ತುಂಗಭದ್ರಾ ಹರಿವು ಹೆಚ್ಚಳ: ವಿಪತ್ತು ನಿರ್ವಹಣೆಗೆ ಸನ್ನದ್ಧ: ಡಿಸಿ ಗಂಗಾಧರಸ್ವಾಮಿ

KannadaprabhaNewsNetwork | Published : Jul 19, 2024 12:47 AM

ಸಾರಾಂಶ

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರು, ಜಾನುವಾರುಗಳ ರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಿ

ಕನ್ನಡಪ್ರಭ ವಾರ್ತೆ ದಾವಣಗೆರೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದ್ದು, ವಿಪತ್ತು ನಿರ್ವಹಣೆಗೆ ಸರ್ವ ಸನ್ನದ್ಧವಾಗಿರುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ನದಿ ಪಾತ್ರದ ಗ್ರಾಮಗಳ ಜನರು, ಜಾನುವಾರುಗಳ ರಕ್ಷಣೆಗಾಗಿ ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ತಾಲೂಕು ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳಿಗೆ ಅವರು ಆದೇಶಿಸಿದ್ದಾರೆ. ತುಂಗಾ ಜಲಾಶಯದಿಂದ ಸುಮಾರು 50 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ನೀರು ಬಿಡಲಾಗುತ್ತಿದೆ. ಈ ಪ್ರಮಾಣ ಇನ್ನೂ ಹೆಚ್ಚುವ ನಿರೀಕ್ಷೆ ಇದ್ದು, ಹೊನ್ನಾಳಿ ಪಟ್ಟಣದ ಬಾಲರಾಜ ಘಾಟ್ ಬಳಿ ಸಮಸ್ಯೆಯಾಗಲಿದ್ದು, ಅಲ್ಲಿನ ಜನರಿಗೆ ತಾತ್ಕಾಲಿಕವಾಗಿ ಕಾಳಜಿ ಕೇಂದ್ರ ತೆರೆಯುವಂತೆ ಅಲ್ಲಿನ ತಹಸೀಲ್ದಾರ್‌ಗೆ ಸೂಚಿಸಿದ್ದಾರೆ.

ಹರಿಹರ ತಾಲೂಕು ಕೇಂದ್ರದ ಗಂಗಾ ನಗರದ ಬಳಿ ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಳದಿಂದ ಜನರಿಗೆ ತೊಂದರೆಯಾಗಲಿದೆ. ಅಲ್ಲಿ ವಾಸಿಸುವ ಜನರಿಗೆ ತಾತ್ಕಾಲಿಕವಾಗಿ ಎಪಿಎಂಸಿ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ತಹಸೀಲ್ದಾರ್‌ಗೆ ಆದೇಶಿಸಿದ್ದಾರೆ.

ಹೊನ್ನಾಳಿಯಲ್ಲಿ ವಿಪತ್ತು ನಿರ್ವಹಣೆ ಪರಿಶೀಲನೆಗಾಗಿ ಜು.23ರಂದು ಸಭೆ ಕರೆಯಲಾಗಿದೆ. ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕ್ಷಣಕ್ಷಣಕ್ಕೂ ಏರಿಕೆಯಾಗುವುದರಿಂದ ವಿಪತ್ತು ನಿರ್ವಹಣಾ ತಂಡವನ್ನು ಸನ್ನದ್ಧವಾಗಿಡಲು ಸೂಚಿಸಲಾಗಿದೆ. ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಟ ಮಾಡಬಾರದು. ಜಾನುವಾರುಗಳನ್ನು ನದಿಗೆ ಇಳಿಸದಂತೆ, ನದಿ ಪಾತ್ರದಲ್ಲಿ ಅವುಗಳು ಮೇಯಲು ಬಿಡದಂತೆ ನೋಡಿಕೊಳ್ಳಬೇಕು ಎಂದು ಅವರು ಎಚ್ಚರಿಸಿದ್ದಾರೆ.

