ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ ಓವಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಎರಡನೇ ದಿನವಾದ ಭಾನುವಾರ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಷಟಲ್ ಬ್ಯಾಡ್ಮಿಂಟನ್, ಓಟದ ಸ್ಪರ್ಧೆ, ಮ್ಯೂಸಿಕಲ್ ಚೇರ್ ಸೇರಿದಂತೆ ಹಲವು ಕ್ರೀಡೆಗಳಲ್ಲಿ ಪತ್ರಕರ್ತರು ಹಾಗೂ ಕುಟುಂಬ ಸದಸ್ಯರು ಅತ್ಯುತ್ಸಾಹದಿಂದ ಪಾಲ್ಗೊಂಡು, ತಮ್ಮ ಕ್ರೀಡಾ ಸಾಮರ್ಥ್ಯ ಪ್ರದರ್ಶಿಸಿದರು.
ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.ಬಳಿಕ ಮಾತನಾಡಿದ ಶಾಸಕ ಕೆ. ಹರೀಶ್ ಗೌಡ, ಪತ್ರಕರ್ತರು ಹಾಗೂ ಕುಟುಂಬದವರು ಒಗ್ಗೂಡಿ ಕಾರ್ಯಕ್ರಮ ಮಾಡಿರುವುದು ಸಂತಸದ ಸಂಗತಿ. ಪತ್ರಕರ್ತರು ನಿತ್ಯವೂ ಒತ್ತಡದಲ್ಲಿ ಕೆಲಸ ಮಾಡುವುದು ನಿಜಕ್ಕೂ ಕಷ್ಟಕರ ಸಂಗತಿ. ಶ್ರಮವಹಿಸಿ ಕೆಲಸ ಮಾಡುವುದು ಸವಾಲಿನ ಸಂಗತಿ. ಡಿಜಿಟಲ್ ಮಾಧ್ಯಮ ಕೂಡ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಪತ್ರಕರ್ತರ ಸಂಘದ ಭವನ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಾಗವನ್ನು ನೀಡಿ, ಅನುವಾದ ನೀಡಿದ್ದಾರೆ. ಪತ್ರಕರ್ತರೊಂದಿಗೆ ನಾವು ಸದಾಕಾಲವೂ ಇರುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಪತ್ರಕರ್ತರು ಒಗ್ಗೂಡಿ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಬೇಕಿದೆ ಎಂದರು.
ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಮಾತನಾಡಿ, ಪತ್ರಕರ್ತರ ಕ್ರೀಡಾಕೂಟ ಇತರೆ ಎಲ್ಲಾ ಕ್ರೀಡಾಕೂಟಗಳಿಗಿಂತ ವಿಶೇಷವಾಗಿದೆ. ಪತ್ರಕರ್ತರು ತಮ್ಮ ಕೆಲಸದ ಒತ್ತಡದ ನಡುವೆ ವೈಯಕ್ತಿಕ ಜೀವನದ ಬಗ್ಗೆ ಗಮನವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಎಂಎಲ್ಸಿ ರಘು ಕೌಟಿಲ್ಯ, ಮಾಜಿ ಶಾಸಕ ಎಚ್.ಪಿ. ಮಂಜುನಾಥ್, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಎನ್.ಕೆ. ಲೋಕನಾಥ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಗ್ರಾಮಾಂತರ ಕಾರ್ಯದರ್ಶಿ ದಾ.ರಾ. ಮಹೇಶ್, ರಾಜು ಕಾರ್ಯ, ಪುನೀತ್, ಸೋಮಶೇಖರ್ ಚಿಕ್ಕಮರಳಿ, ಕೃಷ್ಣಕುಮಾರ್, ಜೆ. ಶಿವಣ್ಣ ಮೊದಲಾದವರು ಇದ್ದರು.