ಬ್ಯಾಡಗಿ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಬ್ಯಾಡಗಿ ಪಟ್ಟಣದಲ್ಲಿ ಬುಧವಾರ “ಯುಥ್ ಫಾರ್ ನೇಷನ್” ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ತಿರಂಗಾ ಯಾತ್ರೆ” ಅದ್ಧೂರಿಯಾಗಿ ನಡೆಯಿತು. ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರಾಭಿಮಾನ ಸಾರುವ ಉದ್ದೇಶದಿಂದ ಆಯೋಜಿಸಲಾಗಿದ್ದ ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು, ಯುವಕರು ಪಾಲ್ಗೊಂಡಿದ್ದರು.
100 ಅಡಿ ತಿರಂಗಾ: ಯಾತ್ರೆಯಲ್ಲಿ ಸುಮಾರು 100 ಅಡಿ ಉದ್ದದ ಬೃಹತ್ ತಿರಂಗ ಧ್ವಜವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಒಟ್ಟಾಗಿ ಹಿಡಿದು ಸಾಗಿದ್ದು ವಿಶೇಷ ಆಕರ್ಷಣೆಯಾಗಿತ್ತು. ಬೃಹತ್ ರಾಷ್ಟ್ರಧ್ವಜದೊಂದಿಗೆ ಸಾಗಿದ ದೃಶ್ಯ ಸಾರ್ವಜನಿಕರ ಗಮನ ಸೆಳೆಯಿತು. ಯಾವುದೇ ಪಕ್ಷಭೇದವಿಲ್ಲದೆ ರಾಷ್ಟ್ರಧ್ವಜದಡಿ ಎಲ್ಲರೂ ಒಂದಾಗಿ ಹೆಜ್ಜೆ ಹಾಕಿದ್ದು ಕಾರ್ಯಕ್ರಮದ ವಿಶೇಷತೆಯಾಗಿತ್ತು.
ಸ್ವಾತಂತ್ರ್ಯ, ತ್ಯಾಗ, ಬಲಿದಾನ ಫಲ: ತಿರಂಗಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರಾಭಿಮಾನ ಸಾರುವ ಉದ್ದೇಶದಿಂದ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಎಂಬುದು ಅನೇಕ ಮಹನೀಯರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಪ್ರತಿಯೊಬ್ಬರೂ ಸ್ಮರಿಸಬೇಕು. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ತಿರಂಗಾ ಯಾತ್ರೆ ಏಕತೆಯ ಸಂಕೇತ: ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ಛತ್ರದ ಮಾತನಾಡಿ, ದೇಶದ ಏಕತೆ ಮತ್ತು ಅಖಂಡತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ರಾಷ್ಟ್ರಭಕ್ತಿ ಕಾರ್ಯಕ್ರಮಗಳು ಮಹತ್ವದ್ದಾಗಿವೆ. ಯುವಜನತೆ ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ರೋಟರಿ ಕ್ಲಬ್, ಜಯ ಕರ್ನಾಟಕ, ವ್ಯಾಪಾರಸ್ಥರು, ವಕೀಲರ ಸಂಘ, ಜೈನದ ಸಮುದಾಯದ ಮುಖಂಡರು, ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು, ನೌಕರರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು, ಸೇರಿದಂತೆ ವಿವಿಧ ಸಮಾಜ ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.