾಳರ ಶಾರದ ಅವರ ಸಾಕು ನಾಯಿಯನ್ನು ವಾರದ ಹಿಂದೆ ಪ್ರಾಣಿಯೊಂದು ಕಚ್ಚಿಕೊಂಡು ಹೋಗಿದ್ದು, ಇದು ಚಿರತೆ ಆಗಿರಬಹುದು ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೆ ಸಮೀಪದ ಮಲ್ಮ ಬೆಟ್ಟದಲ್ಲಿ ಚಿರತೆಯ ಹಿಕ್ಕೆಯನ್ನು ಗ್ರಾಮಸ್ಥರು ನೋಡಿದ್ದಾರೆ ಎಂದು ತಿಳಿಸಿದ್ದಾರೆ.