ಒಳಮೀಸಲಾತಿ ಜಾರಿಗೆ ತುಮಕೂರು ಮಾದಿಗ ಸಂಘಟನೆಗಳು ಸಿಎಂಗೆ ಒತ್ತಾಯ

KannadaprabhaNewsNetwork |  
Published : Oct 17, 2024, 12:14 AM IST
ಒಳಮೀಸಲಾತಿ ಜಾರಿಗೆ ಮಾದಿಗ ಸಂಘಟನೆಗಳ ಒಕ್ಕೂಟ ಆಗ್ರಹ | Kannada Prabha

ಸಾರಾಂಶ

ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ । ಘೇರಾವ್‌ ಎಚ್ಚರಿಕೆ, ಸಿಎಂಗೆ ಮನವಿ । ಮಳೆಯಲ್ಲೇ ಮಾನವ ಸರಪಳಿ

ಕನ್ನಡಪ್ರಭ ವಾರ್ತೆ ತುಮಕೂರು

ಸರ್ವೋಚ್ಛ ನ್ಯಾಯಾಲಯದ ಪೀಠದ ತೀರ್ಪಿನಂತೆ ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ವಿವಿಧ ಮಾದಿಗ ಸಂಘಟನೆಗಳ ಮುಖಂಡರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಈ ತಿಂಗಳ 18 ರಂದು ನಡೆಯುವ ಸಚಿವ ಸಂಪುಟ ಸಭೆ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿ ಸಂಬಂಧ ತೀರ್ಮಾನ ಮಾಡಬೇಕು, ತಪ್ಪಿದಲ್ಲಿ ರಾಜ್ಯಾದ್ಯಂತ ಮುಖ್ಯಮಂತ್ರಿ, ಸಚಿವರನ್ನು ಘೇರಾವ್ ಮಾಡಲಾಗುವುದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುರಿಯುವ ಮಳೆಯಲ್ಲೂ ಪ್ರತಿಭಟನಾಕಾರರು ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೈ.ಎಚ್.ಹುಚ್ಚಯ್ಯ ಮಾತನಾಡಿ, ಕಳೆದ ಆ.1ರಂದು ಸವೋಚ್ಛ ನ್ಯಾಯಾಲಯದ ಏಳು ಸದಸ್ಯರ ಪೂರ್ಣ ಪೀಠವು ಎಸ್.ಸಿ., ಎಸ್.ಟಿ. ಮೀಸಲಾತಿಯಲ್ಲಿ ಒಳಮೀಸಲಾತಿ ಉಪವರ್ಗೀಕರಿಸಲು ಆಯಾ ಸರ್ಕಾರಕ್ಕೆ ಸಂಪೂರ್ಣ ಅಧಿಕಾರವಿದೆ ಎಂದು ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಅವಕಾಶ ವಂಚಿತ ನಾಡಿನ ಮಾದಿಗ ಸಮುದಾಯ ಸ್ವಾಗತಿಸಿದೆ. ಆದರೆ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರಲು ಮೀನಮೇಷ ಎಣಿಸುತ್ತಿದೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲಿ ಒಳಮೀಸಲಾತಿ ಜಾರಿಗೊಳಿಸಲು 6ನೇ ಗ್ಯಾರಂಟಿ ಘೋಷಿಸಿಕೊಂಡಂತೆ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕಾಗಿದೆ ಎಂದರು.

ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಮಾತನಾಡಿ, ಅ.18ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಮಾದಿಗ ಸಮುದಾಯ ಹೋರಾಟಕ್ಕಿಳಿಯುತ್ತದೆ. ಶಾಸಕರ ಮನೆ ಮುಂದೆ ಧರಣಿ ಮಾಡಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದರು.

ಬಿಜೆಪಿ ಮುಖಂಡ, ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್‌ಕುಮಾರ್ ಮಾತನಾಡಿ, ದತ್ತಾಂಶ ಲಭ್ಯವಿಲ್ಲ ಎಂಬ ಸಬೂಬನ್ನು ಒಡ್ಡಿ ಒಳಮೀಸಲಾತಿ ವರ್ಗೀಕರಣವನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ. ಸರ್ಕಾರದ ಈ ಧೋರಣೆ ಸರಿಯಲ್ಲ. ಸರ್ಕಾರದ ಮುಂದಿರುವ ಅನೇಕ ವರದಿಗಳಲ್ಲಿ ಮಾದಿಗ ಸಮುದಾಯಕ್ಕೆ ಆಗಿರುವ ಅನ್ಯಾಯ ಹಾಗೂ ಸವಲತ್ತುಗಳಿಂದ ವಂಚಿತವಾಗಿರುವ ದತ್ತಾಂಶಗಳ ವಿವರಗಳು ಲಭ್ಯವಿರುತ್ತವೆ ಎಂದು ಹೇಳಿದರು.

ಬಿಜೆಪಿ ಮುಖಂಡ ಡಾ.ಲಕ್ಷ್ಮೀಕಾಂತ್ ಮಾತನಾಡಿ, ಒಳಮೀಸಲಾತಿ ಜಾರಿ ಮಾಡಲು ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿ ಮಾಡದೆ ಸಮಿತಿ ಮಾಡುತ್ತೇವೆ, ಹೈಕಮಾಂಡ್ ಕೇಳಿ ತೀರ್ಮಾನ ಮಾಡುತ್ತೇವೆ ಎಂಬ ನೆಪ ಹೇಳುತ್ತಿದ್ದಾರೆ. ಜಾರಿ ಮಾಡದಂತೆ ತಡೆಯುವ ಹುನ್ನಾರ ಸರ್ಕಾರದಲ್ಲಿ ನಡೆಯುತ್ತಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ನಡೆದುಕೊಂಡು ಒಳಮೀಸಲಾತಿ ವರ್ಗೀಕರಣ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಶಾಸಕ ಸುರೇಶ್‌ಗೌಡ ಹೋರಾಟದಲ್ಲಿ ಭಾಗವಹಿಸಿದ್ದರು.

ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಬಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಎಚ್.ಎ.ಆಂಜನಪ್ಪ, ಗುಬ್ಬಿಯ ಜೆಡಿಎಸ್ ಮುಖಂಡ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜಗನ್ನಾಥ್, ಮುಖಂಡರಾದ ಮಾರುತಿ ಗಂಗಹನುಮಯ್ಯ, ವೆಂಕಟೇಶ್, ಮರಿಚೆನ್ನಮ್ಮ, ನರಸೀಯಪ್ಪ, ಪಿ.ಎನ್.ರಾಮಯ್ಯ, ಹೊಸಕೋಟೆ ನಟರಾಜು, ಹನುಮಂತರಾಯಪ್ಪ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