ಹಾವೇರಿ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದರು ನಡೆಸಿದ ಗುಂಡಿನ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ಇದೇ ವೇಳೆ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಜಿಲ್ಲೆಯ ಎರಡು ಕುಟುಂಬಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿದೆ.ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಹಾವೇರಿಯ ವೀರೇಶ ದಂಪತಿ ಹಾಗೂ ಶಿಗ್ಗಾಂವಿಯ ನಾಗರಾಜ್ ದಂಪತಿಯ ಕುಟುಂಬದವರು ಸುರಕ್ಷಿತವಾಗಿದ್ದಾರೆ. ಸದ್ಯ ಜಮ್ಮುವಿನ ವೈಷ್ಣೋದೇವಿ ದೇವಸ್ಥಾನದ ಸಮೀಪದ ಕತ್ರಾದಲ್ಲಿರುವ ಇವರು, ತಾವೆಲ್ಲಾ ಸುರಕ್ಷಿತವಾಗಿ ಇರುವುದಾಗಿ ತಮ್ಮ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.ಹಾವೇರಿಯ ಈ ಪ್ರವಾಸಿಗರ ಮೊಬೈಲ್ ಸ್ವಿಚ್ ಆಫ್ ಆಗಿದ್ದರಿಂದ ಸಂಬಂಧಿಕರು ಆತಂಕದಲ್ಲಿದ್ದರು. ಇದೀಗ ಕರೆ ಮಾಡಿರುವ ಈ ಕುಟುಂಬಗಳು ತಾವು ಸುರಕ್ಷಿತವಾಗಿರುವ ಮಾಹಿತಿ ನೀಡಿದ್ದರಿಂದ ಸಂಬಂಧಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ನೆರವಿಗೆ ಸಿದ್ಧ: ಜಿಲ್ಲೆಯಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿದ್ದವರು ಅಲ್ಲಿ ಸಿಲುಕಿಕೊಂಡಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಇದುವರೆಗೆ ಯಾರು ಕೂಡ ಸಹಾಯ ಕೋರಿ ಸಂಪರ್ಕಿಸಿಲ್ಲ. ಜಮ್ಮು ಕಾಶ್ಮೀರಕ್ಕೆ ತೆರಳಿರುವ ಪ್ರವಾಸಿಗರು ನೆರವು ಕೋರಿದರೆ ಜಿಲ್ಲಾಡಳಿತ ನೆರವಿಗೆ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.