ಮಲ್ಲಳ್ಳಿ ಜಲಪಾತದಲ್ಲಿ ತಪ್ಪಿದ ಅವಘಡ: ಇಬ್ಬರು ವಿದ್ಯಾರ್ಥಿಗಳ ರಕ್ಷಣೆ

KannadaprabhaNewsNetwork |  
Published : Jul 07, 2026, 03:00 AM IST
 | Kannada Prabha

ಸಾರಾಂಶ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಸ್ಥಳೀಯ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದೆ.

ಸೋಮವಾರಪೇಟೆ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತವೊಂದು ಸ್ಥಳೀಯ ಗ್ರಾಮಸ್ಥರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದೆ.ಆಂಧ್ರಪ್ರದೇಶದಿಂದ ಪ್ರವಾಸಕ್ಕೆ ಬಂದಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಜೀವ ಉಳಿಸಿಕೊಳ್ಳಲು ಬಂಡೆಯನ್ನು ಹಿಡಿದು ಸುಮಾರು ಒಂದು ಗಂಟೆ ಕಾಲ ಪರದಾಡಿದ ಘಟನೆ ಸೋಮವಾರ ನಡೆದಿದೆ.ರಕ್ಷಿಸಲಾದ ವಿದ್ಯಾರ್ಥಿಗಳನ್ನು ಆಂಧ್ರಪ್ರದೇಶ ಮೂಲದ ಗಣೇಶ್ ನಾಯಕ್ (21) ಹಾಗೂ ಸಂತೋಷ್ ಕುಮಾರ್ (23) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ಮಲ್ಲಳ್ಳಿ ಜಲಪಾತ ವೀಕ್ಷಣೆಗೆ ಆಗಮಿಸಿದ್ದರು.ಮಾಹಿತಿ ಪ್ರಕಾರ, ಜಲಪಾತದ ಬಳಿ ಅಳವಡಿಸಲಾಗಿದ್ದ ಸುರಕ್ಷತಾ ಬೇಲಿಯನ್ನು ಲೆಕ್ಕಿಸದೆ ಇಬ್ಬರು ವಿದ್ಯಾರ್ಥಿಗಳು ಹೊಳೆಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದರು. ಇದೇ ವೇಳೆ ಮೇಲ್ಭಾಗದಲ್ಲಿರುವ ಜಲ ವಿದ್ಯುತ್ ಉತ್ಪಾದನಾ ಘಟಕದಿಂದ ನೀರನ್ನು ಹರಿಸಲಾಯಿತು. ನೀರು ಬಿಡುವ ಮೊದಲು ನಿಯಮಾನುಸಾರ ಸೈರನ್ ಮೊಳಗಿಸಲಾಗಿದ್ದರೂ, ನೀರಿನಲ್ಲಿ ತಲ್ಲೀನರಾಗಿದ್ದ ವಿದ್ಯಾರ್ಥಿಗಳಿಗೆ ಅದರ ಎಚ್ಚರಿಕೆ ಕೇಳಿಸಲಿಲ್ಲ ಎನ್ನಲಾಗಿದೆ.

ಕೆಲವೇ ಕ್ಷಣಗಳಲ್ಲಿ ಹೊಳೆಯಲ್ಲಿ ನೀರಿನ ಹರಿವು ಹಾಗೂ ರಭಸ ಏಕಾಏಕಿ ಹೆಚ್ಚಾಗಿದ್ದು, ಇಬ್ಬರೂ ನೀರಿನ ಸೆಳೆತಕ್ಕೆ ಸಿಲುಕಿದರು. ಅಪಾಯದ ಪರಿಸ್ಥಿತಿ ಅರಿತ ಅವರು ಸಮೀಪದಲ್ಲಿದ್ದ ಬಂಡೆಯನ್ನು ಹಿಡಿದುಕೊಂಡು ಜೀವ ಉಳಿಸಿಕೊಳ್ಳಲು ಹರಸಾಹಸಪಟ್ಟರು. ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿದ್ದರಿಂದ ಅವರು ಅಲ್ಲಿಂದ ಹೊರಬರಲು ಸಾಧ್ಯವಾಗದೆ ಸಿಲುಕಿಕೊಂಡರು.

ಸುಮಾರು ಒಂದು ಗಂಟೆ ಬಳಿಕ ಸ್ಥಳೀಯ ಗ್ರಾಮಸ್ಥರ ಗಮನಕ್ಕೆ ಈ ಘಟನೆ ಬಂದಿದೆ. ತಕ್ಷಣವೇ ಅವರು ಜಲ ವಿದ್ಯುತ್ ಘಟಕದ ಅಧಿಕಾರಿಗಳಿಗೆ ಮಾಹಿತಿ ನೀಡಿ ನೀರು ಹರಿಸುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಮನವಿ ಮಾಡಿದರು. ಬಳಿಕ ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನಿಸಲಾಯಿತು.ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಹಗ್ಗ ಸೇರಿದಂತೆ ಅಗತ್ಯ ರಕ್ಷಣಾ ಉಪಕರಣಗಳನ್ನು ಬಳಸಿ ಅಪಾಯದ ನಡುವೆ ಸಿಲುಕಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತೆಗೆದು ಜೀವ ಉಳಿಸಿದರು.ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳಾದ ಪವನ್ ಕುಮಾರ್, ಪಿ.ಎಸ್. ನಾಗೇಶ್, ಲತೇಶ್ ಕುಮಾರ್, ಪ್ರಶಾಂತ್ ಹಾಗೂ ವಿನಿ ಕುಮಾರ್ ಪ್ರಮುಖ ಪಾತ್ರ ವಹಿಸಿದರು. ಬಳಿಕ ಇಬ್ಬರು ವಿದ್ಯಾರ್ಥಿಗಳನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ವೈದ್ಯರ ಪ್ರಕಾರ, ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಯಾವುದೇ ಗಂಭೀರ ಗಾಯಗಳಿಲ್ಲ.ಈ ಘಟನೆ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಿರುವ ಅಧಿಕಾರಿಗಳು, ಜಲಪಾತ ಹಾಗೂ ನದಿ ತೀರಗಳಲ್ಲಿ ಅಳವಡಿಸಿರುವ ಸುರಕ್ಷತಾ ಬೇಲಿಗಳನ್ನು ಯಾವುದೇ ಕಾರಣಕ್ಕೂ ದಾಟಬಾರದು ಎಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಂದಾಪ್ರ ಕನ್ನಡ ಉಳಿವಿಗೆ ಸಮೂಹ ಪ್ರಯತ್ನ: ಜಯಪ್ರಕಾಶ ಹೆಗ್ಡೆ
ಉದ್ಯೋಗಾಕಾಂಕ್ಷಿಗಳು ಕೌಶಲ್ಯ ಬೆಳೆಸಿ: ಸುನಿಲ್ ಕುಮಾರ್