ಮುನಿರಾಬಾದ್: ಪ್ರಸಿದ್ಧ ಶ್ರೀ ಹುಲಿಗೆಮ್ಮ ದೇವಸ್ಥಾನದ ತುಂಗಭದ್ರಾ ನದಿ ತೀರದಲ್ಲಿ ಸೆ. 8ರಂದು ತುಂಗಾ ಆರತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಧರ್ಮದತ್ತಿ ಇಲಾಖೆಯ ಸಚಿವ ಕೆ.ಎಸ್. ಬಸವಂತಪ್ಪ ನುಡಿದರು.
ಕಳೆದ ವರ್ಷ ತುಂಗಾ ಆರತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ವರ್ಷ ಅದಕ್ಕಿಂತ ವಿಜೃಂಭಣೆಯಿಂದ ತುಂಗಾ ಆರತಿಯನ್ನು ಆಚರಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹುಲಿಗೆಮ್ಮ ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕಂಕಣ ಬದ್ಧರಾಗಿರುವುದಾಗಿ ಸಚಿವರು ತಿಳಿಸಿದರು.
ದೇವಸ್ಥಾನ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಗ್ರಾಮದಲ್ಲಿ ಬಸ್ ನಿಲ್ದಾಣ ಇಲ್ಲದಿರುವುದರಿಂದ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಹುಲಿಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಅದನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ದೇವಸ್ಥಾನ ಸಮಿತಿಯ ಸದಸ್ಯರು, ಗ್ರಾಮಸ್ಥರು, ಹಾಗೂ ಗ್ರಾಮದ ಹಿರಿಯರು ಸಚಿವರನ್ನು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಸಚಿವರು ತಿಳಿಸಿದರು.ದೇವಸ್ಥಾನದ ಅಭಿವೃದ್ಧಿಗೆ ನಿಟ್ಟಿನಲ್ಲಿ ಗ್ರಾಮಸ್ಥರು ಆಡಳಿತ ಮಂಡಳಿ ಸದಸ್ಯರು, ದೈವದವರು, ಜನಪ್ರತಿನಿಧಿಗಳು, ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.
ಅಮ್ಮನವರ ದರ್ಶನದ ನಂತರ ಸಚಿವರು ₹9.85 ಕೋಟಿ ವೆಚ್ಚದಲ್ಲಿ ಅಮ್ಮ ವಸತಿ ನಿಲಯದ 2 ಮತ್ತು 3 ಮೂರನೇ ಅಂತಸ್ತಿನ ಕಟ್ಟಡದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಇದಲ್ಲದೆ ₹3.4 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಹಿಂಭಾಗ ಹಾಗೂ ನದಿ ದಂಡೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 2 ಹೈಟೆಕ್ ಶೌಚಾಲಯಕ್ಕೆ ಭೂಮಿಪೂಜೆ ನೆರವೇರಿಸಿದರು.
ಸುಮಾರು 3 ಗಂಟೆಗೂ ಅಧಿಕಕಾಲ ದೇವಸ್ಥಾನದ ಆವರಣದಲ್ಲಿ ಕಳೆದ ಸಚಿವರು ತಾವು ಸೆಪ್ಟೆಂಬರ್ 8ರಂದು ತುಂಗಾ ಆರತಿ ನಿಮಿತ್ತ ಹುಲಿಗೆ ಗ್ರಾಮಕ್ಕೆ ಮತ್ತೆ ಬರುವುದಾಗಿ ತಿಳಿಸಿದರು. ಅಂದು ಗ್ರಾಮಸ್ಥರು ಹಾಗೂ ದೇವಸ್ಥಾನ ಸಮಿತಿಯ ಸದಸ್ಯರೊಂದಿಗೆ ದೇವಸ್ಥಾನದ ಅಭಿವೃದ್ಧಿ ಕುರಿತು ಮತ್ತೊಂದು ಸುತ್ತಿನ ಸಭೆ ನಡೆಸುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು.ಬಿಜೆಪಿಯ ಪಾದಯಾತ್ರೆ ರಾಜಕೀಯ ಪ್ರೇರಿತ
ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ದೇಶದಲ್ಲೇ ಇಂತಹ ಕಾಯ್ದೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ಹೇಳಿದರು.ಎಸ್ಸಿಪಿ, ಟಿಎಸ್ಪಿ ಕಾಯ್ದೆಯಡಿ ಆರಂಭದಲ್ಲಿ ಸುಮಾರು ₹25 ಸಾವಿರ ಕೋಟಿ ಅನುದಾನದಲ್ಲಿ ಯೋಜನೆ ಆರಂಭಿಸಲಾಗಿತ್ತು. ಅನುಷ್ಠಾನದಲ್ಲಿ ಸಣ್ಣಪುಟ್ಟ ಲೋಪಗಳಾಗಿರಬಹುದು. ಅವುಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದಾಗಲೇ 9ನೇ ಪರಿಚ್ಛೇದಕ್ಕೆ ಸೇರಿಸುವ ಅವಕಾಶವಿತ್ತು. ಹಾಗೆ ಮಾಡಿದ್ದರೆ ಕಾನೂನಾತ್ಮಕ ತೊಡಕುಗಳಿಲ್ಲದೆ ದಲಿತರಿಗೆ ಮೀಸಲಾತಿ ಸೌಲಭ್ಯ ದೊರೆಯುತ್ತಿತ್ತು. ಇದೀಗ ಕೇಂದ್ರದ ಮೇಲೆ ಒತ್ತಡ ಹೇರಿ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ. ಒಂದೆರಡು ಘಟನೆಗಳು ನಡೆಯುವುದು ಸಹಜ. ಅಂತಹ ಪ್ರಕರಣಗಳಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಕೆಪಿಎಸ್ಸಿ ಹಗರಣದ ಕುರಿತು ಕಾಂತಕುಮಾರ್ ಮಾಡಿರುವ ಆರೋಪಗಳ ಬಗ್ಗೆ ಸದ್ಯ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡ ಬಳಿಕ ಪ್ರತಿಕ್ರಿಯಿಸುವುದಾಗಿ ಹೇಳಿದರು.ಸಚಿವ ಬಸವರಾಜ ರಾಯರಡ್ಡಿ ಅವರು ‘ಇಸ್ಲಾಂ ಧರ್ಮ ಶ್ರೇಷ್ಠ’ ಎಂಬ ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಸವಂತಪ್ಪ, ರಾಯರಡ್ಡಿ ಅವರು ಈಗಾಗಲೇ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ ಎಂದರು.