ಕನ್ನಡಪ್ರಭ ವಾರ್ತೆ ಸಕಲೇಶಪುರ
ತಾಲೂಕಿನ ಹಾನುಬಾಳು ಹೋಬಳಿಯ ಮರಗುಂದ ಗ್ರಾಮದ ಬೆಟ್ಟದ ಬೈರೇಶ್ವರ ದೇಗುಲದ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರು ಹಾಗೂ ಮುಖಂಡರ ಅಹವಾಲುಗಳನ್ನು ಆಲಿಸಿ ಮಾತನಾಡಿ, ಸಕಲೇಶಪುರ ತಾಲೂಕು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಸರ್ಕಾರದ ಉದ್ದೇಶವಾಗಿದೆ. ಆದರೆ ಕೆಲವು ಪ್ರವಾಸಿಗರ ಅಸಭ್ಯ ವರ್ತನೆ, ಪರಿಸರ ಹಾನಿ ಹಾಗೂ ಪವಿತ್ರ ಸ್ಥಳಗಳ ಗೌರವ ಹಾಳು ಮಾಡುವ ಘಟನೆಗಳು ಹೆಚ್ಚುತ್ತಿರುವುದು ಚಿಂತಾಜನಕ ಎಂದು ಹೇಳಿದರು.
ಪ್ರವಾಸಿಗರು ಭೇಟಿ ನೀಡುವ ಸ್ಥಳಗಳನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುವುದು, ಪ್ಲಾಸ್ಟಿಕ್ ಬಾಟಲಿ, ಕವರ್ ಹಾಗೂ ಇತರೆ ಕಸದ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಸಾಮಾನ್ಯವಾಗುತ್ತಿದೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದ್ದು, ಸ್ಥಳೀಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರವಾಸೋದ್ಯಮದ ಜೊತೆಗೆ ಸಾರ್ವಜನಿಕ ಪ್ರಜ್ಞೆ ಹಾಗೂ ಜವಾಬ್ದಾರಿಯೂ ಅಗತ್ಯವಿದ್ದು, ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ಸೂಚಿಸಿದರು.ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್, ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತರುವ ಘಟನೆಗಳು ಹೆಚ್ಚುತ್ತಿದ್ದು, ಅದನ್ನು ಪ್ರಶ್ನಿಸುವವರಿಗೆ ತೊಂದರೆ ಉಂಟಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ದೇವಸ್ಥಾನದ ಜೀರ್ಣೋದ್ಧಾರ ಹಾಗೂ ರಸ್ತೆ ಕಾಮಗಾರಿಗಳ ವಿಚಾರದಲ್ಲಿ ಹಿಂದೆ 9 ಮಂದಿ ಜೈಲಿಗೆ ಹೋಗಿರುವುದನ್ನು ಉಲ್ಲೇಖಿಸಿದ ಅವರು, ಪವಿತ್ರ ಸ್ಥಳದ ಗೌರವ ಕಾಪಾಡಲು ಪ್ರಯತ್ನಿಸುವವರೇ ಸಮಸ್ಯೆ ಎದುರಿಸುವ ಸ್ಥಿತಿ ನಿರ್ಮಾಣವಾಗಿರುವುದಾಗಿ ಹೇಳಿದರು.
ದೇವಸ್ಥಾನದ ಪಾವಿತ್ರ್ಯತೆ ಹಾಗೂ ಪರಿಸರ ಸಂರಕ್ಷಣೆಗಾಗಿ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಹಲವು ಬೇಡಿಕೆಗಳನ್ನು ಸಲ್ಲಿಸಿದರು. ದೇವಸ್ಥಾನ ಆವರಣದಲ್ಲಿ ಪೂಜೆ ಸಮಯ ಹೊರತುಪಡಿಸಿ ಪ್ರವಾಸಿಗರಿಗೆ ನಿರ್ಬಂಧ ವಿಧಿಸುವುದು, ಒಂಬತ್ತು ಗ್ರಾಮಗಳ ಪ್ರತಿನಿಧಿಗಳಿಂದ ಸಮಿತಿ ರಚಿಸಿ ನಿರ್ವಹಣೆಯನ್ನು ಅವರಿಗೆ ಒಪ್ಪಿಸುವುದು, ಡ್ರೆಸ್ ಕೋಡ್ ಕಡ್ಡಾಯಗೊಳಿಸುವುದು, ಮರುಗುಂದ ಗ್ರಾಮದ ಗಡಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸುವುದು, ದೇವಸ್ಥಾನದ ಸುತ್ತಮುತ್ತ ಕನಿಷ್ಠ 5 ಎಕರೆ ಪ್ರದೇಶವನ್ನು ಧಾರ್ಮಿಕ ಸೂಕ್ಷ್ಮ ವಲಯವಾಗಿ ಘೋಷಿಸಿ ಫೆನ್ಸಿಂಗ್ ಮಾಡುವುದು, ಶೂ- ಚಪ್ಪಲಿ ಇಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಕಸದ ನಿರ್ವಹಣೆ ಮತ್ತು ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.