ಕನ್ನಡಪ್ರಭ ವಾರ್ತೆ ಕೆ.ಆರ್. ನಗರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಜೂ. 27ರಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಂಪೇಗೌಡ ಜಯಂತಿ ಆಚರಣಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕು ಆಡಳಿತ ಜಯಂತಿ ಆಚರಣೆಗೆ ಸಂಬಂಧಿಸಿದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.ಸರ್ವ ಜನಾಂಗದ ಹಿತವನ್ನು ಹೊಂದಿದ್ದ ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡಿದ್ದರಿಂದ ಇಂದು ಸಿಲಿಕಾನ್ ಸಿಟಿಯಾಗಿ ಜಗತ್ತಿನಲ್ಲಿಯೇ ಪ್ರಸಿದ್ಧಿ ಹೊಂದಿದೆ. ಇಂತಹ ಮಹಾತ್ಮರ ಜಯಂತಿಯನ್ನು ಸರ್ವ ಜನಾಂಗದವರು ಸೇರಿ ಆಚರಿಸಬೇಕಾಗಿದೆ ಎಂದು ತಿಳಿಸಿದರು.ಕಾಲೇಜು ಮೈದಾನದಿಂದ ವಾಣಿವಿಲಾಸ ರಸ್ತೆ ಮೂಲಕ ತಾಲೂಕು ಕಚೇರಿಯವರೆಗೆ ಅಲಂಕೃತಗೊಂಡ ಬೆಳ್ಳಿರಥದಲ್ಲಿ ಕೆಂಪೇಗೌಡರ ಭಾವಚಿತ್ರವನ್ನು ವಿವಿಧ ಜಾನಪದ ಕಲಾತಂಡಗಳು, ಪೂರ್ಣಕುಂಭ ಕಳಸ ಹಾಗೂ ಮಂಗಳವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಸರ್ವ ಜನಾಂಗಗಳ ಮುಖಂಡರು ಹಾಜರಿದ್ದು, ಕಾರ್ಯಕ್ರಮಕ್ಕೆ ಮೆರಗು ನೀಡಬೇಕು ಎಂದು ಮನವಿ ಮಾಡಿದರು. ತಾಲೂಕು ಕಚೇರಿಯ ಆವರಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐದು ಮಂದಿ, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ. ತಹಸೀಲ್ದಾರರಾದ ಜಿ. ಸುರೇಂದ್ರಮೂರ್ತಿ, ರುಕಿಯಾಬೇಗಂ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್. ಮಹೇಶ್, ನಿರ್ದೇಶಕ ಸೈಯದ್ ಜಾಬೀರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಸ್. ಮಹದೇವ್, ಉದಯಶಂಕರ್, ತಾಪಂ. ಇಒಗಳಾದ ವಿ.ಪಿ. ಕುಲದೀಪ್, ಎ.ಎನ್.ರವಿ, ಆರಕ್ಷಕ ನಿರೀಕ್ಷಕ ಎಸ್.ಶಿವಪ್ರಕಾಶ್, ಕಾಂಗ್ರೆಸ್ ನಗರಾಧ್ಯಕ್ಷ ಎಂ.ಜೆ.ರಮೇಶ್, ಮುಖಂಡರಾದ ವೈ.ಎಸ್.ಜಯಂತ್, ಪ್ರಭಾಕರ್, ಸಂಪತ್ಕುಮಾರ್, ಎಂ.ಜೆ.ಕುಮಾರ್, ಮಂಜುನಾಥ್, ಸಿದ್ದರಾಮೇಗೌಡ, ಹರಿರಾಜು ಇದ್ದರು.