ಎಚ್.ಮಲ್ಲಿಗೆರೆಯ ‘ಗಾಂಧಿ ಶಿಲ್ಪ ಕಲಾವಿದರಿಗೆ’ ಗೌರವ ಸಮರ್ಪಣೆ

KannadaprabhaNewsNetwork |  
Published : Oct 02, 2024, 01:03 AM IST
1ಕೆಎಂಎನ್‌ಡಿ-5ಮಂಡ್ಯ ತಾಲೂಕು ಎಚ್‌.ಮಲ್ಲೀಗೆರೆಯ ಗಾಂಧಿ ಗ್ರಾಮದಲ್ಲಿ ಸಿಮೆಂಟ್‌ ಶಿಲ್ಪ ನಿರ್ಮಾಣ ಶಿಬಿರದಲ್ಲಿ ಭಾಗವಹಿಸಿದ್ದ ಶಿಲ್ಪ ಕಲಾವಿದರನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

‘ಶಿಲ್ಪಗಳಿಗೆ ಭಾವ ಮತ್ತು ಜೀವವನ್ನು ತುಂಬಿರುವ ಕಲಾವಿದರ ಕಾರ್ಯ ಸ್ತುತ್ಯಾರ್ಹ. ತನ್ಮಯತೆ, ಏಕಾಗ್ರತೆ, ಕುಶಲತೆ ಮತ್ತು ಶಾಂತ ಮನಸ್ಥಿತಿಯಿಂದ ಕೆಲಸ ಮಾಡಿದ್ದರಿಂದಲೇ ಶಿಲ್ಪಗಳಲ್ಲಿ ಜೀವಂತಿಕೆ ಇದೆ. ಈ ಸ್ಥಳಕ್ಕೆ ಜೀವಕಳೆ ಬಂದಿದೆ. ಶಿಲ್ಪಗಳಂತೆಯೇ ಕಲಾವಿದರ ಹೆಸರು ಕೂಡ ನೂರಾರು ಕಾಲ ಉಳಿಯಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಎಚ್.ಮಲ್ಲಿಗೆರೆಯ ‘ಗಾಂಧಿ ಗ್ರಾಮ’ದಲ್ಲಿ ಮಹಾತ್ಮ ಗಾಂಧೀಜಿ ಅವರ ವ್ಯಕ್ತಿ ವಿಚಾರ ಕುರಿತ ಸಿಮೆಂಟ್ ಶಿಲ್ಪ ನಿರ್ಮಾಣ ಶಿಬಿರದಲ್ಲಿ ಭಾಗವಹಿಸಿದ್ದ ಶಿಲ್ಪ ಕಲಾವಿದರನ್ನು ಮಾಜಿ ಸಚಿವ ಎಂ.ಎಸ್.ಆತ್ಮಾನಂದ ಮತ್ತು ಬೆಂಗಳೂರಿನ ಗಾಂಧಿ ಭವನದ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜು ಅವರು ಸನ್ಮಾನಿಸಿ ಗೌರವಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಹಾಗೂ ಮಂಡ್ಯದ ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ (ರಿ), ಸಹಯೋಗದಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಶಿಬಿರವು ಮಂಗಳವಾರ ಸಂಪನ್ನಗೊಂಡಿತು. ಕಲಾವಿದರು ಈ ಅವಧಿಯಲ್ಲಿ 30 ಶಿಲ್ಪಗಳಿಗೆ ಜೀವ ತುಂಬಿದರು.

ಶಿಲ್ಪ ಕಲಾವಿದರನ್ನು ಗೌರವಿಸಿದ ಬಳಿಕ ಮಾತನಾಡಿದ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ‘ಶಿಲ್ಪಗಳಿಗೆ ಭಾವ ಮತ್ತು ಜೀವವನ್ನು ತುಂಬಿರುವ ಕಲಾವಿದರ ಕಾರ್ಯ ಸ್ತುತ್ಯಾರ್ಹ. ತನ್ಮಯತೆ, ಏಕಾಗ್ರತೆ, ಕುಶಲತೆ ಮತ್ತು ಶಾಂತ ಮನಸ್ಥಿತಿಯಿಂದ ಕೆಲಸ ಮಾಡಿದ್ದರಿಂದಲೇ ಶಿಲ್ಪಗಳಲ್ಲಿ ಜೀವಂತಿಕೆ ಇದೆ. ಈ ಸ್ಥಳಕ್ಕೆ ಜೀವಕಳೆ ಬಂದಿದೆ. ಶಿಲ್ಪಗಳಂತೆಯೇ ಕಲಾವಿದರ ಹೆಸರು ಕೂಡ ನೂರಾರು ಕಾಲ ಉಳಿಯಲಿದೆ ಎಂದು ಶ್ಲಾಘಿಸಿದರು.

