ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಕಾನ್‌ಸ್ಟೇಬಲ್

KannadaprabhaNewsNetwork |  
Published : Jan 09, 2026, 01:30 AM IST
ಪೊಟೋ: 08ಎಸ್‌ಎಂಜಿಕೆಪಿ07 | Kannada Prabha

ಸಾರಾಂಶ

ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ಹೆಡ್‌ಕಾನ್ಸ್‌ಸ್ಟೇಬಲ್ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಹೆಡ್ ಕಾನ್‌ಸ್ಟೇಬಲ್ ಮೊಹಮದ್ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ ಮೊಹಮದ್ ಝಕ್ರಿಯ ಅವರು ರಜೆ ತೆಗೆದುಕೊಂಡಿದ್ದರು. ಈಗ ಮೂರು ದಿನದ ಹಿಂದಷ್ಟೆ ಡ್ಯೂಟಿಗೆ ಬಂದಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ.ರಾತ್ರಿ ಠಾಣೆಯಲ್ಲೆ ಝಕ್ರಿಯ ನೇಣಿಗೆ ಕೊರಳೊಡ್ಡಿದ್ದಾರೆ. ಠಾಣೆಯ ಹಿಂಬದಿಯ ಸೆಲ್‌ಗಳಿರುವ ಜಾಗದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕುರಿತು ಪ್ರತಿಕ್ರಿಯಿಸಿದ ಎಸ್ಪಿ ಬಿ.ನಿಖಿಲ್ ಅವರು, ಜಕ್ರೀಯಾ ಅವರು ಕಳೆದ ಎರಡು ತಿಂಗಳಿನಿಂದ ಅನಾರೋಗ್ಯದ ಕಾರಣ ರಜೆಯಲ್ಲಿದ್ದರು. ಜನವರಿ 6 ರಂದು ಪುನಃ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಸ್ಟೇಷನ್ ಹೌಸ್ ಆಫೀಸರ್ ಆಗಿ ಇವರನ್ನು ಕರ್ತವ್ಯಕ್ಕೆ ನೇಮಿಸಲಾಗಿತ್ತು. ಗುರುವಾರ ಮುಂಜಾನೆ 5 ರಿಂದ 5.30ರ ಸುಮಾರಿಗೆ ಠಾಣೆಯ ಕಬ್ಬಿಣದ ಬಾಗಿಲಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಜಕ್ರೀಯಾ ಅವರು ವಾಟ್ಸಪ್‌ನಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು, ಸಹೋದ್ಯೋಗಿಯೊಬ್ಬರ ಹೆಸರನ್ನು ಉಲ್ಲೇಖಿಸಿದ್ದಾರೆ. ನನ್ನ ಆರೋಗ್ಯದ ಬಗ್ಗೆ ಇತರರ ಜೊತೆ ಮಾತನಾಡಿ ಕಿಂಡಲ್ ಮಾಡಿದ್ದಾರೆ ಎಂದು ಆರೋಪಿಸಿ ಎಲ್ಲ ಅಧಿಕಾರಿಗಳಿಗೂ ಮೆಸೇಜ್ ಶೇರ್ ಮಾಡಿದ್ದಾರೆ ಎನ್ನಲಾಗಿದೆ. ಜಕ್ರೀಯಾ ಅವರು ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಮತ್ತು ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆ ಕುರಿತಾಗಿ ಹೆಚ್ಚಿನ ಮಾಹಿತಿಗೆ ತನಿಖೆಯನ್ನು ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಡೆತ್ ನೋಟ್‌ನಲ್ಲಿ ಏನಿದೆ?ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಕೆಲಸ ಮಾಡಿರುತ್ತೇನೆ. ಈಗ ಒಂದು ವರ್ಷದ ಹಿಂದೆ ನಮ್ಮ ಠಾಣೆಯ ನಾಸಿರ್ ಅಹಮದ್ ಎಚ್ ಸಿ 131 ನನಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದು, ನನ್ನ ಹತ್ತಿರ ಕಿಂಡಲ್ ಮಾಡಿ ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕರಲ್ಲಿ ಅಪಪ್ರಚಾರ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಉಡುಪಿ ಪಿಎಂ ಬಂದೋಬಸ್ತಿಗೆ ಹೋದಾಗ ಅಲ್ಲೂ ನನ್ನ ಬಗ್ಗೆ ಅಲ್ಲಿ ಬಂದಂತಹ ಬೇರೆ ಜಿಲ್ಲೆಯವರ ಸಿಬ್ಬಂದಿಯವರ ಹತ್ತಿರ ಅಪಪ್ರಚಾರ ಮಾಡುತ್ತಿದ್ದು, ಅದನ್ನು ನಾನು ಮನಸ್ಸಿಗೆ ಹಚ್ಚಿಕೊಂಡು ಅಂದನಿಂದ ನನ್ನ ಆರೋಗ್ಯ ಸರಿ ಇರುವುದಿಲ್ಲ. ನಾನು ನಮ್ಮ ಠಾಣೆಯ ವಿಚಾರವನ್ನು ನಮ್ಮ ಮನೆಯಲ್ಲಿ ಯಾರತ್ರ ಹೇಳಿಕೊಳ್ಳುವುದಿಲ್ಲ, ಆದರೆ, ಜಗಳ ಮಾಡಿದ ಬಗ್ಗೆ ಆದಿಲ್ ರವರ ಹತ್ತಿರ ಹೇಳಿಕೊಂಡಿರುತ್ತೇನೆ. ನನ್ನ ಬಗ್ಗೆ, ನನ್ನ ಕರ್ತವ್ಯದ ಬಗ್ಗೆ ರಾಧಾ ಮೇಡಂ ಹಾಗೂ ಕವಿತಾ ಮೇಡಂ ಹತ್ತಿರ ಅವನಿಗೆ ಯಾಕೆ ಅಲ್ಲಿ ಹಾಕಿದಿರಿ, ಇಲ್ಲಿ ಹಾಕಿದ್ದೀರಿ ಅಂತ ಕೇಳುತ್ತಾನೆ ಹಾಗೂ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾನೆ. ಆದರಿಂದ ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನನ್ನ ಸಾವಿಗೆ ನಾಸೀರ್ ಅಹ್ಮದ್ ಎಚ್ ಸಿ 131 ಕಾರಣ ಎಂದು ಡೆತ್‌ನೋಟ್‌ನಲ್ಲಿ ಮೊಹಮದ್ ಝಕ್ರಿಯ ಉಲ್ಲೇಖಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