ಗುರಿ ಮುಟ್ಟಲು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು: ತಮ್ಮಯ್ಯ

KannadaprabhaNewsNetwork |  
Published : Aug 13, 2024, 12:45 AM IST
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಚಿಕ್ಕಮಗಳೂರಿನ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಉದ್ಘಾಟಿಸಿದರು. ದೇವೇಂದ್ರ, ಮಂಜುನಾಥಸ್ವಾಮಿ, ದೇವಾನಂದ್‌, ಓಂಕಾರಸ್ವಾಮಿ, ದರ್ಶನ್‌, ಡಾ. ಸಿ.ಟಿ. ಜಯದೇವ್‌ ಇದ್ದರು. | Kannada Prabha

ಸಾರಾಂಶ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಮುಂದಿನ ಆರು ವರ್ಷಗಳ ಕಾಲ ತಮ್ಮ ಎಲ್ಲಾ ಅಭಿಲಾಷೆಗಳನ್ನೂ ಬದಿಗಿಟ್ಟು ಒಂದೇ ಮನಸ್ಸಿನಿಂದ ವಿದ್ಯಾರ್ಜನೆ ಮಾಡಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘ, ನಗರದ ಎಐಟಿ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ನಂತರದ ಉನ್ನತ ಶಿಕ್ಷಣದ ಆರು ವರ್ಷಗಳ ಸಮಯ ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖವಾದ ಘಟ್ಟ, ಆ ಕಾಲ ನಮ್ಮ ಬದುಕನ್ನು ರೂಪಿಸುವ ಕಾಲ, ಆ ಸಂದರ್ಭದಲ್ಲಿ ನಾವು ಆಕರ್ಷಣೆ ಗಳಿಗೆ ಒಳಗಾಗಿ ಅತ್ತಿತ್ತ ಹೊರಳಿದರೆ ಬದುಕು ಹಾದಿ ತಪ್ಪುತ್ತದೆ ನಮ್ಮ ಗುರಿ ತಲುಪಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದರು.

ವಿದ್ಯಾರ್ಥಿಗಳಿಗೆ ಬಹಳಷ್ಟು ಅಭಿಲಾಷೆಗಳಿರುತ್ತವೆ. ಅವುಗಳನ್ನು ಪೂರೈಸಿಕೊಳ್ಳುವ ಸಮಯ ವಿದ್ಯಾರ್ಥಿದಿಸೆಯಲ್ಲ, ಉನ್ನತ ಶಿಕ್ಷಣ ಮುಗಿದ ನಂತರ ಅವುಗಳನ್ನು ಈಡೇರಿಸಿಕೊಳ್ಳಬಹುದು. ಹಾಗಾಗಿ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.ವಿದ್ಯಾರ್ಥಿಗಳು ಬದುಕಿನಲ್ಲಿ ನೆಲೆ ನಿಂತ ನಂತರ ಹೆತ್ತವರನ್ನು ಯಾವುದೇ ಕಾರಣಕ್ಕೂ ಮರೆಯಬಾರದು. ನಾವು ಈ ಮಟ್ಟಕ್ಕೆ ಬರಲು ಹೆತ್ತವರ ತ್ಯಾಗ, ಪರಿಶ್ರಮ ಕಾರಣ ಎಂಬುದನ್ನು ಅರಿತು ಅವರನ್ನು ಸಾಕಿ ಸಲಹಬೇಕು ಎಂದು ತಿಳಿಸಿದರು.ಎಐಟಿ ಪ್ರಾಂಶುಪಾಲ ಡಾ. ಸಿ.ಟಿ. ಜಯದೇವ್ ಮಾತನಾಡಿ, ಇದು ಜ್ಞಾನದ ಯುಗ, ಈ ಜಗತ್ತಿನಲ್ಲಿ ಜ್ಞಾನಕ್ಕೆ ಮಾತ್ರ ಬೆಲೆ ಎಂಬುದನ್ನು ವಿದ್ಯಾರ್ಥಿಗಳು ಮನಗಾಣಬೇಕು. ಬರೀ ಅಂಕಗಳಿಕೆಗೆ ಮಾತ್ರ ಸೀಮಿತರಾಗದೇ ಎಲ್ಲಾ ಕ್ಷೇತ್ರಗಳಲ್ಲೂ ಎಲ್ಲಾ ವಿಷಯಗಳಲ್ಲೂ ಜ್ಞಾನ ಬೆಳೆಸಿಕೊಳ್ಳಬೇಕು. ಕೌಶಲ್ಯ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ವೇಳೆ ಪೋಷಕರ ಆರ್ಥಿಕ ಶಕ್ತಿ ಅವರ ಪರಿಸ್ಥಿತಿಯನ್ನೂ ಅರ್ಥ ಮಾಡಿ ಕೊಳ್ಳಬೇಕು. ಆತ್ಮವಿಶ್ವಾಸ ಶ್ರದ್ಧೆ ಪರಿಶ್ರಮ ಮೈಗೂಡಿಸಿಕೊಳ್ಳಬೇಕು, ವಿದ್ಯಾವಂತರಾಗುವ ಜೊತೆಗೆ ವಿನಯವಂತರೂ ಆಗಬೇಕು ಎಂದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಮಾತನಾಡಿ, ಕಳೆದ 5 ವರ್ಷದ ಅವಧಿಯಲ್ಲಿ ಸಂಘದಿಂದ ಜಿಲ್ಲೆಯ ಒಂದೂವರೆ ಸಾವಿರಕ್ಕೂ ಅಧಿಕ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗಿದೆ. ಜಿಲ್ಲಾ ಸರಕಾರಿ ನೌಕರರ ಸಂಘ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿರುವ ಜಿಲ್ಲಾ ಸರ್ಕಾರಿ ನೌಕರರ 244 ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡಲಾಯಿತು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಮಂಜುನಾಥಸ್ವಾಮಿ, ಕಾರ್ಯದರ್ಶಿ ಎ.ಎಸ್. ದರ್ಶನ್‌, ಉಪಾಧ್ಯಕ್ಷ ಎಚ್.ಆರ್.ಶಿವಕುಮಾರ್, ಖಜಾಂಚಿ ಡಾ.ಜಗದೀಶ್. ರಾಜ್ಯ ಪರಿಷತ್ ಸದಸ್ಯ ಎಸ್.ಟಿ. ಪೂರ್ಣೇಶ್, ದೇವಾನಂದ್, ಮೂಡಿಗೆರೆ ತಾಲೂಕು ಅಧ್ಯಕ್ಷ ಪದ್ಮರಾಜ್, ಅಜ್ಜಂಪುರ ತಾಲೂಕು ಅಧ್ಯಕ್ಷ ಈಶ್ವರಪ್ಪ, ಶೃಂಗೇರಿ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಚಂದ್ರ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ-30,000 ಕೋಟಿ ರು. ವಿತರಣೆಯ ಗುರಿ
ಏಪ್ರಿಲ್‌ನಿಂದ ಆಲ್ಕೋಹಾಲ್‌ ಪ್ರಮಾಣಕ್ಕೆ ತಕ್ಕಂತೆ ಮದ್ಯ ಸುಂಕ