ತುಮಕೂರು: ವೈಭವದ ಹೆತ್ತೇನಹಳ್ಳಿ ರಥೋತ್ಸವ ಸಂಭ್ರಮ

KannadaprabhaNewsNetwork |  
Published : Feb 18, 2026, 01:15 AM IST
 | Kannada Prabha

ಸಾರಾಂಶ

ನಾಡಿನ ನಾನಾ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದರು. ಬಳಿಕ ವಿವಿಧ ಬಗೆಯ ಪುಷ್ಪಗಳಿಂದ ವರ್ಣರಂಜಿತವಾಗಿ ಅಲಂಕರಿಸಲಾಗಿದ್ದ ರಥಕ್ಕೆ ಹೆತ್ತೇನಹಳ್ಳಿಯಮ್ಮ ದೇವಿಯನ್ನು ಕೂರಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ಕನ್ನಡಪ್ರಭ ವಾರ್ತೆ ತುಮಕೂರು

ಇತಿಹಾಸ ಪ್ರಸಿದ್ಧ ಹೆತ್ತೇನಹಳ್ಳಿಯ ಶ್ರೀ ಮಾರಮ್ಮ ಆದಿಶಕ್ತಿ ದೇವಿಯ ಜಾತ್ರಾ ಮಹೋತ್ಸವ ರಾತ್ರಿಯಿಂದ ಆರಂಭವಾಗಿದ್ದು, ಶ್ರೀ ಅಮ್ಮನವರ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಮಂಗಳವಾರ ಮುಂಜಾನೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಪ್ರತಿ ವರ್ಷದಂತೆ ಈ ಬಾರಿಯೂ ಮುಂಜಾನೆ ನಡೆದ ಹೆತ್ತೇನಹಳ್ಳಿಯಮ್ಮನ ರಥೋತ್ಸವಕ್ಕೆ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಭಕ್ತ ಸಮೂಹ ಸಾಕ್ಷಿಯಾಯಿತು.

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೆತ್ತೇನಹಳ್ಳಿ, ಕೈದಾಳ, ಗೂಳೂರು, ಕಂಭತ್ತನಹಳ್ಳಿ, ರಂಗಯ್ಯನಪಾಳ್ಯ, ಕುಮಂಜಿಪಾಳ್ಯ, ಚಿಕ್ಕಸಾರಂಗಿ, ಗಳಿಗೇನಹಳ್ಳಿ, ನಂದಿಹಳ್ಳಿ, ಹೊಸಹಳ್ಳಿ, ನರುಗನಹಳ್ಳಿ, ಮಾಯಣ್ಣಗೌಡನ ಪಾಳ್ಯ ಸೇರಿದಂತೆ ಈ ಭಾಗದ ಹಳ್ಳಿಗಳಲ್ಲಿ ಹೆತ್ತೇನಹಳ್ಳಿಯಮ್ಮನ ಜಾತ್ರೆಗೆ ವಿಶೇಷವಾಗಿಯೇ ಭಕ್ತ ಸಮೂಹ ಸಜ್ಜಾಗುತ್ತಾರೆ. ಅದರಂತೆ ಸೋಮವಾರ ಇಡೀ ದಿನ ಭಕ್ತರು ಉಪವಾಸ ವ್ರತ ಮಾಡಿ ಮುಂಜಾನೆ ಅಗ್ನಿಕೊಂಡ ಹಾಯ್ದು ಅಮ್ಮನವರಿಗೆ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.

ಇನ್ನು ಈ ಭಾಗದ ಹೆಣ್ಣು ಮಕ್ಕಳು ಅಮ್ಮನವರಿಗೆ ಬಾಯಿ ಬೀಗದ ಹರಕೆ ತೀರಿಸುವ ಸಂಪ್ರದಾಯ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹದಿ ಹರೆಯದ ಹೆಣ್ಣು ಮಕ್ಕಳು, ಮಹಿಳೆಯರು ಸಹ ಉಪವಾಸ ವ್ರತ ಮಾಡಿ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ಬಾಯಿಬೀಗ ಹಾಕಿಸಿಕೊಂಡು ಪೂಜೆ ಸಲ್ಲಿಸುವ ಮೂಲಕ ತಮ್ಮ ಹರಕೆ ತೀರಿಸಿದರು.

