ಎರಡೆರಡು ಬಾರಿ ಸಿಎಂ ಆದವರನ್ನು ನಂಬಿದ್ರೇ ಚಿಪ್ಪೇ ಗತಿ: ರವಿಕುಮಾರ್

KannadaprabhaNewsNetwork |  
Published : Dec 29, 2025, 01:30 AM IST
೨೮ಕೆಎಂಎನ್‌ಡಿ-೨ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಅಧಿಕಾರಸ್ಥ ದಲಿತ ಸಮುದಾಯದವರನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್ ಹಾಗೂ ದಲಿತ ಸಂಘಟನೆಗಳ ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚುವುದೇ ಬಿಜೆಪಿ-ಜೆಡಿಎಸ್ ಕೆಲಸ. ಹಾಗಾಗಿ ಮಂಡ್ಯವನ್ನು ಮತ್ತೊಂದು ಮಂಗಳೂರು ಆಗುವುದಕ್ಕೆ ಬಿಡಬೇಡಿ. ಜಾತಿ-ಧರ್ಮಗಳ ನಡುವೆ ಬೆಂಕಿ ಹಚ್ಚುವವರ ಜೊತೆಗೆ ಜೆಡಿಎಸ್‌ನ್ನೂ ಮೂಟೆ ಕಟ್ಟಿ ಜಿಲ್ಲೆಯಿಂದ ಹೊರಗೆ ಹಾಕಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಎರಡೆರಡು ಬಾರಿ ಸಿಎಂ ಆದವರನ್ನು ನಂಬಿದರೆ ತೆಂಗಿನಕಾಯಿ ಚಿಪ್ಪೇ ಗತಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೆಸರೇಳದೆ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಕಿಡಿಕಾರಿದರು.

ದಲಿತ ಸಮುದಾಯ ಸಂಘಟನೆಗಳ ಅಭಿನಂದನಾ ಸಮಿತಿ ವತಿಯಿಂದ ಭಾನುವಾರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚುವುದೇ ಬಿಜೆಪಿ-ಜೆಡಿಎಸ್ ಕೆಲಸ. ಹಾಗಾಗಿ ಮಂಡ್ಯವನ್ನು ಮತ್ತೊಂದು ಮಂಗಳೂರು ಆಗುವುದಕ್ಕೆ ಬಿಡಬೇಡಿ. ಜಾತಿ-ಧರ್ಮಗಳ ನಡುವೆ ಬೆಂಕಿ ಹಚ್ಚುವವರ ಜೊತೆಗೆ ಜೆಡಿಎಸ್‌ನ್ನೂ ಮೂಟೆ ಕಟ್ಟಿ ಜಿಲ್ಲೆಯಿಂದ ಹೊರಗೆ ಹಾಕಬೇಕು. ಎರಡೂ ಪಕ್ಷದವರು ದಲಿತರ ಸಮಾಧಿಯ ಮೇಲೆ ಅಧಿಕಾರ ನಡೆಸುವವರು. ವೋಟ್ ಬ್ಯಾಂಕ್‌ಗೆ ಮಾತ್ರ ಬಳಸಿಕೊಂಡು ಬಿಸಾಡುವವರು ಎಂದು ಟೀಕಿಸಿದರು.

ಕಾಂಗ್ರೆಸ್ ದಲಿತರನ್ನು ಕೇವಲ ವೋಟ್ ಬ್ಯಾಂಕ್ ಆಗಿ ಮಾತ್ರ ಬಳಸಿಕೊಂಡಿಲ್ಲ. ಸಣ್ಣ ಜಾತಿಯವರಿಗೂ ಅಧಿಕಾರ, ಸ್ಥಾನ-ಮಾನಗಳನ್ನು ನೀಡಿದೆ. ಕಾಂಗ್ರೆಸ್ ಜೊತೆಗೆ ಸಮುದಾಯ ಇರಬೇಕು. ಮಂಡ್ಯ ಕ್ಷೇತ್ರದಲ್ಲಿ ೫೦ ವರ್ಷಗಳಿಂದ ಡಾಂಬರು ಕಾಣದ ದಲಿತ ಕಾಲೋನಿಗಳಿಗೆ ಕೋಟ್ಯಂತರ ರು. ಹಣ ಖರ್ಚು ಮಾಡಿ ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದ್ದೇನೆ. ಎಸ್‌ಸಿಪಿ-ಟಿಎಸ್‌ಪಿಯಡಿ ಮೂಲ ಸೌಕರ್ಯ ಒದಗಿಸಿಕೊಟ್ಟಿದ್ದೇನೆ. ದಲಿತ ಸಮುದಾಯ ಭವನಗಳಿಗೂ ಕೋಟ್ಯಂತರ ರು. ಹಣ ನೀಡಿದ್ದೇನೆ. ಜೊತೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ಬಾಬು ಜಗಜೀವನ್‌ರಾಮ್ ಮತ್ತು ಅಂಬೇಡ್ಕರ್ ಪ್ರತಿಮೆಗಳು ಮುಕ್ಕಾಗಿದ್ದು, ಅವುಗಳಿಗೆ ಬದಲಾಗಿ ಪಂಚಲೋಹದ ಪ್ರತಿಮೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

ಸಚಿವರಿಂದ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ

ನಾಗಮಂಗಲ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಡಿ.29ರಂದು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ಬೆಳ್ಳೂರು ಪಟ್ಟಣ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10.30ಕ್ಕೆ ಬೆಳ್ಳೂರು ಪಪಂ ವ್ಯಾಪ್ತಿಯ ನಾಗಲಾಪುರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ನಂತರ ಬೆಳ್ಳೂರು ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆ ಮಾಡುವರು. ಇದೇ ವೇಳೆ ನಾಗಮಂಗಲ ಅಗ್ನಿಶಾಮಕ ಠಾಣೆಗೆ ಸರ್ಕಾರ ನೀಡಿರುವ ಎರಡು ಬೆಂಕಿನಂದಿಸುವ ವಾಹನಗಳಿಗೆ ಪೂಜೆ ಸಲ್ಲಿಸುವರು.

ಬಳಿಕ ಬೆಳ್ಳೂರು ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಎಂಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಸೇರಿದಂತೆ ಬ್ಯಾಂಕ್‌ನ ಆಡಳಿತ ಮಂಡಳಿ ಎಲ್ಲಾ ನಿರ್ದೇಶಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಗಣ್ಯರು ಆಗಮಿಸುವ ಹಿನ್ನಲೆಯಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