- ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ---
ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಜ.26 ರಂದು ದೇಶದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.
ನಗರದ ಕರ್ಜನ್ ಪಾರ್ಕ್ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ 540 ಸಂಘಟನೆಗಳು ನಡೆಸಿದ ಹೋರಾಟಕ್ಕೆ 3 ವರ್ಷಗಳು ಪೂರ್ಣಗೊಂಡಿದೆ. ಆದರೆ, ಕೇಂದ್ರ ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ ಎಂದರು.3 ಕಾಯಿದೆಗಳನ್ನು ವಾಪಸ್ ಪಡೆದಿದ್ದರೂ ಹಿಂಬಾಗಿಲಿನ ಮೂಲಕ ಜಾರಿಗೆ ಮುಂದಾಗಿದೆ. ಭಾರತದಲ್ಲಿ ನಡೆದ ಜಿ20 ಸಭೆಯಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ. ರೈತರಿಗೆ ಮಾರಕವಾಗುವ ಅಪಾಯಕಾರಿ ಕಾಯಿದೆಗಳನ್ನು ಜಾರಿಗೆ ತರುತ್ತಿದ್ದಾರೆ. ಇದನ್ನು ಖಂಡಿಸಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲಿದ್ದೇವೆ ಎಂದು ಅವರು ಹೇಳಿದರು.
ದೆಹಲಿ ಹೋರಾಟದಲ್ಲಿ 780 ಜನರು ಹುತಾತ್ಮರಾದರು. ಸ್ಮಾರಕ ನಿರ್ಮಾಣಕ್ಕೆ ಜಾಗ ಕೇಳಿದ್ದೇವು. ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದೇವು. ಲಖಿಂಪುರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದೇವು. ಈ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಮಾತು ತಪ್ಪಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಫೆ.10 ರಂದು ಪ್ರೊ. ನಂಜುಂಡಸ್ವಾಮಿ ನೆನಪುಫೆ.10 ರಂದು ರೈತ ಹೋರಾಟಗಾರ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ 88ನೇ ವರ್ಷದ ನೆನಪಿನಲ್ಲಿ ಬೃಹತ್ ರೈತ ಸಮಾವೇಶವನ್ನು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೈತರ ಪರವಾದ ಹಕ್ಕೊತ್ತಾಯಗಳನ್ನು ಮಂಡಿಸಲು ವೈಜ್ಞಾನಿಕವಾಗಿ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ರೈತ ಸಂಘದ ಮುಖಂಡರಾದ ರವಿಕಿರಣ್ ಪೂಣಚ್ಚ, ಮನು ಸೋಮಯ್ಯ, ಮಂಜುನಾಥಗೌಡ, ಕೃಷ್ಣಪ್ಪ, ಆದಿತ್ಯ, ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಪ್ರೇಮಕುಮಾರ್, ಸನ್ನಿ ಡಿಸೋಜಾ ಮೊದಲಾದವರು ಇದ್ದರು.