ಜಿಲ್ಲಾಸ್ಪತ್ರೆಯಲ್ಲಿ ಮೆದುಳು ಸಂಬಂಧಿ ಕಾಯಿಲೆಗೆ ಚಿಕಿತ್ಸೆ

KannadaprabhaNewsNetwork |  
Published : Jan 25, 2025, 01:01 AM IST
ಬಳ್ಳಾರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಫಾರ್ಮಸಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರಕ್ಕೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಚಾಲನೆ ನೀಡಿದರು.  | Kannada Prabha

ಸಾರಾಂಶ

ಮೆದುಳು ಆರೋಗ್ಯ ಸಂಬಂಧಿಸಿದ ಕಾಯಿಲೆಗಳಿಗೆ ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರಿಂದ ಸೌಲಭ್ಯವಿದ್ದು, ಇದರ ಸದುಪಯೋಗವಾಗಬೇಕು

ಬಳ್ಳಾರಿ: ಮೆದುಳು ಆರೋಗ್ಯ ಸಂಬಂಧಿಸಿದ ಕಾಯಿಲೆಗಳಿಗೆ ಬಳ್ಳಾರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ತಜ್ಞರಿಂದ ಸೌಲಭ್ಯವಿದ್ದು, ಇದರ ಸದುಪಯೋಗವಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ವಿಭಾಗ ಇವರ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಫಾರ್ಮಸಿ ಅಧಿಕಾರಿಗಳಿಗೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮೆದುಳು ಮತ್ತು ನರ ಸಮಸ್ಯೆಗಳಿಗೆ ಜನತೆಯು ಸಾಮಾನ್ಯವಾಗಿ ನಗರದ ವಿಮ್ಸ್ ತಪ್ಪಿದರೆ ಬೆಂಗಳೂರು ಮತ್ತು ಧಾರವಾಡಕ್ಕೆ ತೆರಳುತ್ತಾರೆ. ಇದನ್ನು ತಪ್ಪಿಸಲು ಜಿಲ್ಲಾ ಆಸ್ಪತ್ರೆಯಲ್ಲಿಯೇ ತಜ್ಞರ ಸೌಲಭ್ಯವನ್ನು ಒದಗಿಸಿರುವುದರಿಂದ ಜನತೆಗೆ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಕ್ಷೇತ್ರ ಮಟ್ಟದಲ್ಲಿ ನೀಡಬೇಕು. ಅನಗತ್ಯ ಆರ್ಥಿಕ ವೆಚ್ಚವನ್ನು ಕಡಿಮೆ ಮಾಡುವುದರ ಜೊತೆಗೆ ಕುಟುಂಬದ ಸದಸ್ಯರ ನೆಮ್ಮದಿಯ ಜೀವನಕ್ಕೆ ಕ್ಷೇತ್ರ ಮಟ್ಟದಲ್ಲಿ ಜಾಗೃತಿಗೊಳಿಸಬೇಕು ಎಂದು ತಿಳಿಸಿದರು.

ರಾಷ್ಟ್ರದ ಹೆಸರಾಂತ ಮನೋ ಆರೈಕೆ ಕೇಂದ್ರವಾಗಿರುವ ನಿಮಾನ್ಸ್ ಸಹಯೋಗ ಮತ್ತು ಸಲಹೆಗಳೊಂದಿಗೆ ನರರೋಗ ತಜ್ಞರ ಉಪಸ್ಥಿತಿಯಲ್ಲಿ ಮೆದುಳು ಆರೋಗ್ಯಕ್ಕೆ ಸಂಬಂಧಪಟ್ಟಂತೆ ಆಪ್ತಸಮಾಲೋಚನೆ ನಡೆಸಲಾಗುವುದು. ಮುಖ್ಯವಾಗಿ ಪಾರ್ಶ್ವವಾಯು, ಅಪಸ್ಮಾರ, ಮರೆವು ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರ ವೈಜ್ಞಾನಿಕ ಕಾಯಿಲೆಗಳಿಂದ ಬಳಲುತ್ತಿರುವವರು ಆರಂಭಿಕ ಹಂತದಲ್ಲಿಯೇ ತಜ್ಞರನ್ನು ಸಂಪರ್ಕಿಸುವ ಮೂಲಕ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ ಎಂದರು.

