ಮುಧೋಳ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ರೈತ ಸಂಘ, ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಕಬ್ಬಿನ ಹೋರಾಟ ಗುರುವಾರ ಅಕ್ಷರಶಃ ಉಗ್ರ ಸ್ವರೂಪ ತಾಳಿದೆ.
ಕನ್ನಡಪ್ರಭ ವಾರ್ತೆ ಮುಧೋಳ
ಮುಧೋಳ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ರೈತ ಸಂಘ, ಹಸಿರು ಸೇನೆ ಹಾಗೂ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಕಬ್ಬಿನ ಹೋರಾಟ ಗುರುವಾರ ಅಕ್ಷರಶಃ ಉಗ್ರ ಸ್ವರೂಪ ತಾಳಿದೆ.ಮುಧೋಳದ ಎಲ್ಲ ವ್ಯಾಪಾರಸ್ಥರು ಗುರುವಾರ ಅಂಗಡಿಗಳನ್ನು ಸ್ವಯಂ ಪ್ರೇರಿತರಾಗಿ ಬಂದ್ ಮಾಡಿ ಹೋರಾಟದಲ್ಲಿ ಭಾಗಿಯಾಗಿದ್ದರು. ತಾಲೂಕಿನ ಶಿರೋಳ ಗ್ರಾಮದ ದಿ.ರಮೇಶ ಗಡದನ್ನವರ ಶಾಲೆಯ ವಿದ್ಯಾರ್ಥಿಗಳು ಮತ್ತು ರೈತ ಮಹಿಳೆಯರು ವೇದಿಕೆಗೆ ಬಂದು ಬೆಂಬಲ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣ ಸರ್ಕಲ್ ದಿಂದ ಗಡದನ್ನವರ ಸರ್ಕಲ್ ವರೆಗೆ ನೂರಾರು ಟ್ರ್ಯಾಕ್ಟರ್ ಗಳ ಸಮೇತ ರೈತರು ಬೃಹತ್ ರ್ಯಾಲಿ (ಮೆರವಣಿಗೆ) ನಡೆಸಿದರು. ತಾಲೂಕಿನ ಮುಧೋಳ ಸೇರಿದಂತೆ ವಿವಿಧ ಗ್ರಾಮಗಳ ಟಂಟಂ ಮಾಲೀಕರು ವಾಹನಗಳ ಜೊತೆಗೆ ಆಗಮಿಸಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ನೂರಾರು ರೈತರು ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಸರ್ಕಾರ ಹಾಗೂ ಕಾರ್ಖಾನೆಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಟನ್ ಕಬ್ಬಿಗೆ ₹3500 ದರ ಕೊಡದಿದ್ದರೆ ಹೋರಾಟ ತೀವ್ರ ಸ್ವರೂಪದ ಹೋರಾಟಕ್ಕೆ ಸಿದ್ಧರಾಗಿದ್ದೇವೆ. ಮುಂದಾಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಗುರುವಾರ ತಾಲೂಕಿನಲ್ಲಿನ ಸಾಕಷ್ಟು ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯವರು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದರು. ಸಾರಿಗೆ ಸಂಸ್ಥೆಯ ಬಸ್ ಗಳು ಓಡಾಟ ಸುಗಮವಾಗಿದ್ದರಿಂದ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಲಿಲ್ಲ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.