ಕುಂದಾಪುರ: ದೇಶದ ಮಣ್ಣು, ಗೋಮಾತೆ ಹಾಗೂ ನದಿಗಳನ್ನು ತಾಯಿಯೆಂದು ಪೂಜಿಸುವ ವಿಶಿಷ್ಟ ಸಂಸ್ಕೃತಿ ಭಾರತದ್ದಾಗಿದ್ದು, ಇಂತಹ ಶ್ರೇಷ್ಠ ಪರಂಪರೆ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಹೋರಾಟಗಾರರು ಹಾಗೂ ಗಡಿಯಲ್ಲಿ ಹಗಲಿರುಳು ದೇಶ ಕಾಯುತ್ತಿರುವ ವೀರ ಯೋಧರ ಸ್ಮರಣಾರ್ಥ ತಿರಂಗಾ ಯಾತ್ರೆ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಹೇಳಿದರು.ಕುಂದಾಪುರ ಬಿಜೆಪಿ ಮಂಡಲ ಯುವ ಮೋರ್ಚಾ ನೇತೃತ್ವದಲ್ಲಿ ಮಂಗಳವಾರ ನಡೆದ ತಿರಂಗಾ ಯಾತ್ರೆಗೆ ಮುನ್ನ ಶಾಸ್ತ್ರಿ ಸರ್ಕಲ್ನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಕುಮಾರ್ ಶೆಟ್ಟಿ ಮಾತನಾಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಮಂಡಲ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ, ಸಂಪತ್, ಪ್ರಮುಖರಾದ ಸುಧೀರ್ ಕೆ.ಎಸ್, ರಾಜೇಶ್ ಕಾವೇರಿ, ವಿಠಲ ಪೂಜಾರಿ, ವಿಜಯ ಕೊಡವೂರು, ರತ್ನಾಕರ್ ಇಂದ್ರಾಳಿ, ಶಂಕರ್ ಅಂಕದಕಟ್ಟೆ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು, ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.ಭಾರತ ಮಾತೆಗೆ ಪುಷ್ಪಾರ್ಚನೆ: ಶಾಸ್ತ್ರಿ ಸರ್ಕಲ್ನಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು. ಬಳಿಕ ಪಾರಿಜಾತ ಸರ್ಕಲ್ ಮೂಲಕ ಮುಖ್ಯ ರಸ್ತೆಯಲ್ಲಿ ಸಾಗಿದ ಯಾತ್ರೆ ಹೊಸ ಬಸ್ ನಿಲ್ದಾಣ ತಲುಪಿ, ಅಲ್ಲಿಂದ ಪುನಃ ಶಾಸ್ತ್ರಿ ಸರ್ಕಲ್ಗೆ ಆಗಮಿಸಿ ಸಮಾಪನಗೊಂಡಿತು. ಯಾತ್ರೆಯುದ್ದಕ್ಕೂ ಕಾರ್ಯಕರ್ತರು ತ್ರಿವರ್ಣ ಧ್ವಜಗಳನ್ನು ಹಿಡಿದು ದೇಶಭಕ್ತಿಯ ಘೋಷಣೆಗಳನ್ನು ಮೊಳಗಿಸುವ ಮೂಲಕ ಸ್ವಾತಂತ್ರ್ಯೋತ್ಸವದ ಸಂಭ್ರಮ ಹೆಚ್ಚಿಸಿದರು.ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.