ಹೊಸಪೇಟೆ : ತುಂಗಭದ್ರಾ ಜಲಾಶಯದ ಒಳಹರಿವು 65,182 ಕ್ಯುಸೆಕ್ಗೆ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ ಎಂದು ತುಂಗಭದ್ರಾ ಮಂಡಳಿ ಭಾನುವಾರ ಕೂಡ ತಿಳಿಸಿದ್ದು, ನದಿಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.
ಜಲಾಶಯದ ಸಂಗ್ರಹ ಸಾಮರ್ಥ್ಯ 105.788 ಟಿಎಂಸಿ ಇದ್ದು, ಜಲಾಶಯದಲ್ಲಿ ಈಗ 67.473 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಕ್ರಸ್ಟ್ ಗೇಟ್ಗಳು ಮುಕ್ಕಾಗಿವೆ ಎಂದು ವರದಿ ಬಂದಿರುವ ಹಿನ್ನೆಲೆ ತಜ್ಞರ ಸಲಹೆ ಮೇರೆಗೆ ಈ ವರ್ಷ 80 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹ ಮಾಡಲು ನಿರ್ಧರಿಸಲಾಗಿದೆ. ಭದ್ರಾ ಮತ್ತು ತುಂಗಾದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟರೆ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಈ ಹಿನ್ನೆಲೆ ರಾಜ್ಯದ ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜನರಿಗೆ ಮತ್ತು ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಸ್ಥಳೀಯಾಡಳಿತಗಳಿಗೂ ಮುನ್ನೆಚ್ಚರಿಕೆ ಕ್ರಮವಹಿಸಲು ತುಂಗಭದ್ರಾ ಮಂಡಳಿ ಅಧೀಕ್ಷಕ ಎಂಜನಿಯರ್ ನಾರಾಯಣ ನಾಯ್ಕ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ತುಂಗಭದ್ರಾ ಜಲಾಶಯದ ಒಳ ಹರಿವು ಏರಿಕೆ ಆಗುತ್ತಲೇ ಸಾಗಿರುವ ಹಿನ್ನೆಲೆ ನದಿಗೆ ಆರಂಭದಲ್ಲಿ ವಿದ್ಯುತ್ ಉತ್ಪಾದನಾ ಘಟಕದ ಮೂಲಕ ಬಿಡಲು ತುಂಗಭದ್ರಾ ಮಂಡಳಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ಬಳಿಕ ಕ್ರಸ್ಟ್ ಗೇಟ್ಗಳನ್ನು ಎತ್ತರಿಸಿ ನದಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮಂಡಳಿ ಮೂಲಗಳು ತಿಳಿಸಿವೆ.
ತುಂಗಭದ್ರಾ ಜಲಾಶಯದಲ್ಲಿ ಕಳೆದ ವರ್ಷ 5.278 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿತ್ತು. ಈ ವರ್ಷ 67.473 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ 1819 ಕ್ಯುಸೆಕ್ ಒಳ ಹರಿವು ಇದ್ದರೆ, ಈ ವರ್ಷ 65,182 ಕ್ಯುಸೆಕ್ಗೆ ಏರಿಕೆಯಾಗಿದೆ. ಕಳೆದ ಹತ್ತು ವರ್ಷದ ಒಳ ಹರಿವು ಸರಾಸರಿ ಹೋಲಿಕೆ ಮಾಡಿದರೆ, 9106 ಕ್ಯುಸೆಕ್ ಮಾತ್ರ ಜಲಾಶಯದಲ್ಲಿ ಒಳ ಹರಿವು ಮಾತ್ರ ಇರುತ್ತಿತ್ತು. ಆದರೆ, ಈ ವರ್ಷ ಒಳಹರಿವು ಭಾರಿ ಏರಿಕೆಯಾಗಿದೆ. ಜಲಾಶಯದ ಮೇಲ್ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರತೊಡಗಿದೆ.