- ಜಿಲ್ಲೆಯಲ್ಲಿ ಒಟ್ಟು 7416 ಅಭ್ಯರ್ಥಿಗಳು, 13 ಕೇಂದ್ರಗಳಲ್ಲಿ ಪರೀಕ್ಷೆ । ಸಿಸಿಟಿವಿ ಕಣ್ಗಾವಲು, ಪೊಲೀಸ್ ಬಂದೋಬಸ್ತ್, ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಜೂ.21ರಂದು ನೀಟ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆ ಯಶಸ್ವಿಗೆ ಅಧಿಕಾರಿ ಮತ್ತು ಸಿಬ್ಬಂದಿ ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದರು.ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ನೀಟ್ ಪರೀಕ್ಷೆ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 7416 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಜೂ.21ರಂದು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಪರೀಕ್ಷಾರ್ಥಿಗಳು ಕೈ ಗಡಿಯಾರ ಧರಿಸುವಂತಿಲ್ಲ. ಕೊಠಡಿಗಳಲ್ಲಿ ಗೋಡೆ ಗಡಿಯಾರ ಇರಲಿದೆ. ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು. ವಿಶೇಷಚೇತನ ವಿದ್ಯಾರ್ಥಿಗಳಿಗೆ ಯುಬಿಡಿಟಿ ಕಾಲೇಜು ಮತ್ತು ಕೇಂದ್ರೀಯ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯುವಂತೆ ಅನುವು ಮಾಡಿದೆ. ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ಬಿಗಿ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು ಎಂದರು.
ನಿಗದಿಪಡಿಸಿದ ವಸ್ತ್ರ ಸಂಹಿತೆ (ಡ್ರೆಸ್ ಕೋಡ್) ಪ್ರತಿ ಅಭ್ಯರ್ಥಿ ಕಡ್ಡಾಯ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಮಂಗಳಸೂತ್ರ ಹೊರತುಪಡಿಸಿ ಬೆಲ್ಟ್, ಟೋಪಿ, ಆಭರಣಗಳನ್ನು ಧರಿಸುವಂತಿಲ್ಲ. ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು. ಪರೀಕ್ಷಾರ್ಥಿಗಳು, ಕೊಠಡಿಯ ಮೇಲ್ವಿಚಾರಕರು ಕೇಂದ್ರದೊಳಗೆ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಪೇಜರ್, ವೈರ್ಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್, ಗಡಿಯಾರ ತರುವುದು ನಿಷೇಧಿಸಿದೆ. ಈ ಕುರಿತು ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.
ಅಪರ ಡಿಸಿ ಶೀಲವಂತ ಶಿವಕುಮಾರ್, ಜಿಲ್ಲಾ ಎಸ್ಪಿ ಎಚ್.ಟಿ.ಶೇಖರ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
-19ಕೆಡಿವಿಜಿ41: ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ನೀಟ್ ಪರೀಕ್ಷೆಯ ಪೂರ್ವಸಿದ್ಧತಾ ಸಭೆ ನಡೆಯಿತು.