ನಿತ್ಯವೂ ಪ್ರಾತಃ ಸ್ಮರಣೀಯರೂ ಆದ ಗಾಂಧೀಜಿ ಅವರ ಜೀವನ ಸಂದೇಶ ಸಾರುವ ‘ಗಾಂಧಿ ಗ್ರಾಮ’ದ ನಿರ್ಮಾಣಕ್ಕಾಗಿ ಜಿ.ಮಾದೇಗೌಡರು ಸಾಕಷ್ಟು ಶ್ರಮಿಸಿದ್ದರು. ಗೌಡರು ಯೋಜಿಸಿದ್ದಂತೆಯೇ ‘ಗಾಂಧಿ ಗ್ರಾಮ’ ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ, ‘ದುಡಿಮೆಯೇ ದೇವರು’ ಎನ್ನುವಂತಹದ್ದು ಸೇರಿದಂತೆ ಎಲ್ಲಾ ಆಯಾಮಗಳನ್ನು ಪೂರೈಸುವಂತೆ ಮಾದರಿಯಾಗಿ, ಪವಿತ್ರ ತಾಣವಾಗಿ ರೂಪುಗೊಳ್ಳಲಿ ಎಂದರು.

ಕರ್ನಾಟಕ ಸರ್ಕಾರದ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-2024’ಕ್ಕೆ ಭಾಜನರಾಗಿರುವ ಬೆಂಗಳೂರಿನ ಗಾಂಧಿ ಭವನದ ನಿರ್ದೇಶಕ ಪ್ರೊ.ಜಿ.ಬಿ.ಶಿವರಾಜು ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರೊ.ಜಿ.ಬಿ.ಶಿವರಾಜು ಅವರು, ‘ಇಂದಿನ ಹಲವಾರು ಬಿಕ್ಕಟ್ಟುಗಳು, ವಿಷಮ ಪರಿಸ್ಥಿತಿಯಲ್ಲಿ ಮಧ್ಯೆ ಬದುಕುತ್ತಿರುವ ನಾವು ಗಾಂಧೀಜಿ ಅವರ ಜೀವನ ಸಂದೇಶವನ್ನು ಅನುಸರಿಸಬೇಕಿದೆ. ಎಲ್ಲರ ಮನಮನಗಳಿಗೆ ಮನೆಮನೆಗಳಿಗೆ ಬಾಪು ಸಂದೇಶವನ್ನು ತಲುಪಿಸಬೇಕಿದೆ ಎಂದರು.

ಶಿಬಿರದಲ್ಲಿ ನಿರ್ಮಿಸಲ್ಪಟ್ಟ ಗಾಂಧೀಜಿ ಅವರ ಒಂದು ಪುತ್ಥಳಿಯನ್ನು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾದ ಶಿಲ್ಪಿ ಎಂ.ಸಿ.ರಮೇಶ್ ಅವರಿಗೆ ಶಾಸಕ ಹಾಗೂ ಮಹಾತ್ಮ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಮಧು ಜಿ.ಮಾದೇಗೌಡ ಹಸ್ತಾಂತರಿಸಿದರು.

ಶಿಬಿರದ ನಿರ್ದೇಶಕ ಕೆ.ನಾರಾಯಣರಾವ್ ಮತ್ತು ಶಿಬಿರದ ಸಂಚಾಲಕ ವೈ.ಕುಮಾರ್ ಹಾಜರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್, ಎಚ್.ಮಲ್ಲಿಗೆರೆ ಗ್ರಾಪಂ ಅಧ್ಯಕ್ಷ ಎಚ್.ಕೆ.ವಿನಯ್, ಉಪಾಧ್ಯಕ್ಷೆ ಬಿ.ಜೆ.ಭಾಗ್ಯಮ್ಮ, ಜಿಪಂ ಮಾಜಿ ಸದಸ್ಯ ಸಿ.ಮಾದಪ್ಪ, ಮಾಜಿ ಅಧ್ಯಕ್ಷ ಎಂ.ರಮೇಶ್, ಪಿಡಿಓ ಕೆ.ವೈ.ಪವಿತ್ರಾ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