ಪ್ರವಾಸೋದ್ಯಮ ಅಭಿವೃದ್ದಿಯ ಕಾಮಗಾರಿ ಪೂರ್ಣಗೊಳಿಸಿ: ಸಚಿವ ತಿಮ್ಮಾಪೂರ

KannadaprabhaNewsNetwork |  
Published : May 25, 2026, 03:00 AM IST
 (ಫೋಟೊ 24ಬಿಕೆಟಿ1. ಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ  ಅವರು ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ವಿವಿಧ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಐತಿಹಾಸಿಕ ಸ್ಮಾರಕಗಳು, ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮ ಉತ್ತೇಜನಕ್ಕೆ ಸಂಬಂಧಿಸಿದಂತೆ ಕೈಗೊಂಡ ವಿವಿಧ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ ನೀಡಿದರು.

ಜಿಪಂ ಸಭಾಭವನದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸ್ಥಳೀಯ ಕಲೆ, ಸಂಸ್ಕೃತಿ ಹಾಗೂ ಪಾರಂಪರಿಕ ವೈಶಿಷ್ಯಗಳನ್ನು ಉತ್ತೇಜಿಸುವ ಮೂಲಕ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ದೊರೆಯುವ ನಿಟ್ಟಿನಲ್ಲಿ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಬಾದಾಮಿ ಅಗಸ್ತ್ಯ ತೀರ್ಥ ಹೊಂಡದ ಮೇಲಿರುವ ಮನೆಗಳ ಹಸ್ತಾಂತರ ಕಾರ್ಯ ಬಹಳ ದಿನಗಳಿಂದ ಕೈಗೆತ್ತಿಕೊಳ್ಳಲಾಗಿದೆ. ಆದರೆ ಸ್ಥಳಾಂತರ ಕಾರ್ಯ ಮಾತ್ರ ಆಗುತ್ತಿಲ್ಲ. ಇದಕ್ಕಾಗಿ ಬಾದಾಮಿ ಶಾಸಕರಾದ ಬಿ.ಬಿ. ಚಿಮ್ಮನಕಟ್ಟಿಯವರು ಮುತುವರ್ಜಿ ವಹಿಸುತ್ತಿದ್ದಾರೆ. ಆದರೆ ಜಮೀನು ಹಸ್ತಾಂತರಕ್ಕೆ ಪ್ರಸ್ತಾವನೆ ಕಳುಹಿಸುವಲ್ಲಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಸಚಿವರಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ದೃಷ್ಟಿಯಿಂದ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಲು ಸೂಚಿಸಿದರು.

ಪಟ್ಟದಕಲ್ಲಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಟೂರಿಸಂ ಪ್ಲಾಜಾ ಕೂಡ ಪೂರ್ಣಗೊಂಡಿಲ್ಲ. ಕಾಮಗಾರಿ ಪ್ರಾರಂಭವಾಗಿ 4 ವರ್ಷಗಳು ಗತಿಸಿವೆ. ಈ ರೀತಿಯಾದರೆ ಪ್ರವಾಸೋದ್ಯಮ ಬಲಪಡಿಸುವುದು ಹೇಗೆ ಎಂದು ಶಾಸಕ ಚಿಮ್ಮನಕಟ್ಟಿ ಪ್ರಶ್ನಿಸಿದಾಗ, ಅನಷ್ಠಾನ ಸಂಸ್ಥೆಯಾದ ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ತಿಳಿಸಿದರು. ಬಾದಾಮಿ ತ್ರಿಸ್ಟಾರ್ ಹೋಟಲ್ ನಿರ್ಮಾಣ ಕೂಡ ಇದೇ ರೀತಿಯಲ್ಲಿ ಸಾಗುತ್ತಿದೆ ಎಂದು ಸಭೆಗೆ ಶಾಸಕ ಚಿಮ್ಮನಕಟ್ಟಿ ತಿಳಿಸಿದರು.

