ನಾಳೆ ಸಂವಿಧಾನ ಜಾಗೃತಿ ಸಮಾರೋಪ ಸಮಾರಂಭ

KannadaprabhaNewsNetwork | Published : Mar 10, 2024 1:31 AM

ಸಾರಾಂಶ

ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಮಾ.11ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆಲಿದೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಜಿಲ್ಲೆಯಲ್ಲಿ ಜರುಗುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಸಮಾರೋಪ ಸಮಾರಂಭವು ಇದೇ ಮಾ.11ರಂದು ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಕಂಪನಿ ಗೇಟ್ ಹತ್ತಿರದ ಸುರಕ್ಷಾ ಕ್ಯಾಂಟೀನ್ ಆವರಣಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು.

ಮಾ.11ರಂದು ಬೆಳಗ್ಗೆ 11ಗಂಟೆಗೆ ಸುರಕ್ಷಾ ಕ್ಯಾಂಟೀನ್ ಆವರಣದಲ್ಲಿ ಸಾರ್ವಜನಿಕ ಸಮಾರಂಭ ಜರುಗಲಿದ್ದು, ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಾರ್ಯಕ್ರಮ ಉದ್ಘಾಟಿಸುವರು.

ಗಣ್ಯರು ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ, ಕುಡಿವ ನೀರಿನ ವ್ಯವಸ್ಥೆ, ಜನಪ್ರತಿನಿಧಿಗಳು, ವೇದಿಕೆ ಹಾಗೂ ಆಸನದ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಭೀಮನಗರ ಅಂಬೇಡ್ಕರ ಚೌಕ ಹತ್ತಿರ ಇರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಯೆ ಹಾಕಲಾದ ಅಂಬೇಡ್ಕರ್ ಜೀವನ ಚರಿತ್ರೆ ವಸ್ತು ಪ್ರದರ್ಶನ ವೀಕ್ಷಿಸಿದರು. ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ಆರೋಗ್ಯ ನಿರೀಕ್ಷಕ ಅಧಿಕಾರಿ ಲತಾ ಮಣಿಯವರಿಂದ ಜಿಲ್ಲಾಧಿಕಾರಿಯವರಿಗೆ ಸನ್ಮಾನಿಸಲಾಯಿತು.

ಬಲರಾಮ ಚೌಕ್‍ನಿಂದ ಅಂಬೇಡ್ಕರ್ ಮೂರ್ತಿಗೆವರೆಗೆ ಹಾಗೂ ವೇದಿಕೆ ಸಾಗುವ ಭವ್ಯ ಮೆರವಣಿಗೆಯಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಸುಮಾರು 25-30 ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿದ್ದು, ವರ್ಣರಂಜಿತ ಮೆರವಣಿಗೆ ಇರಲಿದೆ ಇದಕ್ಕೆ ಅಧಿಕಾರಿಗಳು ಎಲ್ಲ ರೀತಿಯ ವ್ಯವಸ್ಥೆ ಮಾಡಲು ತಿಳಿಸಿದರು.

ಈಗಾಗಲೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿಸಿಕೊಂಡು ಹೋಗಲು ವೇದಿಕೆ ನಿರ್ವಹಣೆ, ಆಹಾರ, ಆರೋಗ್ಯ, ಕಾನೂನು ಸುವ್ಯವಸ್ಥೆ, ಮೂಲಸೌಕರ್ಯ, ಅಗ್ನಿಶಾಮಕ, ಮಾಧ್ಯಮ ನಿರ್ವಹಣೆ, ವಿದ್ಯುತ್ ಸರಬರಾಜು, ಸ್ವಚ್ಛತೆ ಸೇರಿ ವಿವಿಧ ಹಂತದ ಅಧಿಕಾರಿಗಳನ್ನೊಳಗೊಂಡ 15 ತಂಡ ರಚಿಸಲಾಗಿದೆ ಎಲ್ಲಾ ಅಧಿಕಾರಿಗಳು ತಮಗೆ ನೀಡಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂದರು.

ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಸೇಡಂ ಉಪವಿಭಾಗದ ಸಹಾಯಕ ಆಯುಕ್ತರ ಆಶಪ್ಪ ಪೂಜಾರಿ ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳಾದ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆ ಪ್ರಭಾರಿ ಜಂಟಿ ನಿರ್ದೇಶಕ ಜಾವೀದ್ ಕಾರಂಗಿ, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರರಾದ ಶಿವನಗೌಡ ಚಿತ್ತಾಪೂರ ಸೈಯದ್ ಷಾಷಾವಲಿ, ತಾಪಂ ಇಒ ನೀಲಗಂಗಾ ಬಬಲಾದ, ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರು ಗಣ್ಯರು ಭಾಗವಗಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Share this article