ಕನ್ನಡಪ್ರಭ ವಾರ್ತೆ ಹುಣಸಗಿ
ಜನತಾ ದರ್ಶನದಲ್ಲಿ ಬಂದಂತಹ ಅಹವಾಲುಗಳಿಗೆ ಸಾಧ್ಯವಾದಷ್ಟು ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಭರವಸೆ ನೀಡಿದರು.ಹುಣಸಗಿ ತಹಸೀಲ್ದಾರರ ಕಾರ್ಯಾಲಯದ ಆವರಣದಲ್ಲಿ ಗುರುವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧೆಡೆಯಿಂದ ಬಂದ ಹಲವಾರು ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿ ಮಾತನಾಡಿದರು.
ಜನರ ಸಮಸ್ಯೆಗಳಿಗೆ ನಾನಾ ಇಲಾಖೆಗಳ ಅಧಿಕಾರಿಗಳು ಕೂಡಲೇ ಸ್ಪಂದಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ. ಸಮಸ್ಯೆಗಳು ಸರ್ಕಾರದ ನೀತಿಗಳಿಗೆ ಸಂಬಂಧಿಸಿದ್ದರೆ, ಅದನ್ನು ಸೂಕ್ತ ಶಿಫಾರಸ್ಸಿನೊಂದಿಗೆ ಸರ್ಕಾರಕ್ಕೆ ರವಾನಿಸಲಾಗುವುದು. ರೈತರು ಹಾಗೂ ಹಿರಿಯ ನಾಗರಿಕರು ಕೂಡ ಲಿಖಿತ ಅಹವಾಲು ಸಲ್ಲಿಸಲು ನೆರವಾಗಲು ಪ್ರತ್ಯೇಕ ಕೇಂದ್ರ ತೆರೆದು, ಅರ್ಜಿ ಬರೆದುಕೊಡುವ ಮೂಲಕ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ಸಿಬ್ಬಂದಿ ನೆರವು ನೀಡುತ್ತಾರೆ ಎಂದರು.ಜನ ಸಲ್ಲಿಸಿದ ಅಹವಾಲುಗಳ ಪ್ರತಿ ಅರ್ಜಿಗೆ ಸ್ವೀಕೃತಿ ನೀಡಿ, ಅಹವಾಲು ಬಗೆಹರಿಸಲು ಕೈಗೊಳ್ಳಲಾಗುವ ಕ್ರಮಗಳ ಮಾಹಿತಿಯನ್ನು ಅರ್ಜಿದಾರರಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಂಚಾಯ್ತಿ ಅಭಿವೃದ್ಧಿ, ಸಮಾಜ ಕಲ್ಯಾಣ, ಜೆಸ್ಕಾಂ, ಆಹಾರ ಮತ್ತು ನಾಗರಿಕರ ಸರಬರಾಜು, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸೇರಿ ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಈ ಅರ್ಜಿಗಳ ವಿಲೇವಾರಿಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.ಈ ವೇಳೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾಜೊಲ್ ಪಾಟೀಲ, ತಹಸೀಲ್ದಾರ್ ಬಸಲಿಂಗಪ್ಪ ನಾಯ್ಕೋಡಿ , ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜಸ್ವಾಮಿ ಹಿರೇಮಠ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ವರ್ಗದವರಿದ್ದರು.