ಐಹೊಳೆ ಗ್ರಾಮದಲ್ಲಿರುವ ರಕ್ಷಿತ, ಅರಕ್ಷಿತ ಸ್ಮಾರಕಗಳಲ್ಲಿ ವಾಸವಾಗಿರುವ ಕುಟುಂಬಗಳನ್ನು ಸ್ಥಳಾಂತರಿಸುವ ಮೊದಲ ಹಂತದಲ್ಲಿ 134 ಮನೆಗಳ ಸ್ಥಳಾಂತರಕ್ಕೆ ಕ್ರಮವಹಿಸಬೇಕಿದೆ. ಒಂದೇ ಹಂತದಲ್ಲಿ ಸ್ಥಳಾಂತರ ಮಾಡಲು ಸಾದ್ಯವಿಲ್ಲವೆಂದು ಹಂತ ಹಂತವಾಗಿ ನಡೆಸಬೇಕಿದೆ ಎಂದು ರಾಜ್ಯ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸಭೆಗೆ ತಿಳಿಸಿದರು. ಇದಕ್ಕೆ ಧ್ವನಿ ಗೂಡಿಸಿದ ಬಾಗಲಕೋಟೆ ಶಾಸಕ ಉಮೇಶ ಮೇಟಿ ಅವರು ಐಹೊಳೆ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗಾಗಿ ವಿಶೇಷ ಕಾರ್ಯಕ್ರಮ ರೂಪಿಸಬೇಕಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳಾಂತರಕ್ಕೆ ಮುಂದಾಗಬೇಕು ಎಂದರು.ಇದಕ್ಕಾಗಿ 13.11 ಎಕರೆ ಜಮೀನು ಖರೀದಿ ಮಾಡಲಾಗಿದ್ದು, ಪುನರ್ವಸತಿ ಕಲ್ಪಿಸಲು ಕರ್ನಾಟಕ ರಾಜ್ಯ ಹ್ಯಾಬಿಟೇಟ್ ಕೇಂದ್ರದಿಂದ ಯೋಜನಾ ವರದಿ ಸಲ್ಲಿಸಬೇಕಿದೆ ಎಂದು ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಹೇಳಿದರು.

ಸಾಗರ ಮಾಲಾ ಯೋಜನೆಗಳಡಿ ಹೆರಕಲ್ ಗ್ರಾಮದ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕೈಗೊಳ್ಳುತ್ತಿರುವ ರಿವರ್ ಕ್ರಸ್ ಟೂರಿಸಂ, ಬೋಟಿಂಗ್, ಜಂಗಲ್ ರೆಸಾರ್ಟ್‌ ಚಟುವಟಿಕೆ, ಯೋಜನೆಗೆ ಸಂಬಂಧಿಸಿದ ಕಾರ್ಯಗಳನ್ನು ಪ್ರಾರಂಭಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಚಿವರು ತಿಳಿಸಿದರು. ಕುಂದರಗಿ ಸುರಗಿರಿ ಬೆಟ್ಟ, ಚಿಕ್ಕ ಸಂಗಮದ ಸಂಗಮನಾಥ ದೇವಸ್ಥಾನ ಮೂಲ ಸೌಕರ್ಯಗಳ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.

ಬಾಗಲಕೋಟೆ ತಾಲೂಕಿನ ಗುಡ್ಡದ ಮಲ್ಲಿಕಾರ್ಜುನ ದೇವಸ್ಥಾನ ಅಭಿವೃದ್ಧಿ, ಮುಧೋಳ ತೂಕಿನ ಯಡಹಳ್ಳಿಯ ಅಡವೇಶ್ವರ ಮಠ, ಉತ್ತೂರಿನ ಲಕ್ಷ್ಮೀ ದೇವಸ್ಥಾನ, ಜಮಖಂಡಿ ತಾಲೂಕಿನ ಹಂಚಿನಾಳ ಗ್ರಾಮದ ಸುವರ್ಣಖಂಡಿ, ದೊಡ್ಡಬಸವೇಶ್ವರ ದೇವಸ್ಥಾನ, ತೇರದಾಳ ನಗರದ ಅಲ್ಲಮಪ್ರಭು ಶರಣರ ದೇವಸ್ಥಾನ ಹತ್ತಿರ ಯಾತ್ರಿನಿವಾಸ ನಿರ್ಮಾಣ ಸೇರಿ ಜಮಖಂಡಿಯ ಕಟ್ಟೆಕೆರೆ ಉದ್ಯಾನ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಶಾಸಕರಾದ ಜೆ.ಟಿ. ಪಾಟೀಲ, ಜಗದೀಶ ದುಡಗುಂಟಿ, ಉಮೇಶ ಮೇಟಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಕೆಬಿಜೆಎನ್ಎಲ್ ಮುಖ್ಯ ಅಭಿಯಂತರ ಬಸವರಾಜ, ಜಿಪಂ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛತೆ ಎನ್ನುವುದು ನಿರಂತರ ಹವ್ಯಾಸವಾಗಲಿ
ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಕ್ಕೆ ತೆರೆ