ಕನ್ನಡಪ್ರಭ ವಾರ್ತೆ ಸೊರಬ
ತಾಲೂಕಿನ ಶಾಂತಪುರ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಅಂಗವಾಗಿ ಜರುಗಿದ ಜನ ಜಾಗೃತಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಮಾನವೀಯತೆಯಲ್ಲಿ ನಂಬಿಕೆ ವಿಶ್ವಾಸಗಳನ್ನು ಯಾವತ್ತೂ ಕಳೆದುಕೊಳ್ಳಬಾರದು. ಅನುಭವದಿಂದ ಸಿಗುವ ಜ್ಞಾನ ಓದಿನಿಂದ ಸಿಗುವುದಿಲ್ಲ. ಒರೆಗಲ್ಲಿಗೆ ಹಚ್ಚಿ ತಿಕ್ಕಿದಾಗ ಶ್ರೀಗಂಧ ಹೊರ ಹೊಮ್ಮುವಂತೆ ಸಂಕಷ್ಟಗಳನ್ನು ಎದುರಿಸಿದ ಮನುಷ್ಯ ಜೀವನದಲ್ಲಿ ಉನ್ನತಿ ಹೊಂದಲು ಸಾಧ್ಯ. ಹುಟ್ಟು ಸಾವು ನಮ್ಮ ಕೈಯಲ್ಲಿ ಇಲ್ಲ. ಆದರೆ ಬದುಕು ಮಾತ್ರ ನಮ್ಮ ಕೈಯಲ್ಲಿದೆ ಎಂಬುದನ್ನು ಮರೆಯಬಾರದು. ಗಾಡಾಂಧಕಾರದಲ್ಲಿ ಮುಳುಗಿದ ಮಾನವರನ್ನು ಎಚ್ಚರಿಸಿ ಜಾಗೃತಿ ಉಂಟು ಮಾಡುವುದಕ್ಕಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಅವತಾರದ ಮೂಲ ಉದ್ದೇಶವಾಗಿದೆ ಎಂದರು.ಶಾಂತಪುರ ಸಂಸ್ಥಾನ ಹಿರೇಮಠದಲ್ಲಿ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಂಯೋಜಿಸಿ ಗುರುಸ್ಥಲದ ಹಿರಿಮೆಯನ್ನು ಸಾರುತ್ತಿರುವುದು ತಮಗೆ ಅತೀವ ಸಂತೋಷ ಉಂಟು ಮಾಡಿದೆ ಎಂದು ಹರುಷ ವ್ಯಕ್ತಪಡಿಸಿ, ಶ್ರೀಗಳವರಿಗೆ ರೇಶ್ಮೆ ಮಡಿ ಸ್ಮರಣಿಕೆ ಫಲಪುಷ್ಪವಿತ್ತು ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ ಬಂಕಾಪುರ ಹಿರೇಮಠದ ರೇವಣಸಿದ್ಧ ಶಿವಾಚಾರ್ಯರು ಮಾತನಾಡಿ, ಬೆಳಕಿನಲ್ಲಿ ಬೆಳಕಿಗೆ ಬೆಲೆಯಿಲ್ಲ. ಆದರೆ ಕತ್ತಲೆಯಲ್ಲಿ ಕಿರು ದೀಪಕ್ಕೂ ದೊಡ್ಡದಾದ ಬೆಲೆಯಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರ ಧಾರ್ಮಿಕ ಮತ್ತು ಸಾಮಾಜಿಕ ಚಿಂತನೆಗಳು ಉಜ್ವಲ ಬಾಳಿಗೆ ಆಸರೆಯಾಗಿವೆ ಎಂದರು.
ಮಳಲಿ ಸಂಸ್ಥಾನ ಮಠದ ಡಾ.ನಾಗಭೂಷಣ ಶಿವಾಚಾರ್ಯರು, ಜಡೆ ವಿರಕ್ತಮಠದ ಡಾ.ಮಹಾಂತಸ್ವಾಮಿಗಳು, ಸಂಗೊಳ್ಳಿ ಗುರುಲಿಂಗ ಶಿವಾಚಾರ್ಯರು, ಜಡೆ ಹಿರೇಮಠದ ಅಮರೇಶ್ವರ ಶಿವಾಚಾರ್ಯರು, ಹಾರನಹಳ್ಳಿ ಶಿವಯೋಗಿ ಶಿವಾಚಾರ್ಯರು, ಕುರವತ್ತಿ ನಂದೀಶ್ವರ ಶಿವಾಚಾರ್ಯರು, ಲಕ್ಕವಳ್ಳಿ ಜೈನ ಮಠದ ಭಟ್ಟಾರಕ ಸ್ವಾಮಿಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಸದಾನಂದಗೌಡ್ರು ಬಿಳಗಲಿ, ಎ.ಎನ್. ಪ್ರಕಾಶ, ಗುರುಕುಮಾರ್ ಪಾಟೀಲ ಸೇರಿದಂತೆ ಹಲವಾರು ಗಣ್ಯರಿಗೆ ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಶುಭ ಹಾರೈಸಿದರು. ವೀರೇಂದ್ರ ಪಾಟೀಲ ಬಂಕವಳ್ಳಿ ನಿರೂಪಿಸಿದರು. ಗಿರೀಶ ಮತ್ತು ಸಹೋದರರು ಪ್ರಸಾದ ಸೇವೆ ಸಲ್ಲಿಸಿದರು.