ಜಿಲ್ಲಾ ಮಾನಸಿಕ ಆರೋಗ್ಯ ಅನುಷ್ಟಾನ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ಮಾತನಾಡಿ, ಈಗಾಗಲೇ ಜಿಲ್ಲಾ ಶಸ್ತ್ರ ಚಿಕಿತ್ಸಕರ ಅಧೀನದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆದುಳು ಆರೋಗ್ಯ ವಿಭಾಗ ಆರಂಭಿಸಲಾಗಿದ್ದು, ವೈದ್ಯರು ಫಿಜಿಯೋಥೆರಫಿಸ್ಟ್, ಸ್ಪೀಚ್‌ಥೆರಫಿಸ್ಟ್, ಮನೋಶಾಸ್ತ್ರಜ್ಞರು, ಶುಶ್ರೂಷಣಾಧಿಕಾರಿ ಒಳಗೊಂಡ ವೈದ್ಯಕೀಯ ತಂಡವು ಕಾರ್ಯನಿರ್ವಹಿಸುತ್ತಿದೆ ಎಂದರು.

ಮಾನಸಿಕ ಆರೋಗ್ಯ ಸಮಸ್ಯೆಗಳು ಕಂಡುಬರುವಂತಹವವರು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಮನೋ ತಜ್ಞರ ಮೂಲಕ ಎಲ್ಲ ತಾಲೂಕುಗಳಲ್ಲಿ ಪ್ರತಿ ಮಂಗಳವಾರ ಮನೋಚೈತನ್ಯ ಕಾರ್ಯಕ್ರಮವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಕಂಪ್ಲಿ, ಕುರುಗೋಡು, ಮೋಕಾ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿಯು ಸಹ ಶಿಬಿರಗಳನ್ನು ಏರ್ಪಡಿಸಿ ಸ್ಥಳದಲ್ಲಿಯೇ ತಪಾಸಣೆ, ಆಪ್ತ ಸಮಾಲೋಚನೆ ಹಾಗೂ ಔಷಧೋಪಚಾರ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಇದರ ಸೌಲಭ್ಯ ಪಡೆಯುವ ಮೂಲಕ ಆರಂಭದಲ್ಲಿಯೇ ಮಾನಸಿಕ ಆರೋಗ್ಯ ಗುಣಪಡಿಸಲು ಜನತೆಗೆ ಜಾಗೃತಿ ನೀಡಲು ತಿಳಿಸಿದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪನವರ, ಮೆದುಳು ಆರೋಗ್ಯ ಉಪಕ್ರಮದ ಜಿಲ್ಲಾ ಸಂಯೋಜಕ ಸಣ್ಣ ಕೇಶವ್, ಡಿಎಸ್‌ಆರ್‌ಸಿ ಆಪ್ತ ಸಮಾಲೋಚಕರಾದ ಪರಿಮಳ ಸೇರಿದಂತೆ ಜಿಲ್ಲೆಯ ಎಲ್ಲ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಫಾರ್ಮಸಿ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಸ ತೊಡಕು ಹಿನ್ನೆಲೆಯಲ್ಲಿ ಮುಂಜಾನೆಯೇ ಮಾಂಸದಂಗಡಿ ಮುಂದೆ ಜನರ ಸರದಿ ಸಾಲು
ಬೆಂಗಳೂರು ನಗರದಲ್ಲಿ ರಂಜಾನ್‌ ಆಚರಣೆ ಭರದ ಸಿದ್ಧತೆ