ಘಟ್ಟದ ಮಳೆಗೆ ತುಂಗಭದ್ರಾ ತಟದ ಜನ ತತ್ತರ!

ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವ ಮಧ್ಯ ಕರ್ನಾಟಕದ ಜೀವನದಿ

ದಾವಣಗೆರೆ: ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ ಮತ್ತು ಭದ್ರಾಡ್ಯಾಂಗಳಿಗೆ ಒಳ ಹರಿವು ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಧ್ಯ ಕರ್ನಾಟಕದ ಜೀವನದಿ ತುಂಗಭದ್ರೆಯಲ್ಲೂ ನೀರಿನ ಹರಿವಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ನದಿ ಪಾತ್ರದ ಗ್ರಾಮದ ಸಂಪರ್ಕ ರಸ್ತೆಗಳು ಜಲಾವೃತವಾಗುವ ಸಾಧ್ಯತೆ ಹೆಚ್ಚುತ್ತಿದೆ.

ಕಳೆದ ಕೆಲ ದಿನಗಳಿಂದ ಮಲೆನಾಡು, ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸಹಜವಾಗಿಯೇ ತುಂಗಾ ಮತ್ತು ಭದ್ರಾ ಅಣೆಕಟ್ಟೆಗಳ ಜಲಾನಯನ ಪ್ರದೇಶದಲ್ಲಿ ಸಮೃದ್ಧವಾಗಿ ಮಳೆಯಾಗುತ್ತಿರುವ ಬೆನ್ನಲ್ಲೇ ಡ್ಯಾಂಗಳಿಂದ ಹೆಚ್ಚುವರಿ ನೀರನ್ನು ತುಂಗಭದ್ರಾ ನದಿಗೆ ಬಿಡಲಾಗಿದೆ. ಕ್ಷಣಕ್ಷಣಕ್ಕೂ ನದಿ ನೀರಿನ ಹರಿವಿನ ಪ್ರಮಾಣ ಹೆಚ್ಚುತ್ತಿದೆ. ಉಕ್ಕಿ ಹರಿಯುತ್ತಿರುವ ತುಂಗಭದ್ರಾ ನದಿಯಿಂದಾಗಿ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನ ವಿವಿಧೆಡೆ ಅನೇಕ ಗ್ರಾಮಗಳ ಸಂಪರ್ಕ ರಸ್ತೆ ಜಲಾವೃತವಾಗಿದ್ದು, ಕೆಲವು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ. ಹೊನ್ನಾಳಿ ನದಿ ಪಾತ್ರದ ಪ್ರದೇಶ, ಹರಿಹರ ತಾ. ಉಕ್ಕಡಗಾತ್ರಿಯ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪರ್ಕ ಕಡಿತವಾಗಿದ್ದು, ನದಿ ಅಪಾಯದ ಮಟ್ಟವನ್ನು ತ ತಲುಪುವತ್ತ ಸಾಗುತ್ತಿದೆ.

ಹರಿಹರ-ಉಕ್ಕಡಗಾತ್ರಿಗೆ ಸಂಪರ್ಕ ಕಲ್ಪಿಸುವ ಪತ್ಯಾಪುರ ಮಾರ್ಗ ಜಲಾವೃತವಾಗಿದ್ದು, ಉಕ್ಕಡಗಾತ್ರಿ ಸೇರಿದಂತೆ ಸುತ್ತಮುತ್ತಲ ನೂರಾರು ಎಕರೆ ಪ್ರದೇಶ ಜಲಾವೃತವಾಗುತ್ತಿದೆ. ನದಿ ನೀರಿನ ಹರಿವು ಏರಿಕೆಯಾಗುತ್ತಿರುವುದು, ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಾವಣಗೆರೆ ಜಿಲ್ಲೆಯನ್ನು ಹಾದು ಹೋಗಿರುವ ತುಂಗಭದ್ರಾ ನದಿ ಪಾತ್ರದ 43ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಹೈಅಲರ್ಟ್‌ ಘೋಷಿಸಿದೆ.

Share this article