ದಕ್ಷಿಣ ಕೊಡಗಿನಲ್ಲಿ ಕಳೆದ ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ದಕ್ಷಿಣ ಕೊಡಗಿನಲ್ಲಿ ಕಳೆದ ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಪೊನ್ನಂಪೇಟೆ ತಾಲೂಕಿನ ಬೆಸಗೂರಿನಲ್ಲಿ ಭೀಮ ಹಾಗೂ ಮಹೇಂದ್ರ ಸಾಕಾನೆ ಬಳಸಿ ಕಾರ್ಯಾಚರಣೆ ನಡೆಸಲಾಗಿದ್ದು, ಅಂದಾಜು 6 ವರ್ಷ ಪ್ರಾಯದ ಗಂಡು ಹುಲಿ ಸೆರೆಯಾಗಿದೆ. ಎಸಿಎಫ್ ಗೋಪಾಲ್ ನೇತೃತ್ವದಲ್ಲಿ 80 ಅರಣ್ಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಕಳೆದ ಒಂದು ತಿಂಗಳಲ್ಲಿ 7 ಹಸುಗಳನ್ನು ಬಲಿಪಡೆದಿತ್ತು. ಹುಲಿ ಸೆರೆ ಹಿಡಿಯುವಂತೆ ರೈತಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಸೆರೆ ಹಿಡಿದ ಹುಲಿಯನ್ನು ಬನ್ನೇರುಘಟ್ಟ ಅರಣ್ಯಕ್ಕೆ ಬಿಡಲಾಗಿದೆ. ಪೊನ್ನಂಪೇಟೆಯ ಬೆಸಗೂರಿನಲ್ಲಿ ಮಂಗಳವಾರ ಸೆರೆಸಿಕ್ಕ ಜಾನುವಾರು ಭಕ್ಷಕ ಹುಲಿಯನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸೌಧದ ತಮ್ಮ ಕಚೇರಿಯಲ್ಲಿದ್ದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವಿಧಾನಸೌಧದಿಂದ ಮೆಟ್ರೋ ಮುಖಾಂತರ ಕೆಂಗೇರಿಗೆ ತೆರಳಿ, ಸೆರೆ ಸಿಕ್ಕ ಹುಲಿಯೊಂದಿಗೆ ಬನ್ನೇರುಘಟ್ಟಕ್ಕೆ ತೆರಳುತ್ತಿದ್ದ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ಕ್ಷಿಪ್ರ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.