ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು.
ವಿದ್ವಾಂಸ ಪಾದೆಕಲ್ಲು ವಿಷ್ಣು ಭಟ್ ಸರ್ವಾಧ್ಯಕ್ಷತೆ । ಪುತ್ತಿಗೆ ಶ್ರೀಗಳಿಂದ ಸಮ್ಮೇಳನ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ‘ಸುಕೃತಿ 2025’ ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ಮತ್ತು ಗುರುವಾರ ನಡೆಯಲಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು ಎಂದರು.
ರಾಜ್ಯ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ ಉಪಸ್ಥಿತಿಯಲ್ಲಿ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂಸ್ಕೃತಿಕ ಕಾರ್ಯಕ್ರಮ, ಉಡುಪಿ ಶಾಸಕ ಯಶಪಾಲ್ ಸುವರ್ಣ ಪುಸ್ತಕ ಮಳಿಗೆ ಉದ್ಘಾಟಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಪುಸ್ತಕ ಬಿಡುಗಡೆಗೊಳಿಸುವರು. ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಬಾಬು ಶಿವ ಪೂಜಾರಿ ಭಾಗವಹಿಸಲಿದ್ದಾರೆ ಎಂದರು.
ಬೆಳಗ್ಗೆ 11.30ರಿಂದ ಭಾಷಾ ಸೌಹಾರ್ದ ವಿಚಾರಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಾಹಿತಿ ವೀರಪ್ಪ ಮೊಯಿಲಿ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ವಿಚಾರ ಮಂಡನೆ ಮಾಡಲಿದ್ದಾರೆ. ನಂತರ 2 ದಿನಗಳಲ್ಲಿ ವಿವಿಧ ಗೋಷ್ಠಿಗಳು, ಅಭಿನಂದನಾ ಕಾರ್ಯಕ್ರಮಗಳು ನಡೆಯಲಿವೆ.
ಗುರುವಾರ ಸಂಜೆ ಸಮಾರೋಪ ಸಮಾರಂಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ಸಮ್ಮೇಳನಾಧ್ಯಕ್ಷ ಪಾದೇಕಲ್ಲು ವಿಷ್ಣುಭಟ್ ಪ್ರತಿಸ್ಪಂದನೆ ನೀಡಲಿದ್ದಾರೆ. ಅಂಬಲಪಾಡಿ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್, ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ಕೋಟ ನರೇಂದ್ರ ಕುಮಾರ್, ಸದಸ್ಯ ನರಸಿಂಹಮೂರ್ತಿ ಮಣಿಪಾಲ, ಬ್ರಹ್ಮಾವರ ತಾಲೂಕು ಅಧ್ಯಕ್ಷ ರಾಮಚಂದ್ರ ಭಟ್ ಇದ್ದರು...............
ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಡಾ. ಗಜೇಂದ್ರ ಗುಂಡ್ಮಿ (ಶಿಕ್ಷಣ), ಡಾ. ರವೀಂದ್ರ ಶೆಟ್ಟಿ ಬಜಗೋಳಿ (ಶಿಕ್ಷಣ ಮತ್ತು ಸಂಘಟನೆ), ಪ್ರತಾಪ್ ಕುಮಾರ್ ಉದ್ಯಾವರ (ಶಿಕ್ಷಣ ಮತ್ತು ಸಮಾಜ ಸೇವೆ), ರಂಗಪ್ಪಯ್ಯ ಹೊಳ್ಳ (ಸಂಕೀರ್ಣ), ಸುಗುಣ ಮೂಲ್ಯ ಪಡುಬಿದ್ರಿ ಕಂಚಿನಡ್ಕ (ಸಮಾಜ ಸೇವೆ), ಉದಯ ಕುಮಾರ್ ಶೆಟ್ಟಿ (ಸಂಕೀರ್ಣ), ಸೀತಾರಾಮ ಶೆಟ್ಟಿ (ಯಕ್ಷಗಾನ), ಸೂರಿ ಶೆಟ್ಟಿ ಕಾಪು ( ಸಮಾಜಸೇವೆ), ಅಪ್ಪು ಪಾಣಾರ ಶಿರ್ವ (ಪಾಡ್ದನ), ರಾಮಚಂದ್ರ ಆಚಾರ್ಯ ಪಡುಬಿದ್ರಿ (ಪತ್ರಕರ್ತ), ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ (ಯಕ್ಷಗಾನ), ಸೀತಾ ಶ್ರೀನಿವಾಸ ಪಡುವರಿ (ಸಾಹಿತ್ಯ), ಈಶ್ವರ ಮಲ್ಪೆ (ಸಮಾಜ ಸೇವೆ), ರವಿ ಕಟಪಾಡಿ (ಸಮಾಜಸೇವೆ) ಯೋಗೀಶ್ ಭಟ್ ಹಳ್ಳಿ (ಸಂಕೀರ್ಣ), ವಿದುಷಿ ಸಂಸ್ಕೃತಿ ಪ್ರಭಾಕರ (ಯುವ ಪ್ರತಿಭೆ), ಯಡ್ತಾಡಿ ಸತೀಶ್ ಕುಮಾರ್ ಶೆಟ್ಟಿ (ಪ್ರಗತಿಪರ ಕೃಷಿಕ).
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.