ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸಿಕೊಂಡರೆ ಈ ಬಾರಿ ತೀವ್ರ ಇಳಿಕೆಯಾಗಿದೆ. ರಾಜ್ಯದಲ್ಲಿ 38 ರಿಂದ 45 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದೆ. ನೆತ್ತಿ ಸುಡುವ ಬಿಸಿಲು ಪ್ರವಾಸಿ ತಾಣಗಳಲ್ಲಿ ಮೋಜು-ಮಸ್ತಿಗೆ ಬ್ರೇಕ್ ಹಾಕಿದೆ.
ಪ್ರವಾಸಿಗರ ಅಂಕಿ-ಅಂಶದಲ್ಲಿ ಗೊಂದಲಕೊರೊನಾ ಬಳಿಕ ಚೇತರಿಕೆ ಕಂಡಿದ್ದ ಪ್ರವಾಸೋದ್ಯಮ ಈ ವರ್ಷ ಶೇ. 40ರಿಂದ 50ರಷ್ಟು ಕುಸಿತ ಕಂಡಿದೆ ಎಂಬುದು ಹೋಟೆಲ್ ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಲೆಕ್ಕಾಚಾರವಾದರೆ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಪ್ರಕಾರ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಕಳೆದ ವರ್ಷಕ್ಕೆ ಹೋಲಿಸದರೆ ಶೇ. 15ರಷ್ಟು ಇಳಿಕೆಯಾಗಿದೆ.
ಈಗ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ. ರಜೆಯನ್ನು ಮಜವಾಗಿ ಕಳೆಯೋಣವೆಂದು ವಿದ್ಯಾರ್ಥಿಗಳು ಅಂದುಕೊಂಡಿದ್ದರು. ಆದರೆ, ಅತಿಯಾದ ಬಿಸಿಲು ಹಾಗೂ ತಾಪಮಾನದಿಂದ ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರೆಗೆ ಬಿಡುತ್ತಿಲ್ಲ. ಇದರಿಂದ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿವೆ.
ಪ್ರವಾಸಿಗರ ಕೊರತೆ:
ಬೇಸಿಗೆ ಸೀಸನ್ನಲ್ಲಿ ಮಕ್ಕಳೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಸರಕಾರಿ ಉದ್ಯೋಗಿಗಳೆಲ್ಲಾ ಲೋಕಸಭಾ ಚುನಾವಣೆ ಮುಗಿಸಿ, ಮತ್ತೆ ಈಗ ಆಗ್ನೇಯ ಶಿಕ್ಷಕರ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದಾರೆ. ಬಹುತೇಕ ಪಕ್ಷಗಳ ಕಾರ್ಯಕರ್ತರು, ಮುಖಂಡರು ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಜಿಲ್ಲೆಯಲ್ಲಿ ರೆಸಾರ್ಟ್ಗಳು ಮತ್ತು ಹೋಟೆಲ್ ಗಳು ದೊಡ್ಡ ಉದ್ಯಮಗಳಾಗಿ ಬೆಳೆದಿವೆ. ಆದರೆ ಈ ಬಾರಿ ಬಿಸಿಲಿನ ತಾಪದಿಂದಾಗಿ ಹೋಟೆಲ್ ಉದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ.
ಪ್ರವಾಸಿ ತಾಣಗಳ ಕಥೆ ಇದಾದರೆ ದೇವಾಲಗಳಿಗೆ ಸಾಮಾನ್ಯವಾಗಿ ಹೆಚ್ಚಿನ ಸಂಖ್ಯೆಯಲ್ಲಿರುತ್ತಿದ್ದ ಭಕ್ತರ ಸಂಖ್ಯೆಯೂ ಸಹ ಶೇ. 40ರಷ್ಟು ಇಳಿಕೆಯಾಗಿದೆ ಇದರಿಂದ ಮುಜರಾಯಿ ಇಲಾಖೆಯ ದೇವಾಲಯಗಳ ಆದಾಯಕ್ಕೂ ಸಹಾ ಕತ್ತರಿ ಬಿದ್ದಿದೆ.