ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಇಂದಿನ ಸಮಾಜಕ್ಕೆ ಸಂಸ್ಕಾರಯುತ ಶಿಕ್ಷಣ ಅತ್ಯವಶ್ಯಕ ಎಂದು ಶಾಸಕ ಎಚ್.ಟಿ.ಮಂಜು ಅಭಿಪ್ರಾಯಪಟ್ಟರು.ಪಟ್ಟಣದ ಶ್ರೀಕೃಷ್ಣರಾಜ ಪದವಿ ಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ತಾಲೂಕಿನಲ್ಲಿ 23 ಪದವಿ ಪೂರ್ವ ಕಾಲೇಜುಗಳಿವೆ. ಪಟ್ಟಣದ ಪ್ರದೇಶದ ಕಾಲೇಜುಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ದಾಖಲಾತಿ ಕುಸಿತ ಕಾಣುತ್ತಿದೆ. ವಿದ್ಯಾರ್ಥಿಗಳು ನಗರ ಪ್ರದೇಶದ ಆಕರ್ಷಣೆಯಿಂದ ಹೊರಬರಬೇಕು ಎಂದರು.ಪೋಷಕರು ತಮ್ಮ ಮಕ್ಕಳನ್ನು ತಮ್ಮ ಪರಿಸರದಲ್ಲಿರುವ ಗ್ರಾಮೀಣ ಕಾಲೇಜುಗಳಿಗೆ ದಾಖಲಾತಿ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ಧಿಗೂ ಕೈ ಜೋಡಿಸಬೇಕು ಎಂದರು.
ವೇದಿಕೆಯ ಭಯದಿಂದ ಬಿಡುಗಡೆಯಾದರೆ ಯಾವುದೇ ವ್ಯಕ್ತಿಯಾದರೂ ಧೈರ್ಯದಿಂದ ಮುನ್ನಡೆಯುವ ಮನೋಭಾವನೆ ಹೊಂದುತ್ತಾನೆ. ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಕಲಿಕೆಯ ಹಂತದಲ್ಲಿಯೇ ಜೀವನದ ಗುರಿ ನಿಗಧಿಪಡಿಸಿಕೊಂಡು ಸಾಧನೆ ಮಾಡಬೇಕು ಎಂದರು.ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಗುಬ್ಬಿ ಜಿ.ಬಿ.ಮಲ್ಲಪ್ಪ ಮಾತನಾಡಿ, ವಿದ್ಯಾರ್ಥಿಗಳು ಕಲಿಯುವ ಹಂತದಲ್ಲಿಯೇ ಒಳ್ಳೆಯದನ್ನು ಕಲಿತರೆ ಅವರ ಭವಿಷ್ಯ ಉಜ್ವಲವಾಗಿರುತ್ತದೆ. ಆದರೆ, ಇಂದು ವಿದ್ಯಾರ್ಥಿಗಳು ಶ್ರಮವಿಲ್ಲದೆ ಪ್ರತಿಫಲ ಬಯಸುತ್ತಾರೆ. ಇದರಿಂದ ಯಾವುದೇ ಪ್ರತಿಫಲ ಸಿಗುವುದಿಲ್ಲ ಎಂದರು.
ಇದೇ ವೇಳೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಕಳೆದ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಎಸ್.ಬಿ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು. ಬಂಡಿ ವಿದ್ಯಾ ಸಂಸ್ಥೆ ನಿರ್ದೇಶಕರಾದ ನಾಗರಂಗಪ್ಪ, ಪ್ರೇಂಕುಮಾರ್, ಸಮಾಜ ಸೇವಕ ಬಸವೇಗೌಡ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ. ಹರಿಚರಣತಿಲಕ್, ಕೊರಟೀಕೆರೆ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಹೇಶ್, ಪ್ರಾಂಶುಪಾಲ ಕೃಷ್ಣಪ್ಪ, ಗುಬ್ಬಿ ದುಶ್ಯಂತ್ ಇದ್ದರು.