ಕನಡಪ್ರಭ ವಾರ್ತೆ ಚಾಮರಾಜನಗರಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ-ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ಜಿಲ್ಲಾ ರೈತ ಸಂಘದಿಂದ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪೇರೇಡ್ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದ ಬಳಿ ಟ್ರಾಕ್ಟರ್ ಸಮೇತ ಜಮಾಯಿಸಿದ ರೈತರು ಅಲ್ಲಿಂದ ಗುಂಡ್ಲುಪೇಟೆ ಸರ್ಕಲ್, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ಸರ್ಕಲ್, ಡಿವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ (ಪಚ್ಚಪ್ಪ ಸರ್ಕಲ್), ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಟ್ರಾಕ್ಟರ್ ಪೇರೇಡ್ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.ಈ ವೇಳೆ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಎ.ಎಂ.ಮಹೇಶ್ಪ್ರಭು ಮಾತನಾಡಿ, ಸ್ವಾತಂತ್ರ್ಯ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ. ಧರ್ಮ ನಿರಪೇಕ್ಷ (ಜಾತ್ಯಾತೀತ), ಪ್ರಜಾಪ್ರಭುತ್ವ, ಗಣತಂತ್ರದ ಸಂವಿಧಾನ ರಕ್ಷಣೆಗಾಗಿ ಆಗ್ರಹಿಸಿ, ರೈತ-ಕಾರ್ಮಿಕ ವಿರೋಧಿ ರಾಜ್ಯ ಕೃಷಿ ಕಾಯ್ದೆಗಳು ಹಾಗೂ ಕಾರ್ಮಿಕ ಕಾಯ್ದೆಗಳನ್ನು ರದ್ದುಗೊಳಿಸಲು ಒತ್ತಾಯಿಸಿ ದೇಶಾದ್ಯಂತ ಇಂದು ರೈತರು ಗಣರಾಜ್ಯೋತ್ಸವ ಟ್ರಾಕ್ಟರ್ ಪೇರೇಡ್ ಹಮ್ಮಿಕೊಂಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ,ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಸಾಲ ಮನ್ನಾ, ವೈಜ್ಞಾನಿಕ ಬೆಳೆ ನಷ್ಟ, ಆಹಾರ, ಉದ್ಯೋಗ, ಭೂಮಿ ಹಕ್ಕು ನೀತಿಗಳನ್ನು ಹಿಮ್ಮೆಟ್ಟಿಸಿ ಪರ್ಯಾಯ ಜನಪರ ನೀತಿಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು. ಜನ ವಿರೋಧಿ ೨೦೨೦ರ ಕರೋನ ಲಾಕ್ ಡೌನ್ ಸಂದರ್ಭದಲ್ಲಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿದ್ದ ಕಾರ್ಪೋರೇಟ್ ಪರ ಹಾಗೂ ರೈತವಿರೋಧಿ ಮೂರು ಕರಾಳ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ರೈತರು ವರ್ಷಗಟ್ಟಲೆ ಹೋರಾಟ ನಡೆಸಿದ್ದರು. ಸತತ ೧೩ ತಿಂಗಳುಗಳ ಕಾಲ ದೆಹಲಿ ಗಡಿಗಳಲ್ಲಿ ಬೀಡು ಬಿಟ್ಟು ರೈತರು ನಡೆಸಿದ ಮಹಾನ್ ಐತಿಹಾಸಿಕ ಹೋರಾಟದಿಂದಾಗಿ ಕರಾಳ ಕಾಯ್ದೆಗಳ ಕೇಂದ್ರ ಸರ್ಕಾರ ರದ್ದುಗೊಳಿಸಿತು ಎಂದರು.
ರೈತರ ಉಳಿದ ಹಕ್ಕೋತ್ತಾಯಗಳಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಎಂಎಸ್ಪಿ ಕಾಯ್ದೆ ಜಾರಿ, ವಿದ್ಯುತ್ ರಂಗದ ಸಂಪೂರ್ಣ ಖಾಸಗೀಕರಣ ಹಾಗೂ ಕೃಷಿಪಂಪ್ ಸೆಟ್ಗೆ ಉಚಿತ ವಿದ್ಯುತ್ ರದ್ದುಪಡಿಸುವ ವಿದ್ಯುತ್ ತಿದ್ದುಪಡಿ ಮಸೂದೆ ರದ್ಧತಿ, ರೈತರ ಸಾಲಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಈ ಕೂಡಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣ ಕ್ರಮಕೈಗೊಳ್ಳಬೇಕು ಇಲ್ಲದಿದ್ದರೆ ರೈತರ ಹೋರಾಟ ಮುಂದುವರಿಯುತ್ತದೆ ಎಂದು ಎಚ್ವರಿಸಿದರು.ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಮಲ್ಲಪ್ಪ, ಹೊನ್ನೂರು ಬಸವಣ್ಣ, ಜ್ಯೋತಿಗೌಡನಪುರ ಬಸವಣ್ಣ, ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಉಪಾಧ್ಯಕ್ಷ ಗೌಡೇಗೌಡ, ದೊಡ್ಡರಾಯಪೇಟೆ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ಮಹೇಶ್, ಬಸವಣ್ಣ, ಇತರರು ಭಾಗವಹಿಸಿದ್ದರು.