ಚಂದ್ರು ಕೊಂಚಿಗೇರಿ
ಮೈಲಾರಲಿಂಗೇಶ್ವರ ಜಾತ್ರೆಗೂ ಮುನ್ನವೇ ತುಂಗಭದ್ರೆಯ ಒಡಲು ಬತ್ತಿದೆ. ಹನಿ ನೀರು ಕೂಡಾ ಸಿಗುತ್ತಿಲ್ಲ. ಕಳೆದೊಂದು ವಾರದಿಂದ ನದಿ ಬರಿದಾಗಿದೆ. ತಾಲೂಕಿನ ಬಹುತೇಕ ಹಳ್ಳಿಗಳ ಜನರಿಗೆ ಇದೇ ಜೀವಜಲವಾಗಿದೆ. ಸಕಾಲದಲ್ಲಿ ಮಳೆ ಇಲ್ಲದೇ ನದಿ ಸಂಪೂರ್ಣ ಬತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಭದ್ರಾ ಜಲಾಶಯದ ನೀರನ್ನೇ ಎದುರು ನೋಡುತ್ತಿದ್ದಾರೆ. ಕಳೆದ ಫೆ. 5ರಂದು ರಾತ್ರಿಯಿಂದ ನಿತ್ಯ 2 ಸಾವಿರ ಕ್ಯುಸೆಕ್ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದರೆ ಈವರೆಗೂ ಮೈಲಾರಕ್ಕೆ ನೀರು ಬಂದಿಲ್ಲ.
ಫೆ. 16ರಿಂದ ಫೆ. 27ರ ವರೆಗೂ ಮೈಲಾರಲಿಂಗೇಶ್ವರ ಜಾತ್ರೆ 12 ದಿನಗಳ ಕಾಲ ನಡೆಯಲಿದೆ. ಜಾತ್ರೆ ಆರಂಭಕ್ಕೆ ಇನ್ನು ಮೂರೇ ದಿನ ಬಾಕಿ ಇದ್ದು, ಇನ್ನೂ ತುಂಗಭದ್ರಾ ನದಿಗೆ ನೀರು ಬಂದಿಲ್ಲ. ಫೆ. 26ರಂದು ಮೈಲಾರಲಿಂಗೇಶ್ವರ ಕಾರ್ಣಿಕ ನಡೆಯಲಿದೆ. ಫೆ. 23ರಿಂದಲೇ ಮೈಲಾರ ಗ್ರಾಮಕ್ಕೆ ಭಕ್ತರು ಎತ್ತಿನ ಚಕ್ಕಡಿ ಸೇರಿದಂತೆ ವಾಹನಗಳಲ್ಲಿ ಆಗಮಿಸುತ್ತಾರೆ. ಈ ಬಾರಿ 10 ಲಕ್ಷಕ್ಕೂ ಹೆಚ್ಚು ಭಕ್ತರು ಸೇರುವ ನಿರೀಕ್ಷೆ ಇದೆ.ಈಗಾಗಲೇ ತಾಲೂಕಿನ ಹರವಿ, ಕುರುವತ್ತಿ, ಮೈಲಾರ, ಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಸೇರಿದಂತೆ ಇನ್ನಿತರ ಕಡೆ ನದಿಯಲ್ಲಿ ನೀರಿಲ್ಲ. ಇದರಿಂದ ತಾಲೂಕಿನಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಜಾಕ್ವಾಲ್ಗಳಿಗೂ ನೀರಿನ ಲಭ್ಯತೆ ಕಡಿಮೆಯಾಗುತ್ತಿದೆ.
ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಚರಗಳಿಗೂ ಕುತ್ತು ಬಂದಿದೆ. ನದಿ ತೀರದ ಸಾಕಷ್ಟು ಕಡೆಗಳಲ್ಲಿನ ಗುಂಡಿಗಳಲ್ಲಿನ ನೀರನ್ನು ಕುಡಿಯಲು ಬಳಕೆ ಮಾಡುತ್ತಿದ್ದಾರೆ. ಆದರೆ ಆ ನೀರು ಬಹಳ ವಾಸನೆಯಿಂದ ಕೂಡಿದೆ. ಇಂತಹ ನೀರನ್ನು ಕುಡಿದರೆ ರೋಗರುಜಿನದ ಭಯದಲ್ಲಿ ಜನರಿದ್ದಾರೆ.
ತಾಲೂಕಿನ 26 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 507 ಕೊಳವೆ ಬಾವಿಗಳಿವೆ. ಇದರಲ್ಲಿ 401 ಕೊಳವೆ ಬಾವಿಗಳಲ್ಲಿ ನೀರಿನ ಲಭ್ಯತೆ ಇದೆ. ಉಳಿದಂತೆ 140 ಕೊಳವೆ ಬಾವಿಗಳು ಸಂಪೂರ್ಣ ಬತ್ತಿವೆ. ತಾಲೂಕಿನ ವಿವಿಧ ಕಡೆಗಳಲ್ಲಿರುವ ಕೆರೆಯಲ್ಲಿನ ನೀರು ಕಡಿಮೆಯಾಗುತ್ತಿದ್ದು, ಇದರಿಂದ ಅಕ್ಕಪಕ್ಕದ ಕೊಳವೆ ಬಾವಿಗಳಲ್ಲಿ ಅಂತರ್ಜಲವೂ ಇಳಿದಿದೆ.
ನೀರು ಬಿಡುಗಡೆ: ಕುಡಿಯುವ ನೀರಿನ ಬೇಡಿಕೆ ಹೆಚ್ಚಾಗಿದೆ. ಆದರೆ ಸಿಂಗಟಾಲೂರು ಬ್ಯಾರೇಜ್ನಲ್ಲಿ 0.595 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಇದರಲ್ಲಿ ಗದಗ, ಕೊಪ್ಪಳ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಕೊಟ್ಟೂರಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕಿದೆ. ಭದ್ರಾ ಜಲಾಶಯದಿಂದ ನಿತ್ಯ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆಯಾಗುತ್ತಿದೆ ಎಂದು ಸಿಂಗಟಾಲೂರು ಏತ ನೀರಾವರಿ ಯೋಜನೆಯ ಎಇಇ ರಾಘವೇಂದ್ರ ತಿಳಿಸಿದರು.