ಹೆತ್ತೇನಹಳ್ಳಿ ಜಾತ್ರೆಗೆಂದೇ ಕಂಭತ್ತನಹಳ್ಳಿಯ ವೀರ ಮಕ್ಕಳು ಒಂದು ವಾರದಿಂದ ಉಪವಾಸವಿದ್ದು, ನಸುಕಿನಲ್ಲಿ ಅಗ್ನಿಕೊಂಡ ಹಾಯುವ ಮೂಲಕ ಹರಕೆ ತೀರಿಸಿದ್ದು ವಿಶೇಷವಾಗಿತ್ತು.

ನಾಡಿನ ನಾನಾ ಕಡೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತ ಸಮೂಹ ಅಗ್ನಿಕೊಂಡ ಹಾಯ್ದರು. ಬಳಿಕ ವಿವಿಧ ಬಗೆಯ ಪುಷ್ಪಗಳಿಂದ ವರ್ಣರಂಜಿತವಾಗಿ ಅಲಂಕರಿಸಲಾಗಿದ್ದ ರಥಕ್ಕೆ ಹೆತ್ತೇನಹಳ್ಳಿಯಮ್ಮ ದೇವಿಯನ್ನು ಕೂರಿಸುತ್ತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು.

ಭಕ್ತರು ರಥವನ್ನು ಎಳೆಯಲು ನಾ.. ಮುಂದು, ತಾ.. ಮುಂದು ಎಂದು ಮುಗಿ ಬೀಳುತ್ತಿದ್ದ ದೃಶ್ಯ ಕಂಡು ಬಂತು.

ಅಮ್ಮನವರ ಅರ್ಚಕರು, ತಹಸೀಲ್ದಾರ್ ರಥದ ಗಾಲಿಗೆ ತೆಂಗಿನ ಕಾಯಿ ಒಡೆದು ಅಮ್ಮನವರಿಗೆ ಪೂಜೆ ಸಲ್ಲಿಸಿದ ನಂತರ ರಥದ ಗಾಲಿ ಒಂದು ಸುತ್ತು ಉರುಳುತ್ತಿದ್ದಂತೆ ಭಕ್ತರು ಶ್ರದ್ಧಾ ಭಕ್ತಿಯಿಂದ ರಥಕ್ಕೆ ಹೂವು, ದವನ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಾಡಿಕೊಂಡಿದ್ದ ಹರಕೆಯನ್ನು ತೀರಿಸಿದರು.

ಹೆತ್ತೇನಹಳ್ಳಿಯಮ್ಮನ ಜಾತ್ರೆ ಒಂದು ವಾರ ಕಾಲ ನಡೆಯಲಿದ್ದು, ಶನಿವಾರದ ವರೆಗೆ ಭಕ್ತಾದಿಗಳ ದಂಡು ಹೆತ್ತೇನಹಳ್ಳಿಗೆ ಹರಿದು ಬರಲಿದೆ. ರಥೋತ್ಸವದಲ್ಲಿ ಶಾಸಕ ಸುರೇಶ್‌ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಉಪವಿಭಾಗಾಧಿಕಾರಿ ನಾಹಿದಾ ಜಮ್‌ಜಮ್, ತಹಸೀಲ್ದಾರ್ ರಾಜೇಶ್ವರಿ, ಉಪತಹಸೀಲ್ದಾರ್ ಭಾನುಪ್ರಕಾಶ್, ರವಿನ್ಯೂ ಇನ್ಸ್ಪೆಕ್ಟರ್ ರಮೇಶ್‌ಕುಮಾರ್ ಹಾಗೂ ಗೂಳೂರು ಹೋಬಳಿ ಗ್ರಾಮ ಆಡಳಿತಾಧಿಕಾರಿಗಳು ಸೇರಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕೀಯದಲ್ಲಿ ಅಂಬೆಗಾಲಿಡುತ್ತಿರುವೆ: ಬಿ.ವೈ.ವಿಜಯೇಂದ್ರ
ಸುಬ್ಬಾರೆಡ್ಡಿ ಅನರ್ಹ: ಮರು ಚುನಾವಣೆಗೆ ಸಿಪಿಐಎಂ ಒತ್ತಾಯ